ಪ್ರತಿನಿಧಿ ವರದಿ ಸೋಮವಾರಪೇಟೆ
ತಾಲೂಕಿನ ಒಕ್ಕಲಿಗರ ಯುವ ವೇದಿಕೆ ವತಿಯಿಂದ ಸಮೀಪದ ಶಾಂತಳ್ಳಿ ಗ್ರಾಮದ ಕೆ.ಎಲ್.ಸತೀಶ್ ಮತ್ತು ಬಿದ್ದಪ್ಪನವರ ಗದ್ದೆಯಲ್ಲಿ ೯ನೇ ವರ್ಷದ ಕೆಸರುಗದ್ದೆ ಕ್ರೀಡಾಕೂಟ ಭಾನುವಾರ ನಡೆಯಿತು.
ಕ್ರೀಡಾಕೂಟವನ್ನು ವಿಧಾನಪರಿಷತ್ ಮಾಜಿ ಸದಸ್ಯ ಎಸ್.ಜಿ.ಮೇದಪ್ಪ ಉದ್ಘಾಟಿಸಿ ನಂತರ ಮಾತನಾಡಿದರು.
ಒಕ್ಕಲುತನ ಮೂಲ ಕಸುಬು ಮಾಡಿಕೊಂಡಿರುವ ಒಕ್ಕಲಿಗರಿಗೂ, ಕೆಸರಿಗೂ ಅವಿನಾಭಾವ ಸಂಬಂಧವಿದೆ. ಕೆಸರುಗದ್ದೆ ಕ್ರೀಡಾಕೂಟ ಎಂಬುದು ಜನಾಂಗದ ನಿಜವಾದ ಕ್ರೀಡೆಯಾಗಿದೆ. ಇದನ್ನು ಉಳಿಸಿಬೆಳೆಸಿಕೊಂಡು ಹೋಗುವುದು ಯುವ ಜನಾಂಗದ ಕರ್ತವ್ಯವಾಗಿದೆ. ಒಕ್ಕಲಿಗರು ಯಾವತ್ತು ಒಗ್ಗಟ್ಟಾಗಿರಬೇಕು. ನಮ್ಮ ಸಂಸ್ಕೃತಿ, ಆಚಾರವಿಚಾರವನ್ನು ಕಾಪಾಡಿಕೊಳ್ಳಲು ರಾಜಕೀಯ ರಹಿತವಾಗಿ ಒಗ್ಗಟ್ಟಾಗಿರಬೇಕು ಎಂದು ಹೇಳಿದರು.
ರಾಜ್ಯ ಒಕ್ಕಲಿಗರ ಸಂಘದ ಜಿಲ್ಲಾ ನಿರ್ದೇಶಕ ಹರಪಳ್ಳಿ ರವೀಂದ್ರ ಮಾತನಾಡಿ, ರಾಜ್ಯ ಒಕ್ಕಲಿಗರ ಸಂಘ ಜನಾಂಗದ ಅಭಿವೃದ್ಧಿಗೆ ಶ್ರಮಿಸುತ್ತಿದೆ. ಶೈಕ್ಷಣಿಕ ಕ್ಷೇತ್ರದಲ್ಲಿ ನಮ್ಮ ಜನಾಂಗದ ಮಕ್ಕಳು ಇನ್ನಷ್ಟು ಸಾಧನೆ ಮಾಡಬೇಕಾಗಿದೆ. ಗ್ರಾಮೀಣ ಮಕ್ಕಳಿಗೂ ಗುಣಮಟ್ಟದ ಶಿಕ್ಷಣ ಸಿಗಬೇಕು. ಸೋಮವಾರಪೇಟೆಯಲ್ಲಿ ಒಕ್ಕಲಿಗರ ಸಂಘದಿಂದ ೯.೯೯ಕೋಟಿ ರೂ. ವೆಚ್ಚದಲ್ಲಿ ಸುಸಜ್ಜಿತ ಒಕ್ಕಲಿಗರ ಬಾಲಕಿಯರ ವಸತಿ ನಿಲಯ ನಿರ್ಮಾಣಗೊಳ್ಳಲಿದೆ. ಇದೇ ತಿಂಗಳು ಕಟ್ಟಡದ ಭೂಮಿ ಪೂಜೆ ನಡೆಯಲಿದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಕರ್ನಾಟಕ ಸಬ್ ಜೂನಿಯರ್ ಹಾಕಿ ತಂಡದ ನಾಯಕ ಹೆಗ್ಗುಳ ಗ್ರಾಮದ ಶಶಿತ್ಗೌಡ, ಪಿಎಚ್ಡಿ ಪದವಿಧರ ಯಡೂರು ಗ್ರಾಮದ ಡಾ.ಸಿ.ಆರ್.ಅಜಿತ್ ಅವರುಗಳನ್ನು ಸನ್ಮಾನಿಸಲಾಯಿತು.
