ಜೆಡಿಎಸ್ ಜಿಲ್ಲಾ ಘಟಕದ ಅಧ್ಯಕ್ಷ ಲಿಂಗೇಶ್ ಟೀಕೆ । ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ವಿರುದ್ಧ ಆಕ್ರೋಶ
- ಜಿಲ್ಲಾಧಿಕಾರಿ ಕಚೇರಿ ಎದುರು ದಿಕ್ಕಾರ ಘೋಷಣೆ
ಪ್ರತಿನಿಧಿ ವರದಿ ಹಾಸನ
ರಾಜ್ಯದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಜೆಡಿಎಸ್ ಕಾರ್ಯಕರ್ತರು ಹಾಗೂ ಮುಖಂಡರು ಜಿಲ್ಲಾಧಿಕಾರಿ ಕಚೇರಿ ಎದುರು ಮಂಗಳವಾರ ಪ್ರತಿಭಟನೆ ನಡೆಸಿದರು.
ನಗರದ ಹೇಮಾವತಿ ಪ್ರತಿಮೆ ಬಳಿ ಜಮಾಯಿಸಿದ ಜೆಡಿಎಸ್ನ ನೂರಾರು ಕಾರ್ಯಕರ್ತರು ಹಾಗೂ ಮುಖಂಡರು ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ಎತ್ತಿನಗಾಡಿಯೊಂದಿಗೆ ಟ್ರ್ಯಾಕ್ಟರ್ ಅನ್ನು ಹಗ್ಗದಲ್ಲಿ ಕಟ್ಟಿ ಎಳೆಯುವ ಮೂಲಕ ಮೆರವಣಿಗೆಯಲ್ಲಿ ಸಾಗಿದ ಪ್ರತಿಭಟನಾಕಾರರು ಎನ್.ಆರ್.ಸರ್ಕಲ್ ಮೂಲಕ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿ ಕೆಲಕಾಲ ಧರಣಿ ನಡೆಸಿದರು.
ಜೆಡಿಎಸ್ ಜಿಲ್ಲಾ ಘಟಕದ ಅಧ್ಯಕ್ಷ ಲಿಂಗೇಶ್ ಮಾತನಾಡಿ, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ರಾಜ್ಯದ ಸಂಪನ್ಮೂಲವನ್ನು ಕೇವಲ ಗ್ಯಾರಂಟಿ ಯೋಜನೆಗಳಿಗೆ ಬಳಕೆ ಮಾಡಿಕೊಳ್ಳುತ್ತಿದೆ. ಆದರೆ ಈ ಗ್ಯಾರಂಟಿ ಯೋಜನೆಗಳು ಸಮರ್ಪಕವಾಗಿ ಜಾರಿಯಾಗಿಲ್ಲ ಏಪ್ರಿಲ್ ತಿಂಗಳ ಗೃಹಲಕ್ಷ್ಮಿ ಯೋಜನೆಯ ಹಣ ಫಲಾನುಭವಿಗಳಿಗೆ ಬಂದಿಲ್ಲ ಎಂದು ದೂರಿದರು.
ಶಕ್ತಿ ಯೋಜನೆಯು ಸಹ ಹಳ್ಳ ಹಿಡಿದಿದ್ದು, ಬಸ್ಗಳ ಕೊರತೆಯಿಂದ ಪ್ರಯಾಣಿಕರು ಪರದಾಡುವಂತಾಗಿದೆ. ಹೊಸ ಬಸ್ಗಳನ್ನು ಖರೀದಿಸಿ ಸುಗಮ ಸಂಚಾರಕ್ಕೆ ವ್ಯವಸ್ಥೆ ಮಾಡಲಾಗುವುದು ಎಂದು ಸಾರಿಗೆ ಸಚಿವರು ಹೇಳಿದ್ದಾರೆ. ಆದರೆ ಇದುವರೆಗೂ ಅನುಷ್ಠಾನವಾಗಿಲ್ಲ. ರೈತರಿಗೆ ಅಗತ್ಯವಾದ ಬಿತ್ತನೆ ಬೀಜದ ಬೆಲೆ ಏರಿಕೆ ಮಾಡುವ ಮೂಲಕ ರೈತ ವಿರೋಧಿ ಕೆಲಸವನ್ನು ಕಾಂಗ್ರೆಸ್ ಸರ್ಕಾರ ಮಾಡಿದೆ ಎಂದು ಆರೋಪಿಸಿದರು.
