– ಉಸ್ತುವಾರಿ ಸಚಿವ ಡಾ. ಎಚ್.ಸಿ. ಮಹದೇವಪ್ಪ ಭರವಸೆ
– ರಾಜ್ಯ ಕಬ್ಬು ಬೆಳೆಗಾರರ ಸಂಘದ ಸದಸ್ಯರೊಂದಿಗೆ ಸಭೆ
ಪ್ರತಿನಿಧಿ ವರದಿ ಮೈಸೂರು
ರೈತರ ಸಮಸ್ಯೆಗಳಿಗೆ ಸ್ಪಂದಿಸಿ, ಅವರ ಬೇಡಿಕೆಗಳಿಗೆ ಸರ್ಕಾರ ಪ್ರಮಾಣಿಕವಾಗಿ ಸ್ಪಂದಿಸಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಚ್.ಸಿ. ಮಹದೇವಪ್ಪ ಭರವಸೆ ನೀಡಿದರು.
ನಗರದ ಜಲದರ್ಶಿನಿ ಅತಿಥಿ ಗೃಹದಲ್ಲಿ ಶನಿವಾರ ನಡೆದ ರಾಜ್ಯ ಕಬ್ಬು ಬೆಳೆಗಾರರ ಸಂಘದ ಸಭೆಯಲ್ಲಿ ರೈತರ ಮನವಿ ಸ್ವೀಕರಿಸಿ ಮಾತನಾಡಿದ ಅವರು, ರೈತರ ಸಮಸ್ಯೆಗಳನ್ನು ಬಗೆಹರಿಸಲು ನಮ್ಮ ಸರ್ಕಾರ ಬದ್ಧವಾಗಿದೆ. ಅದರಂತೆ ಕಬ್ಬುಬೆಳೆಗಾರರ ಹಿತದೃಷ್ಟಿಯಿಂದ ಸಭೆಯಲ್ಲಿ ತಿಳಿಸಿರುವ ಬೇಡಿಕೆಗಳಿಗೆ ಸರ್ಕಾರವು ಪ್ರಮಾಣಿಕವಾಗಿ ಸ್ಪಂದಿಸಲಿದೆ. ಕೆ.ಆರ್.ನಗರದ ಶ್ರೀರಾಮ ಸಕ್ಕರೆ ಕಾರ್ಖಾನೆ ಪ್ರಾರಂಭಿಸುವ ಕುರಿತಂತೆ ಸರ್ಕಾರ ಹಾಗೂ ಸಂಸ್ಥೆ ನಡುವ ಒಡಂಬಡಿಕೆಯಾಗಿರುವುದು ಕಾರ್ಖಾನೆ ಪ್ರಾರಂಭಿಸಿ ಕಬ್ಬು ಬೆಳೆಯುವ ರೈತರಿಗೆ ಅನುಕೂಲ ಮಾಡಿಕೊಡುವುದಾಗಿದೆ. ಕಾರ್ಖಾನೆ ಪ್ರಾರಂಭಿಸದ ಬಗ್ಗೆ ಸಂಬಂಧಿಸಿದವರೊಟ್ಟಿಗೆ ಚರ್ಚಿಸಲಾಗುವುದು ಎಂದು ಹೇಳಿದರು.
ಅಚ್ಚುಕಟ್ಟು ಪ್ರದೇಶದಲ್ಲಿರುವ ಎಲ್ಲ ರೈತರ ಜಮೀನಿಗೆ ನೀರು ತಲುಪಿಸಲು ನೀರಾವರಿ ಯೋಜನೆ ರೂಪಿಸಲಾಗಿದೆ. ಈ ನಡುವೆ ನಾಲೆಗಳಿಂದ ಮೋಟಾರ್ ಮೂಲಕ ನೀರು ಪಡೆಯುವವರ ಮೇಲೆ ಕ್ರಮ ಜರುಗಿಸಲಾಗುತ್ತಿರುವ ಬಗ್ಗೆ ದೂರು ಬರುತ್ತಿದ್ದು, ಇದರ ಮಾರ್ಪಾಡಿಗೆ ರೈತರು ನೀಡುವ ಸಲಹೆಗಳನ್ನು ಸರ್ಕಾರ ಪರಿಗಣಿಸಲಿದೆ ಎಂದ ಅವರು, ಬ್ಯಾಂಕುಗಳಲ್ಲಿ ರೈತರಿಗೆ ಅಸಹಕಾರ ನೀಡುವ ಕುರಿತು ಶೀಘ್ರವೇ ಬ್ಯಾಂಕ್ ಅಧಿಕಾರಿಗಳನ್ನು ಸಭೆ ಕರೆದು ಚರ್ಚಿಸಿ ರೈತರನ್ನು ಶೋಷಣೆ ಮಾಡದಂತೆ ಸೂಚನೆ ನೀಡಲಾಗುವುದು ಎಂದು ಭರವಸೆ ನೀಡಿದರು.
ಇದಕ್ಕೂ ಮುನ್ನ ಸಭೆಯಲ್ಲಿ ಮಾತನಾಡಿದ ರಾಜ್ಯ ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಹಳ್ಳಿಕೆರೆಹುಂಡಿ ಭಾಗ್ಯರಾಜ್, ಕಳೆದ ಸಾಲಿನ ಬಾಕಿ ಹಣ ಪ್ರತಿ ಟನ್ಗೆ ೧೫೦ ರೂ.ಗಳನ್ನು ತಕ್ಷಣವೇ ಕೊಡಿಸಬೇಕು. ಸಕ್ಕರೆ ಕಾರ್ಖಾನೆ ಮುಂಭಾಗ ತೂಕದ ಯಂತ್ರವನ್ನು ಎಪಿಎಂಸಿ ಮುಖಾಂತರ ಅಳವಡಿಸಬೇಕು. ಕಬ್ಬು ಕಟಾವು ಸಾಗಾಣಿಕೆ ಕೂಲಿಯನ್ನು ಬಣ್ಣಾರಿ ಸಕ್ಕರೆ ಕಾರ್ಖಾನೆಯು ಮನಬಂದಂತೆ ನಿರ್ವಹಿಸುತ್ತಿದೆ. ಕಾರ್ಖಾನೆ ಆಡಳಿತ ಮಂಡಳಿ ವಿರುದ್ಧ ಕ್ರಮಕೈಗೊಳ್ಳಬೇಕು ಮತ್ತು ಕಬ್ಬು ಕಟಾವು, ಸಾಗಾಣಿಕೆ ಕೂಲಿಯನ್ನು ಸಕ್ಕರೆ ಕಾರ್ಖಾನೆಯವರೇ ಭರಿಸಬೇಕೆಂಬುದು ಸೇರಿದಂತೆ ಇನ್ನಿತರ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿದರು.
ಸಭೆಯಲ್ಲಿ ಜಿಲ್ಲಾಧಿಕಾರಿ ಲಕ್ಷ್ಮೀಕಾಂತ ರೆಡ್ಡಿ, ನಗರ ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್, ಸೆಸ್ಕ್ ಅಧಿಕಾರಿ ಮುನಿಗೋಪಾಲ ರಾಜು ಇತರರಿದ್ದರು.
==============