ಪ್ರತಿನಿಧಿ ವರದಿ ಹಾಸನ
ಜೂ.24 ರಿಂದ ಜು.5 ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ-3 ಜಿಲ್ಲೆಯ 08 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು, ಸರ್ಕಾರದ ಮಾರ್ಗಸೂಚಿಯಂತೆ ಅಧಿಕಾರಿಗಳು ಮುತುವರ್ಜಿವಹಿಸಿ ಪರೀಕ್ಷೆ ನಡೆಸುವಂತೆ ಅಪರ ಜಿಲ್ಲಾಧಿಕಾರಿ ಕೆ.ಟಿ.ಶಾಂತಲಾ ಸೂಚಿಸಿದ್ದಾರೆ.
ಜಿಲ್ಲಾಧಿಕಾರಿ ಕಚೇರಿಯಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ಪೂರ್ವ ಸಿದ್ದತೆ ಕುರಿತು ನಡೆದ ಸಭೆಯಲ್ಲಿ ಮಾತನಾಡಿದ ಅವರು, 8 ಪರೀಕ್ಷಾ ಕೇಂದ್ರಗಳಿಂದ ಒಟ್ಟು 1359 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಪರೀಕ್ಷೆಗಳನ್ನು ಸಮಗ್ರತೆ, ಪಾವಿತ್ರತೆ ಮತ್ತು ಗೌಪ್ಯತೆಯಿಂದ ವ್ಯವಸ್ಥಿತವಾಗಿ ನಡೆಸಲು ಎಲ್ಲ ಪರೀಕ್ಷಾ ಕೇಂದ್ರಗಳಲ್ಲಿ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ, ಪರೀಕ್ಷೆಗಳು ಹೆಚ್ಚು ಪಾರದರ್ಶಕವಾಗಿ ನಡೆಯಲು ಪರೀಕ್ಷಾ ಕೇಂದ್ರಗಳಲ್ಲಿ ಸಿ.ಸಿ ಕ್ಯಾಮರ ಕಣ್ಣಾವಲು ವ್ಯವಸ್ಥೆಯನ್ನು ಹಾಗೂ ಪರೀಕ್ಷಾ ಕೇಂದ್ರದ ಒಳಗೆ ಮತ್ತು ಹೊರಗೆ ಅನುಮಾನಸ್ಪದ ವ್ಯಕ್ತಿಗಳ ಚಲನವಲನ ವೀಕ್ಷಣೆಗಾಗಿ ವೆಬ್ ಕಾಸ್ಟಿಂಗ್ ಕಣ್ಗಾವಲು ವ್ಯವಸ್ಥೆಯನ್ನು ಮಾಡಲಾಗಿದೆ ಎಂದರು.
8 ಪರೀಕ್ಷಾ ಕೇಂದ್ರಗಳಿಗೂ ಸಹ ಮುಖ್ಯ ಅಧೀಕ್ಷಕರನ್ನು ಮತ್ತು ವಿಶೇಷ ಜಾಗೃತದಳ ಸದಸ್ಯರನ್ನು ನೇಮಿಸಲಾಗಿದೆ. ಜಿಲ್ಲಾ ಹಂತದಲ್ಲಿ ಜಿಲ್ಲಾ ಜಾಗೃತದಳ ಸ್ವತಂತ್ರವಾಗಿ ಕಾರ್ಯನಿರ್ವಹಿಸಲಿದೆ, ಪರೀಕ್ಷಾ ದಿನಗಳಂದು ಪರೀಕ್ಷಾ ಕೇಂದ್ರಗಳ ಸುತ್ತ ಸಿ.ಆರ್.ಪಿ.ಸಿ ಸೆಕ್ಷನ್ 144 ರಡಿ ನಿಷೇಧಾಜ್ಞೆಯನ್ನು ಜಾರಿಗೊಳಿಸಲಾಗಿದೆ, ಜಿಲ್ಲಾ ಖಜಾನೆಯಿಂದ ಗೌಪ್ಯ ಲಕೋಟೆಗಳನ್ನು ತಹಶೀಲ್ದಾರ್, ಕ್ಷೇತ್ರ ಶಿಕ್ಷಣಾಧಿಕಾರಿಗಳು, ಮತ್ತು ಪ್ರಾಂಶುಪಾಲರನ್ನೊಳಗೊಂಡ ತ್ರಿಸದಸ್ಯ ಸಮಿತಿಯವರು ಶಸ್ತ್ರಸಜ್ಜಿತ ಪೊಲೀಸ್ ಸಿಬ್ಬಂದಿಗಳ ಸುರಕ್ಷತೆಯಲ್ಲಿ ಪರೀಕ್ಷಾ ಕೇಂದ್ರಕ್ಕೆ ವಿತರಿಸಲಿದ್ದಾರೆ. ಈ ವಾಹನಗಳಿಗೆ ಜಿ.ಪಿ.ಎಸ್ ಟ್ರ್ಯಾಕಿಂಗ್ ವ್ಯವಸ್ಥೆ ಮಾಡಲಾಗಿದೆ.
ಪ್ರತೀ ಪರೀಕ್ಷಾ ಕೇಂದ್ರಗಳಲ್ಲಿಯೂ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ, ದ್ವಿತೀಯ ಪಿಯುಸಿ ಪರೀಕ್ಷೆ-3 ಕ್ಕೆ ಹಾಜರಾಗುವ ವಿದ್ಯಾರ್ಥಿಗಳಿಗೆ ಪರೀಕ್ಷಾ ದಿನಗಳಂದು ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ, ಪ್ರತೀ ಪರೀಕ್ಷಾ ಕೇಂದ್ರಗಳಲ್ಲಿಯೂ ಕುಡಿಯುವ ನೀರು ಹಾಗೂ ಅತ್ಯಧಿಕ ತಾಪಮಾನ ಮತ್ತು ಇತರೆ ಕಾರಣಗಳಿಂದ ಉದ್ಭವಿಸುವ ತುರ್ತು ವೈದ್ಯಕೀಯ ನಿರ್ವಹಣೆಗಾಗಿ ಆರೋಗ್ಯ ಸಹಾಯಕರನ್ನು ನೇಮಿಸಲಾಗಿದೆ ಎಂದು ತಿಳಿಸಿದರು.
ಶಾಲಾ ಶಿಕ್ಷಣ ಇಲಾಖೆ(ಪದವಿ ಪೂರ್ವ) ಉಪನಿರ್ದೇಶಕ ಮಹಾಲಿಂಗಯ್ಯ ಸಿ.ಎನ್. ಮತ್ತಿತರರು ಹಾಜರಿದ್ದರು.