ಅಧಿಕಾರ ಹಿಡಿಯುವ ಸಂದರ್ಭದಲ್ಲಿ ರೈತ, ದಲಿತ, ಬಡವರ ಪರ ಎಂದು ಹೇಳುತ್ತಿದ್ದ ಸರ್ಕಾರ ಪ್ರಸ್ತುತ ಜನ ವಿರೋಧಿ ಕೆಲಸಗಳನ್ನು ಮಾಡುತ್ತಿದೆ. ಒಂದು ಕಡೆ ಉಚಿತವಾಗಿ ಕೊಟ್ಟು ಮತ್ತೊಂದು ಕಡೆ ಬೆಲೆ ಏರಿಕೆ ಬಿಸಿ ಮೂಲಕ ಜನರನ್ನು ಶೋಷಣೆ ಒಳಪಡಿಸುತ್ತಿದೆ. ಇದು ಜನ ವಿರೋಧಿ ಸರ್ಕಾರವಾಗಿದೆ ಎಂದು ಟೀಕಿಸಿದರು.
ಮಾಜಿ ಶಾಸಕ ಎಚ್.ಕೆ.ಕುಮಾರಸ್ವಾಮಿ ಮಾತನಾಡಿ, ಕಾಂಗ್ರೆಸ್ ಸರ್ಕಾರ ಇತ್ತೀಚೆಗೆ ಡೀಸೆಲ್ ಹಾಗೂ ಪೆಟ್ರೋಲ್ ಬೆಲೆ ಏರಿಕೆ ಮಾಡುವ ಮೂಲಕ ಬಡವರಿಗಲ್ಲದೆ ಶ್ರೀಮಂತರಿಗೂ ಬಿಸಿ ಮುಟ್ಟಿಸಿದೆ. ಬೆಲೆ ಏರಿಕೆ ನಂತರವೂ ಬೇರೆ ರಾಜ್ಯಗಳಿಗೆ ಹೋಲಿಸಿದರೆ ನಮ್ಮಲ್ಲಿ ಇಂಧನ ದರ ಕಡಿಮೆ ಇದೆ ಎಂದು ಸಮರ್ಥಿಸಿಕೊಳ್ಳುತ್ತಿರುವ ಸಿಎಂ ನಿಲುವು ಹಾಸ್ಯಾಸ್ಪದ. ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಮಾಡಿದ ನಂತರ ಅಗತ್ಯ ವಸ್ತುಗಳ ಬೆಲೆಯು ಏರಿಕೆಯಾಗುವುದರಿಂದ ಬಡ ಹಾಗೂ ಸಾಮಾನ್ಯ ವರ್ಗದ ಜನರಿಗೆ ತೀವ್ರ ಆರ್ಥಿಕ ಹೊರೆ ಉಂಟಾಗಲಿದೆ. ಈ ಬಗ್ಗೆ ಸರ್ಕಾರ ಅಗತ್ಯ ಚಿಂತನೆ ಮಾಡಬೇಕಿದೆ ಎಂದರು.
