ಪ್ರತಿನಿಧಿ ವರದಿ ಮೈಸೂರು:
ರಾಜ್ಯದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳ ಅಭಿವೃದ್ಧಿಗಾಗಿ ಎಸ್ಸಿಸಿ ಮತ್ತು ಟಿಎಸ್ಪಿ ಯೋಜನೆಯಡಿ ಮೀಸಲಿಟ್ಟಿರುವ ಹಣವನ್ನು ದುರ್ಬಳಕೆ ಮಾಡುತ್ತಿರುವುದನ್ನು ಖಂಡಿಸಿ ಬಹುಜನ ಸಮಾಜ ಪಕ್ಷದಿಂದ ಪುರಭವನ ಮುಂಭಾಗ ಅಂಬೇಡ್ಕರ್ ಪ್ರತಿಮೆ ಬಳಿ ಪ್ರತಿಭಟನೆ ನಡೆಸಲಾಯಿತು.
ರಾಜ್ಯದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳ ಜನರನ್ನು ಸಬಲರನ್ನಾಗಿ ಮಾಡಲು ರಾಜ್ಯ ಸರ್ಕಾರ ೨೦೧೩-೧೪ರಲ್ಲಿ ಎಸ್ಸಿಪಿ ಮತ್ತು ಟಿಎಸ್ಪಿ ಕಾಯ್ದೆ ರೂಪಿಸಿತು. ಈ ಯೋಜನೆ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗಗಳ ಅಭಿವೃದ್ಧಿಗೆ ಪೂರಕವಾಗಿದೆ ಎಂಬ ಆಶಾಭಾವನೆ ಉಂಟಾಗಿತ್ತು. ಆದರೆ, ರಾಜ್ಯವನ್ನಾಳಿದ ಕಾಂಗ್ರೆಸ್, ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ಈ ಅಧಿನಿಯಮದ ಆಶಯಗಳನ್ನು ಜಾರಿಗೊಳಿಸದೆ ಗಾಳಿಗೆ ತೂರಿವೆ. ೨೦೧೪-೧೫ರಿಂದ ೧೦ ವರ್ಷಗಳಲ್ಲಿ ೨.೯೪ ಲಕ್ಷ ಕೋಟಿ ಹಣವನ್ನು ಈ ಉದ್ದೇಶಕ್ಕೆ ಮೀಸಲಿಡಲಾಗಿದೆ. ಆದರೆ, ಈ ಪೈಕಿ ಕೇವಲ ಶೇ.೧೦ ರಷ್ಟು ಹಣವನ್ನೂ ಎಸ್ಸಿ, ಎಸ್ಟಿಗಳಿಗೆ ತಲುಪಿಸದೆ ಸರ್ಕಾರಗಳು ಮಹಾ ದ್ರೋಹ ಮಾಡಿವೆ ಎಂದು ಕಿಡಿ ಕಾರಿದರು.
ಯೋಜನೆ ೨೫,೩೯೮ ಕೋಟಿ ಹಣವನ್ನು ಕಾಂಗ್ರೇಸ್ ಸರ್ಕಾರ ಗ್ಯಾರಂಟಿ ಯೋಜನೆಗಳಿಗೆ ಬಳಸಿದೆ. ಹಿಂದಿನ ಬಿಜೆಪಿ ಸರ್ಕಾರ ಸುಮಾರು ೧೯ ಸಾವಿರ ಕೋಟಿ ಹಣವನ್ನು ಅನ್ಯ ಯೋಜನೆಗಳಿಗೆ ದುರ್ಬಳಕೆ ಮಾಡಿಕೊಂಡಿದೆ. ಅಲ್ಲದೆ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ೧೮೭ ಕೋಟಿ ಹಗರಣ ನಡೆದಿದೆ. ಜತೆಗೆ ಸರ್ಕಾರವೇ ಹೇಳಿರುವಂತೆ ಬಿಜೆಪಿ ಆಡಳಿತದಲ್ಲಿ ಭೋವಿ ಅಭಿವೃದ್ಧಿ ನಿಗಮ, ಡಾ.ಅಂಬೇಡ್ಕರ್ ಅಭಿವೃದ್ಧಿ ನಿಗಮ, ಆದಿಜಾಂಭವ ಅಭಿವೃದ್ಧಿ ನಿಗಮಗಳಲ್ಲಿ ಅವ್ಯವಹಾರ ನಡೆದಿದೆ. ಸರ್ಕಾರದ ಅಂಕಿಅಂಶಗಳ ಪ್ರಕಾರ ಇದೂವರೆಗೂ ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಸರ್ಕಾರ ೭೦ ಸಾವಿರ ಕೋಟಿ ಹಣವನ್ನು ದುರ್ಬಳಕೆ ಮಾಡಿಕೊಂಡಿವೆ ಎಂದು ದೂರಿದರು.
ಎಸ್ಸಿಪಿ ಮತ್ತು ಟಿಎಸ್ಪಿ ಕಾಯ್ದೆಯಲ್ಲಿ ರೂಪಿಸಿರುವ ಯೋಜನೆಗಳು ನೇರವಾಗಿ ಎಸ್ಸಿ, ಎಸ್ಟಿಗಳಿಗೆ ತಲುಪುವಂತೆ ಮಾಡಬೇಕು. ಈ ಮೀಸಲು ಹಣವನ್ನು ಅನ್ಯ ಯೋಜನೆಗಳಿಗೆ ದುರ್ಬಳಕೆ ಮಾಡಿರುವವರನ್ನು ಶಿಕ್ಷೆಗೆ ಗುರಿಪಡಿಸಬೇಕು. ಈಗಾಗಲೇ ದುರ್ಬಳಕೆ ಮಾಡಿಕೊಂಡಿರುವ ಹಣವನ್ನು ಎಸ್ಸಿಪಿ ಮತ್ತು ಟಿಎಸ್ಪಿ ಖಾತೆಗೆ ಹಿಂತಿರುಗಿಸಲು ಆದೇಶಿಸಬೇಕೆಂದು ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ನಗರಾಧ್ಯಕ್ಷ ಸಿ.ಶ್ರೀನಿವಾಸಪ್ರಸಾದ್, ಜಿಲ್ಲಾ ಉಪಾಧ್ಯಕ್ಷ ಭರತ್ಗೌಡ, ಜಿಲ್ಲಾ ಉಸ್ತುವಾರಿ ಚಂದ್ರಶೇಖರ್.ಪಿ, ಸಂಯೋಜಕ ದಂಡಿಕೆರೆ ಬಸವಣ್ಣ, ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್, ಖಜಾಂಚಿ ಬಿ.ಮಹದೇವಸ್ವಾಮಿ ಇತರರಿದ್ದರು.