ಪ್ರತಿನಿಧಿ ವರದಿ ಹನೂರು
ಅಪರಿಚಿತ ವಾಹನ ಡಿಕ್ಕಿ ಹೊಡೆದು ತೀವ್ರವಾಗಿ ಗಾಯಗೊಂಡಿದ್ದ ಬೈಕ್ ಸವಾರ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಹನೂರು ಪಟ್ಟಣದ ನಿವಾಸಿ ಗುಜರಿ ವ್ಯಾಪಾರಿ ಗೋವಿಂದ ನಾಯ್ಡು (೫೮) ಮೃತರು. ಗುಜರಿ ವ್ಯಾಪಾರ ಮಾಡಿಕೊಂಡು ಮಂಗಲ ಗ್ರಾಮದಿಂದ ಹನೂರು ಪಟ್ಟಣಕ್ಕೆ ಆಗಮಿಸುತ್ತಿದ್ದ ಗೋವಿಂದ ನಾಯ್ಡು ಅವರಿಗೆ ಮಲೆ ಮಹದೇಶ್ವರ ಬೆಟ್ಟದಿಂದ ಕೊಳ್ಳೇಗಾಲಕ್ಕೆ ಹೋಗುತ್ತಿದ್ದ ಅಪರಿಚಿತ ವಾಹನ ಡಿಕ್ಕಿ ಹೊಡೆದು ವಾಹನ ನಿಲ್ಲಿಸದೆ ಪರಾರಿಯಾಗಿದ್ದ. ಈ ಸಂದರ್ಭ ಅಪಘಾತದಲ್ಲಿ ಗಾಯಗೊಂಡಿದ್ದ ಗೋವಿಂದ ನಾಯ್ಡು ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಗುರುವಾರ ತಡರಾತ್ರಿ ಮೃತಪಟ್ಟಿದ್ದಾರೆ. ಈ ಸಂಬಂಧ ಹನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇನ್ನು ದ್ವಿಚಕ್ರ ವಾಹನ ಸವಾರನಿಗೆ ಡಿಕ್ಕಿ ಹೊಡೆದು ಪರಾರಿಯಾಗಿರುವ ವಾಹನ ಯಾವುದು, ಯಾವ ಕಡೆ ಹೋಗಿದೆ ಎಂಬುದರ ಬಗ್ಗೆ ಮುಖ್ಯ ರಸ್ತೆಯಲ್ಲಿರುವ ಸಿಸಿಟಿವಿಗಳ ಪರಿಶೀಲನೆ ನಡೆಸಲಾಗುತ್ತಿದೆ ಎಂದು ವೃತ್ತ ನಿರೀಕ್ಷಕ ಶಶಿಕುಮಾರ್ ತಿಳಿಸಿದರು.