ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಡಾ.ಕೆ.ಪಿ.ಅಂಶುಮಂತ್ ಮಾಹಿತಿ
ಪ್ರತಿನಿಧಿ ವರದಿ ಚಿಕ್ಕಮಗಳೂರು
ಬಿಜೆಪಿಯವರ ಬಣ್ಣ ಬಯಲಿಗೆಳೆಯಲು ಆ.9ರಂದು ಮೈಸೂರಿನಲ್ಲಿ ನಡೆಯುವ ಜನಾಂದೋಲನಾ ಸಮಾವೇಶಕ್ಕೆ ಜಿಲ್ಲೆಯಿಂದ ಸಾವಿರಾರು ಜನರು ಭಾಗವಹಿಸಲಿದ್ದಾರೆಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಡಾ.ಕೆ.ಪಿ.ಅಂಶುಮಂತ್ ತಿಳಿಸಿದರು.
ಸೋಮವಾರ ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಜಿಲ್ಲೆಯ ಪ್ರತಿ ಗ್ರಾಮ ಪಂಚಾಯಿತಿಗಳ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಮೈಸೂರಿನಲ್ಲಿ ನಡೆಯುವ ಜನಾಂದೋಲನಾ ಸಮಾವೇಶಕ್ಕೆ ಭಾಗವಹಿಸಲು ಎಲ್ಲ ತಯಾರಿ ನಡೆಸಲಾಗಿದೆ. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು, ಕ್ಷೇತ್ರದ ಶಾಸಕರು ಈ ಬಗ್ಗೆ ನಿಗಾ ವಹಿಸಲಿದ್ದಾರೆ ಎಂದು ಹೇಳಿದರು.
ಪ್ರಸ್ತುತ ಯುವಕರು ನಾಯಕತ್ವ ಮತ್ತು ದೇಶದ ಏಳಿಗೆಗೆ ಯುವ ಕಾಂಗ್ರೆಸ್ ಚುನಾವಣೆ ಬಹಳ ಮಹತ್ವದ್ದಾಗಿದೆ. ಯುವಕರಲ್ಲಿ ಕಾಂಗ್ರೆಸ್ ಪಕ್ಷದ ಬಗ್ಗೆ ತಿಳಿವಳಿಕೆ ನೀಡಿ ಹೆಚ್ಚು-ಹೆಚ್ಚು ಸದಸ್ಯರನ್ನು ನೋಂದಣೆ ಮಾಡಿಸುವಂತೆ ತಿಳಿಸಿದರು.
ಜಿಲ್ಲಾ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಂ.ಸಿ.ಶಿವಾನಂದಸ್ವಾಮಿ ಮಾತನಾಡಿ, ಪ್ರಜಾಪ್ರಭುತ್ವ ವ್ಯವಸ್ಥೆ ಗಟ್ಟಿಗೊಳಿಸಲು ಯುವ ನಾಯಕತ್ವ ದೇಶಕ್ಕೆ ಬೇಕಾಗಿದೆ. ಈ ನಿಟ್ಟಿನಲ್ಲಿ ಯುವಕರೆಲ್ಲರೂ ಸಕ್ರಿಯವಾಗಿ ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಳ್ಳುವಂತೆ ಮನವಿ ಮಾಡಿದರು.
ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಕೆ.ಎಂ.ಸಂತೋಷ್ ಮಾತನಾಡಿದರು. ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಮಹಮದ್ ಅಕ್ಬರ್, ನಗರ ಕಾಂಗ್ರೆಸ್ ಅಧ್ಯಕ್ಷ ಪಿ.ತನೋಜ್ ಕುಮಾರ್ ನಾಯ್ಡು, ನಗರ ಆಶ್ರಯ ಸಮಿತಿ ಸದಸ್ಯೆ ಯಶೋಧಾ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.