– ಹಗರಣದ ಕುರಿತು ದಾಖಲೆಯೊಂದಿಗೆ ಚರ್ಚೆಗೆ ಬರಲು ಆಹ್ವಾನ
– ಬಿಎಸ್ವೈ, ವಿಜಯೇಂದ್ರ ವಿರುದ್ಧ ಪ್ರತಿಭಟನಾಕಾರರ ಕಿಡಿ
ಪ್ರತಿನಿಧಿ ವರದಿ ಮೈಸೂರು
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ)ದ ಹಗರಣದ ಕುರಿತು ಆಡಳಿತಾರೂಢ ಕಾಂಗ್ರೆಸ್ ಹಾಗೂ ಪ್ರತಿಪಕ್ಷಗಳಾದ ಬಿಜೆಪಿ-ಜೆಡಿಎಸ್ ನಡುವೆ ಆರೋಪ-ಪ್ರತ್ಯಾರೋಪಗಳು ಮುಂದುವರಿದಿದೆ. ಹಗರಣದ ಕುರಿತು ಕಾಂಗ್ರೆಸ್ ಹಾಗೂ ಬಿಜೆಪಿ ಮತ್ತೊಂದು ಹೋರಾಟ ನಡೆಸಲು ತಂತ್ರಗಾರಿಕೆ ಮಾಡುತ್ತಿರುವ ನಡುವೆಯೇ 2021ರಲ್ಲಿ ಮುಡಾದಲ್ಲಿ ನಡೆದ ಬ್ರಹ್ಮಾಂಡ ಭ್ರಷ್ಟಾಚಾರ ಕುರಿತು ಸಾರ್ವಜನಿಕ ಚರ್ಚೆಗೆ ಬರುವಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರಿಗೆ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಜಾಗೃತ ವೇದಿಕೆ ವತಿಯಿಂದ ಪತ್ರ ಚಳವಳಿ ನಡೆಸಲಾಯಿತು.
ನಗರದ ಮಹಾನಗರ ಪಾಲಿಕೆ ಮುಂಭಾಗದ ಅಂಚೆಪೆಟ್ಟಿಗೆಗೆ ಪೋಸ್ಟ್ಕಾರ್ಡ್ ಹಾಕಿ ಪ್ರತಿಭಟನೆ ನಡೆಸುವ ಮೂಲಕ ಮುಡಾ ಹಗರಣದ ಚರ್ಚೆಗೆ ಬರುವಂತೆ ಆಹ್ವಾನಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಬಿಜೆಪಿ, ಜೆಡಿಎಸ್ ರಾಜಕೀಯ ಹುನ್ನಾರ ಮಾಡುತ್ತಿವೆ. ಹೇಗಾದರೂ ಮಾಡಿ ಸಿದ್ದರಾಮಯ್ಯ ಅವರ ವರ್ಚಸ್ಸಿಗೆ ಧಕ್ಕೆ ತಂದು ಅವರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸುವ ಹುನ್ನಾರ ಮಾಡುತ್ತಿವೆ. ಇದಕ್ಕಾಗಿ ಕೇಂದ್ರ ಬಿಜೆಪಿ ನಾಯಕರು ವಿಜಯೇಂದ್ರ ಅವರಿಗೆ ಸುಪಾರಿ ಕೊಟ್ಟಿದ್ದಾರೆ. ಆ ಸುಪಾರಿಯಂತೆ ವಿಜಯೇಂದ್ರ ಮತ್ತು ಜೆಡಿಎಸ್ ನಾಯಕರು ಸಿದ್ದರಾಮಯ್ಯ ವಿರುದ್ಧ ಪಿತೂರಿ ನಡೆಸುತ್ತಿದ್ದಾರೆ ಎಂದು ದೂರಿದರು.