ಹಿಂದೆಲ್ಲ ಕೇಂದ್ರ ಸರ್ಕಾರ ಬೆಲೆ ಏರಿಕೆ ಮಾಡಿ ಬಡ ಜನರ ಜೀವ-ಜೀವನದೊಂದಿಗೆ ಚೆಲ್ಲಾಟ ಆಡುತ್ತಿದೆ ಎಂದು ಬೊಬ್ಬೆ ಹೊಡೆಯುತ್ತಿದ್ದ ಕಾಂಗ್ರೆಸ್, ಈಗ ಮಾಡಿರುವುದೇನು ಎಂಬ ಪ್ರಶ್ನೆಗೆ ಉತ್ತರ ನೀಡಬೇಕು ಎಂದು ಒತ್ತಾಯಿಸಿದರು.
ಸಿದ್ದರಾಮಯ್ಯ ನೇತೃತ್ವದ ಸರ್ಕಾರ ರಚನೆಯಾದ ನಂತರ ರಾಜ್ಯದ ಯಾವುದೇ ಶಾಸಕರಿಗೂ ಸಮರ್ಪಕ ಅನುದಾನವನ್ನು ಬಿಡುಗಡೆ ಮಾಡಿಲ್ಲ. ಇದರಿಂದ ಬಹುತೇಕ ಜಿಲ್ಲೆಗಳು ಅಭಿವೃದ್ಧಿ ಶೂನ್ಯವಾಗಿದೆ ಎಂದು ಆರೋಪಿಸಿದ ಅವರು, ಬಡ ಹಾಗೂ ಮಧ್ಯಮ ವರ್ಗದ ಜನರಿಗೆ ಹೊರೆಯಾಗಿರುವ ಬೆಲೆ ಏರಿಕೆ ನೀತಿಯನ್ನು ರಾಜ್ಯ ಸರ್ಕಾರ ಕೂಡಲೇ ಹಿಂಪಡೆಯಬೇಕು ಎಂದು ಆಗ್ರಹಿಸಿದರು.
ನಿಮ್ಮದೇ ಸಂಪುಟದ ಹಲವು ಸಚಿವರು ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸುವುದಕ್ಕಾಗಿಯೇ ಇಂಧನದ ಮೇಲಿನ ತೆರಿಗೆ ಹೆಚ್ಚಳ ಮಾಡಲಾಗಿದೆ ಎಂದು ಹೇಳಿದ್ದಾರೆ. ಇದನ್ನು ನೋಡಿದರೆ ಪೂರ್ವಾಪರ ಯೋಚಿಸದೇ, ಸಂಪನ್ಮೂಲ ಕ್ರೋಢಿಕರಣ ಮಾಡಿಕೊಳ್ಳದೆ ನೀವು ಗ್ಯಾರಂಟಿ ಯೋಜನೆಗಳನ್ನು ಘೋಷಣೆ ಮಾಡಿದ್ದೀರಿ ಎಂದು ಇದರಿಂದ ತಿಳಿದು ಬರುತ್ತದೆ ಎಂದರು.
ಶಾಸಕ ಎಚ್.ಪಿ.ಸ್ವರೂಪ್, ಜೆಡಿಎಸ್ ವಕ್ತಾರ ಹೊಂಗೆರೆ ರಘು, ಜಿ.ಪಂ. ಮಾಜಿ ಅಧ್ಯಕ್ಷ ಬಿ.ಆರ್.ಸತ್ಯನಾರಾಯಣ, ಜೆಡಿಎಸ್ ತಾಲೂಕು ಅಧ್ಯಕ್ಷ ಎಸ್.ದ್ಯಾವೇಗೌಡ, ಮೊಸಳೆ ಹೊಸಹಳ್ಳಿ ಚಂದ್ರೇಗೌಡ, ನಗರಸಭೆ ಸದಸ್ಯರಾದ ಚಂದ್ರೇಗೌಡ, ಸೈಯದ್ ಅಕ್ಬರ್, ಯೋಗೇಂದ್ರ ಬಾಬು, ಅಮೀರ್ ಜಾನ್, ಬಟ್ಟೆ ಗೋಪಾಲ್ ಇನ್ನಿತರರಿದ್ದರು.