ಒಕ್ಕಲಿಗರ ಯುವ ವೇದಿಕೆಯ ಅಧ್ಯಕ್ಷ ಚಕ್ರವರ್ತಿ ಸುರೇಶ್, ಜಿಲ್ಲಾ ಒಕ್ಕಲಿಗರ ಸಂಘದ ಅಧ್ಯಕ್ಷ ಎಸ್.ಎಂ.ಚಂಗಪ್ಪ , ತಾಲೂಕು ಅಧ್ಯಕ್ಷ ಎ.ಆರ್.ಮುತ್ತಣ್ಣ, ವೇದಿಕೆಯ ಮಾಜಿ ಅಧ್ಯಕ್ಷ ಬಿ.ಜೆ.ದೀಪಕ್, ತಾಪಂ ಮಾಜಿ ಅಧ್ಯಕ್ಷ ಕೆ.ಎಂ.ಲೋಕೇಶ್, ಒಕ್ಕಲಿಗರ ಯುವ ವೇದಿಕೆ ಜಿಲ್ಲಾಧ್ಯಕ್ಷ ಗಿರೀಶ್ ಮಲ್ಲಪ್ಪ, ಗೌಡಳ್ಳಿ ಸಹಕಾರ ಸಂಘದ ಅಧ್ಯಕ್ಷ ಎಚ್.ಆರ್.ಸುರೇಶ್, ಜಿಲ್ಲಾಸ್ಪತ್ರೆಯ ತಜ್ಞವೈದ್ಯ ಡಾ.ಧನುಂಜಯ ಕುಮಾರ್, ಬೆಟ್ಟದಳ್ಳಿ ಗ್ರಾಪಂ ಅಧ್ಯಕ್ಷ ತಮ್ಮಯ್ಯ, ಶಾಂತಳ್ಳಿ ಗ್ರಾಮಾಭಿವೃದ್ಧಿ ಮಂಡಳಿ ಅಧ್ಯಕ್ಷ ಕೆ.ಎಂ.ಧರ್ಮಪ್ಪ, ದಾನಿಗಳಾದ ಕೂತಿ ಗ್ರಾಮದ ಗಣೇಶ್ ಇದ್ದರು.
ಚಿತ್ರ:- ಸೋಮವಾರಪೇಟೆ ಒಕ್ಕಲಿಗರ ಯುವ ವೇದಿಕೆ ವತಿಯಿಂದ ಸಮೀಪದ ಶಾಂತಳ್ಳಿ ಗ್ರಾಮದಲ್ಲಿ ನಡೆದ ಕೆಸರುಗದ್ದೆ ಕ್ರೀಡಾಕೂಟವನ್ನು ಗ್ರಾಮಸ್ಥರು ಸಂಪ್ರದಾಯದಂತೆ ಗಾಳಿಯಲ್ಲಿ ಗುಂಡು ಹಾರಿಸುವ ಮೂಲಕ ಕ್ರೀಡಾಕೂಟಕ್ಕೆ ಚಾಲನೆ ನೀಡಿದರು.
ಚಿತ್ರ – ಸೋಮವಾರಪೇಟೆ ಸಮೀಪದ ಶಾಂತಳ್ಳಿಯಲ್ಲಿ ನಡೆದ ಕೆಸರುಗದ್ದೆ ಕೀಡಾಕೂಟವನ್ನು ಹರಪಳ್ಳಿ ರವೀಂದ್ರ ಉದ್ಘಾಟಿಸಿದರು. ವಿಧಾನಪರಿಷತ್ ಸದಸ್ಯ ಎಸ್.ಜಿ.ಮೇದಪ್ಪ, ಚಂಗಪ್ಪ, ದೀಪಕ್, ಸುರೇಶ್, ಮುತ್ತಣ್ಣ ಇದ್ದರು.
ಚಿತ್ರ -ಸೋಮವಾರಪೇಟೆ ಸಮೀಪದ ಶಾಂತಳ್ಳಿಯಲ್ಲಿ ನಡೆದ ಕೆಸರುಗದ್ದೆ ಕೀಡಾಕೂಟದಲ್ಲಿ ರೋಚಕ ವಾಲಿಬಾಲ್ ಪಂದ್ಯ.