ಬಿ.ಎಸ್.ಯಡಿಯೂರಪ್ಪ ೨೦೨೧ರಲ್ಲಿ ಮುಖ್ಯಮಂತ್ರಿಯಾಗಿದ್ದ ಮುಡಾದಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ ನಡೆದಿದೆ. ಇದರ ವಿರುದ್ಧ ಹಲವಾರು ಹೋರಾಟಗಳನ್ನು ನಮ್ಮ ವೇದಿಕೆ ಮಾಡಿದೆ. ಆದರೂ ಭ್ರಷ್ಟಾಚರಾದ ವಿರುದ್ಧ ಆಗಿನ ಸರ್ಕಾರದ ಮುಖ್ಯಮಂತ್ರಿಗಳಾಗಲಿ, ವಿಜಯೇಂದ್ರ ಅವರಾಗಲೀ ಧ್ವನಿ ಎತ್ತಲಿಲ್ಲ. ಕಾರಣ ಆ ಎಲ್ಲಾ ಭ್ರಷ್ಟಾಚಾರದ ರೂವಾರಿ ವಿಜಯೇಂದ್ರ ಮತ್ತು ಅವರ ಪಟಾಲಂ ಸದಸ್ಯರು, ೨೦೨೧ರ ಭ್ರಷ್ಟಾಚಾರ ಕುರಿತಂತೆ ಜು.೨೯ರಂದು ಬೆಳಗ್ಗೆ ೧೧.೩೦ಕ್ಕೆ ಮೈಸೂರಿನ ಗಾಂಧಿ ವೃತ್ತದ ಗಾಂಧಿ ಪ್ರತಿಮೆ ಬಳಿ ದಾಖಲೆಗಳ ಸಮೇತ ಬಹಿರಂಗ ಚರ್ಚೆ ನಡೆಸಲಿದ್ದು, ವಿಜಯೇಂದ್ರ ನಮ್ಮ ಆಹ್ವಾನ ಸ್ವೀಕರಿಸಿ ಚರ್ಚೆಗೆ ಬರಲಿ ಎಂದು ಸವಾಲು ಹಾಕಿದರು.
ಪತ್ರ ಚಳವಳಿಯಲ್ಲಿ ವೇದಿಕೆ ರಾಜ್ಯಾಧ್ಯಕ್ಷ ಕೆ.ಎಸ್.ಶಿವರಾಮು, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಡಾ.ಬಿ.ಜೆ.ವಿಜಯಕುಮಾರ್, ನಗರಾಧ್ಯಕ್ಷ ಆರ್.ಮೂರ್ತಿ, ಸಾಹಿತಿ ಪ್ರೊ.ಕೆ.ಎಸ್.ಭಗವಾನ್, ರಂಗಾಯಣದ ಮಾಜಿ ನಿರ್ದೇಶಕ ಜನಾರ್ಧನ್ (ಚೆನ್ನಿ), ಪ್ರಗತಿಪರ ಚಿಂತಕ ಪ್ರೊ.ಮಹೇಶ್ ಚಂದ್ರಗುರು, ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಚಾಲಕ ಚುಂಚನಹಳ್ಳಿ ಮಲ್ಲೇಶ್, ಕಂದಳ್ಳಿ ನಾರಾಯಣ್, ರೆಸ್ಪಾನ್ಸಿಬಲ್ ಸಿಟಿಜನ್ ವಾಯ್ಸ್ ವೇದಿಕೆಯ ರಾಜ್ಯಾಧ್ಯಕ್ಷ ಎಂ.ಎಫ್.ಖಲೀಂ, ಜಿಲ್ಲಾ ಕುಂಬಾರ ಸಂಘದ ಅಧ್ಯಕ್ಷ ಎಚ್.ಎಸ್.ಪ್ರಕಾಶ್, ಮಡಿವಾಳರ ಸಂಘದ ಅಧ್ಯಕ್ಷ ರವಿನಂದನ್, ಉಪ್ಪಾರರ ಸಂಘದ ಅಧ್ಯಕ್ಷ ಯೋಗೇಶ್ ಉಪ್ಪಾರ್, ವಿಶ್ವಕರ್ಮ ಸಮಾಜದ ಅಧ್ಯಕ್ಷ ಮೊಗಣ್ಣಚಾರ ಸೇರಿದಂತೆ ಹಲವರಿದ್ದರು.
=======
ಫೋಟೋ ಬರಲಿದೆ