ಕರ್ನಾಟಕ ಗೃಹ ಮಂಡಳಿಯ ಅಧ್ಯಕ್ಷ ಕೆ.ಎಂ.ಶಿವಲಿಂಗೇಗೌಡ ಒತ್ತಾಯ
ಪ್ರತಿನಿಧಿ ವರದಿ ಅರಸೀಕೆರೆ
ಎತ್ತಿನಹೊಳೆ ಯೋಜನೆಯ ಅಭಿವೃದ್ಧಿ ಸಂದರ್ಭದಲ್ಲಿ ಆಗುವ ಅನಾಹುತಗಳಿಗೆ ಅಧಿಕಾರಿಗಳೇ ಜವಾಬ್ದಾರಿ ಹೊತ್ತು ಪರಿಹಾರವನ್ನು ನೀಡುವಂತೆ ಶಾಸಕ ಹಾಗೂ ಕರ್ನಾಟಕ ಗೃಹ ಮಂಡಳಿಯ ಅಧ್ಯಕ್ಷ ಕೆ.ಎಂ.ಶಿವಲಿಂಗೇಗೌಡ ಹೇಳಿದರು.
ತಾಲೂಕಿನ ಮುದುಡಿ ಗ್ರಾಮದ ಸಮೀಪದ ಶಂಕರಾಪುರ ಕಾವಲು ಗ್ರಾಮದ ರಾಷ್ಟ್ರೀಯ ಹೆದ್ದಾರಿ 206 ಬಳಿ ಎತ್ತಿನಹೊಳೆ ಕಾಮಗಾರಿ ಪರಿಶೀಲನೆ ನಡೆಸಿ ಮಾತನಾಡಿದರು.
ರೈತರ ಜೀವನ ಮಟ್ಟ ಉತ್ತಮಗೊಳ್ಳಲಿ, ಅಂತರ್ಜಲ ಮಟ್ಟ ಹೆಚ್ಚಳವಾಗಲಿ ಎಂಬ ಗುರಿಯನ್ನು ಹೊಂದಿ ಎತ್ತಿನಹೊಳೆ ಯೋಜನೆಯನ್ನು ಪ್ರಾರಂಭಿಸಲಾಗಿದೆ. ಅಲ್ಲದೆ ಈ ಯೋಜನೆಯ ಮೂಲಕ ಕೆರೆಗಳಿಗೆ ನೀರನ್ನು ತರುವ ಸಂದರ್ಭದಲ್ಲಿ ರೈತರಿಗೆ ತೊಂದರೆಯಾಗದಂತೆ ನೋಡಿಕೊಳ್ಳಬೇಕು. ಅಭಿವೃದ್ಧಿ ಸಂದರ್ಭದಲ್ಲಿ ಕೃಷಿಕನ ಬೋರ್ ವೆಲ್ ಗಳು ಅಡ್ಡ ಬಂದರೆ, ತೆಂಗಿನ ಮರ, ಇತರೆ ಮರಗಳಿದ್ದರೇ ಪರಿಹಾರ ಕೊಡಬೇಕು. ಜತೆಯಲ್ಲಿ ಬಂಡೆಗಳನ್ನು ಒಡೆಯುವ ಸಂದರ್ಭದಲ್ಲಿ ಡೈನಮೆಟ್ ಇಟ್ಟು ಹೊಡೆದಾಗ ಹತ್ತಿರದ ಮನೆಗಳು ಬಿರುಕುಗೊಳ್ಳದಂತೆ ಮುನ್ನೆಚ್ಚರಿಕೆ ತೆಗೆದುಕೊಳ್ಳಬೇಕು. ಒಂದೆಡೆ ತೊಂದರೆಯಾದರೇ ಸಮಸ್ಯೆಗೆ ಸ್ಪಂದಿಸುವಂತೆ ಅಧಿಕಾರಿಗಳಿಗೆ ಎಚ್ಚರಿಕೆಯನ್ನು ನೀಡಲಾಗಿದೆ ಎಂದರು.
ಸರ್ಕಾರ ಈ ಯೋಜನೆಯನ್ನು ಪೂರ್ಣಗೊಳಿಸುವ ನಿಟ್ಟಿನಲ್ಲಿ ಹೆಚ್ಚು ಆಸಕ್ತಿ ತೋರಿದ್ದು, ಕೆಲವೇ ತಿಂಗಳುಗಳಲ್ಲಿ ಪೂರ್ಣಗೊಳ್ಳಲಿದೆ. ಮೊದಲು ಹಾರನಹಳ್ಳಿ ಕೆರೆಗೆ ನೀರು ಬರಲಿದ್ದು, ನಂತರ ಎಲ್ಲ ಕೆರೆಗಳು ಭರ್ತಿಯಾಗಲಿದೆ ಎಂದು ಹೇಲಿದರು.
ಗಂಡಸಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೆಟ್ರೋಬಾಬು, ಇಲಾಖೆಯ ಅಧಿಕಾರಿಗಳು, ಗ್ರಾಮಸ್ಥರು, ಸ್ಥಳೀಯ ಕಾರ್ಯಕರ್ತರು ಉಪಸ್ಥಿತರಿದ್ದರು.