ಪ್ರತಿನಿಧಿ ವರದಿ ಚಾಮರಾಜನಗರ
ತಾಲೂಕಿನ ಹೊಮ್ಮಗ್ರಾಮದ ಎಚ್.ಎಲ್.ಚಂದ್ರಶೇಖರ್ 3ನೇ ಬಾರಿಯೂ ರಾಷ್ಟ್ರೀಯ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟಕ್ಕೆ ಆಯ್ಕೆಯಾಗುವ ಮೂಲಕ ಜಿಲ್ಲೆಗೆ ಕೀರ್ತಿ ತಂದಿದ್ದಾರೆ.
ಇತ್ತೀಚಿಗೆ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಡೆದ ಸರ್ಕಾರಿ ನೌಕರರ ರಾಜ್ಯಮಟ್ಟದ ಕ್ರೀಡಾಕೂಟದ 100 ಮೀಟರ್ ಓಟದಲ್ಲಿ ಪ್ರಥಮ, 200 ಮೀಟರ್ ಓಟದಲ್ಲಿ ದ್ವಿತೀಯ ಸ್ಥಾನ ಪಡೆದು ರಾಷ್ಟ್ರಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ.
ಕಳೆದ ವರ್ಷವೂ ಕೂಡ ಶಿವಮೊಗ್ಗದಲ್ಲಿ ನಡೆದ ರಾಜ್ಯ ಮಟ್ಟದ ಮಾಸ್ಟರ್ ಅಥ್ಲೆಟಿಕ್ಸ್ ಚಾಂಪಿಯನ್ ಕ್ರೀಡಾಕೂಟದಲ್ಲಿ ಭಾಗವಹಿಸಿ 1೦೦ ಮೀಟರ್, 2೦೦ ಮೀಟರ್, 4೦೦ ಮೀಟರ್ ಹಾಗೂ 4×1೦೦ ರಿಲೇ ಓಟದಲ್ಲಿ ಪ್ರಥಮ ಸ್ಥಾನ ಪಡೆದು 4 ಚಿನ್ನದ ಪದಕ ಹಾಗೂ 4×1೦೦ ಮಿಕ್ಸೆಡ್ ರಿಲೇಯಲ್ಲಿ ದ್ವಿತೀಯ ಸ್ಥಾನ ಪಡೆದು 1 ಬೆಳ್ಳಿಯ ಪದಕ ಪಡೆಯುವ ಮೂಲಕ ಉತ್ತರಪ್ರದೇಶದಲ್ಲಿ ನಡೆದ ರಾಷ್ಟ್ರೀಯ ಮಟ್ಟದ ಮಾಸ್ಟರ್ ಗೇಮ್ಸ್ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದರು. ಆದರೆ ಕಚೇರಿ ಕೆಲಸದ ಒತ್ತಡದಿಂದ ಭಾಗವಹಿಸಲು ಸಾಧ್ಯವಾಗಿರಲಿಲ್ಲ. ಈ ಬಾರಿಯೂ 100 ಮೀಟರ್ ಓಟದಲ್ಲಿ ಪ್ರಥಮ, 200 ಮೀಟರ್ ಓಟದಲ್ಲಿ ದ್ವಿತೀಯ ಸ್ಥಾನ ಪಡೆದು ಮತ್ತೊಮ್ಮೆ ರಾಷ್ಟ್ರೀಯ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ.
ತಾಲೂಕಿನ ಆಲೂರುಹೊಮ್ಮ ಗ್ರಾಮದ ಎಂ.ಲಿಂಗನಾಯಕ, ರಾಜಮ್ಮ ದಂಪತಿ ಪುತ್ರರಾದ ಇವರು ಸಂತೇಮರಹಳ್ಳಿಯಲ್ಲಿ ರೇಷ್ಮೆ ಇಲಾಖೆಯ ಸಿಲ್ಕ್ ಫಿಲೇಚರ್ ನಲ್ಲಿ ಅಧೀಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದು, ಪ್ರಸ್ತುತ ಮೈಸೂರಿನ ಜಿಪಂ ವ್ಯಾಪ್ತಿಯ ರೇಷ್ಮೆ ಉಪ ನಿರ್ದೇಶಕರ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ.
21ಸಿಎಚ್ಎನ್.2:
ಚಿತ್ರವಿದೆ