ನವದೆಹಲಿ: ಲೋಕಸಭೆ ಚುನಾವಣೆಯ ಫಲಿತಾಂಶ ಬಂದ ನಂತರ ಕಾಂಗ್ರೆಸ್ ಪಕ್ಷದ ಬಗ್ಗೆ ಯಾರೂ ಕೇಳುವುದಿಲ್ಲ. ರಾಹುಲ್ ಗಾಂಧಿ ದೇಶ ಬಿಟ್ಟು ಪಲಾಯನ ಮಾಡುತ್ತಾರೆ ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ‘ಆಪ್ ಕಿ ಅದಾಲತ್’ ಕಾರ್ಯಕ್ರಮದಲ್ಲಿ ರಜತ್ ಶರ್ಮಾ ಅವರೊಂದಿಗಿನ ಸಂದರ್ಶನದಲ್ಲಿ ಮಾತನಾಡಿದ ಯೋಗಿ ಆದಿತ್ಯನಾಥ್ ಉತ್ತರ ಪ್ರದೇಶದಲ್ಲಿ ಇಂಡಿಯಾ ಒಕ್ಕೂಟವು ಎಲ್ಲಾ ಸ್ಥಾನಗಳನ್ನು ಕಳೆದುಕೊಳ್ಳಲಿದೆ ಎಂದು ಹೇಳಿದ್ದಾರೆ.
“ಉತ್ತರ ಪ್ರದೇಶದಲ್ಲಿ ಬಿಜೆಪಿ ಸೋಲುತ್ತದೆ, ಕಾಂಗ್ರೆಸ್ ಮೈತ್ರಿಕೂಟ ಗರಿಷ್ಠ ಸ್ಥಾನಗಳನ್ನು ಪಡೆಯುತ್ತದೆ ಎಂದು ನಾನು ಲಿಖಿತವಾಗಿ ಬರೆದುಕೊಡುತ್ತೇನೆ” ಎಂಬ ಕನೌಜ್ ರ್ಯಾಲಿಯಲ್ಲಿನ ರಾಹುಲ್ ಗಾಂಧಿಯವರ ಹೇಳಿಕೆಗೆ ಪ್ರತಿಕ್ರಿಯಿಸಿದ ಸಿಎಂ ಯೋಗಿ ಆದಿತ್ಯನಾಥ್, ಇಂಡಿಯಾ ಮೈತ್ರಿಕೂಟವು ಎಲ್ಲಾ ಸ್ಥಾನಗಳನ್ನು ಕಳೆದುಕೊಳ್ಳಲಿದೆ, ಅವರು ದೇಶ ಬಿಟ್ಟು ಓಡಿ ಹೋಗುತ್ತಾರೆ ಎಂದು ರಾಹುಲ್ ಗಾಂಧಿಗೆ ನಾನು ಬರೆದುಕೊಡುತ್ತೇನೆ ಎಂದಿದ್ದಾರೆ.
403 ಸ್ಥಾನಗಳ ಉತ್ತರ ಪ್ರದೇಶ ವಿಧಾನಸಭೆಯಲ್ಲಿ ಕಾಂಗ್ರೆಸ್ ಕೇವಲ ಇಬ್ಬರು ಶಾಸಕರನ್ನು ಹೊಂದಿದೆ. ಮುಂದಿನ ಬಾರಿ ಅವರು ಈ ಎರಡು ಸ್ಥಾನಗಳನ್ನೂ ಕಳೆದುಕೊಳ್ಳುತ್ತಾರೆ. ನಾನು ರಾಹುಲ್ ಗಾಂಧಿ ಅವರನ್ನು ಕೇಳಲು ಬಯಸುತ್ತೇನೆ, ಅವರು ಉತ್ತರ ಪ್ರದೇಶದಲ್ಲಿ 80 ಸೀಟುಗಳನ್ನು ಗೆಲ್ಲುವ ವಿಶ್ವಾಸವಿದ್ದರೆ, ಅವರು ಏಕೆ ಹೋಗಿ ವಯನಾಡಿನಲ್ಲಿ ಸ್ಪರ್ಧಿಸಿದರು? ಅವರು ಏಕೆ ಅಮೇಥಿ ತೊರೆದು ರಾಯ್ ಬರೇಲಿಯಿಂದ ಸ್ಪರ್ಧಿಸಿದರು? ರಾಹುಲ್ ಗಾಂಧಿ ಕೇವಲ ಕನಸಿನ ಲೋಕದಲ್ಲಿ ಜೀವಿಸುತ್ತಿದ್ದಾರೆ ಎಂದು ಯೋಗಿ ಹೇಳಿದ್ದಾರೆ.