ಮೈಸೂರು: ಮುಡಾದಲ್ಲಿ ನಡೆದಿರುವ ವ್ಯಾಪಕ ಅಕ್ರಮಕ್ಕೆ ಅಧಿಕಾರಿಗಳು ನೇರ ಕಾರಣರಾಗಿದ್ದಾರೆ ಅಲ್ಲದೆ ಹಗರಣದಲ್ಲಿ ಜಿಲ್ಲಾಧಿಕಾರಿಗಳ ವೈಫಲ್ಯವೂ ಇದೆ ಎಂದು ಹಿರಿಯ ವಕೀಲ ಹಾಗೂ ಬಿಜೆಪಿ ಮುಖಂಡ ಅರುಣ್ ಕುಮಾರ್ ಅವರು ಮೈಸೂರಿನಲ್ಲಿ ಹೇಳಿದರು.
ಮೈಸೂರಿನಲ್ಲಿಂದು ಮಾತನಾಡಿದ ಅವರು, ಮುಡಾದಲ್ಲಿ ನಡೆದಿರುವ ಹಗರಣ ಸಂಬಂಧ ಜಿಲ್ಲಾಧಿಕಾರಿ ಸೇರಿದಂತೆ ಅಧಿಕಾರಿಗಳ ವಿರುದ್ಧ ಮೈಸೂರು ಪೊಲೀಸ್ ಕಮಿಷನರ್ ಅವರಿಗೆ ಲಿಖಿತ ದೂರು ನೀಡುತ್ತೇವೆ. ಮುಡಾದಲ್ಲಿ ನಡೆದಿರುವ ವ್ಯಾಪಕ ಅಕ್ರಮಕ್ಕೆ ಅಧಿಕಾರಿಗಳು ನೇರ ಕಾರಣರಾಗಿದ್ದಾರೆ ಅಲ್ಲದೆ ಇದರಲ್ಲಿ ಜಿಲ್ಲಾಧಿಕಾರಿಗಳ ವೈಫಲ್ಯವೂ ಇದೆ.ಮುಡಾ ಹಗರಣ ಸಂಬಂಧ ಲಕ್ಷ್ಮಿಪುರಂ ಪೊಲೀಸ್ ಠಾಣೆಗೆ ದೂರು ನೀಡಿದರೆ ಎಫ್ಐಆರ್ ದಾಖಲಿಸುವುದಿಲ್ಲ.ಬದಲಿಗೆ ತನಿಖೆ ನಡೆಯುತ್ತಿದೆ ಎಂದು ನೆಪಹೇಳಿ ತನಿಖಾ ತಂಡಕ್ಕೆ ದೂರನ್ನು ರವಾನಿಸುತ್ತಿದ್ದಾರೆ. ಆದರೆ ತನಿಖಾ ತಂಡಕ್ಕೆ ಎಫ್ಐಆರ್ ದಾಖಲಿಸಲು ಸಾಧ್ಯವಿಲ್ಲ. ಹಾಗಾಗಿ ಲಕ್ಷ್ಮಿಪುರಂ ಪೊಲೀಸ್ ಠಾಣೆಗೆ ದೂರು ನೀಡುವ ಬದಲು, ನೇರವಾಗಿ ಪೊಲೀಸ್ ಆಯುಕ್ತರಿಗೆ ದೂರು ನೀಡುವ ಮೂಲಕ ಮುಡಾ ಹಗರಣ ಸಂಬಂಧ ನಡೆಯುತ್ತಿರುವ ಹೋರಾಟವನ್ನು ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯುತ್ತೇವೆ ಎಂದು ಹೇಳಿದರು.
ಸುಪ್ರೀಂ ಕೋರ್ಟ್ನ ಮುಖ್ಯ ನ್ಯಾಯಾಧೀಶ ಡಿ. ವೈ. ಚಂದ್ರಚೂಡಾ ನೇತೃತ್ವದಲ್ಲಿ 7 ಸದಸ್ಯರ ಸಂವಿಧಾನ ಪೀಠವು ಒಳ ಮೀಸಲಾತಿಯ ಜಾರಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರಗಳಿಗೆ ಆದೇಶ ನೀಡಿದೆ. ರಾಜ್ಯ ಸರ್ಕಾರ ತುರ್ತು ಸಚಿವ ಸಂಪುಟ ಸಭೆ ಕರೆದು ಒಳ ಮೀಸಲಾತಿಯನ್ನು ಜಾರಿಗೊಳಿಸಬೇಕು. ಆದರೆ ನ್ಯಾಯಾಲಯದ ಆದೇಶವನ್ನು ಕೆಲವರು ವಿರೋಧಿಸುತ್ತಿದ್ದು, ಅಂಬೇಡ್ಕರ್ ಅಧ್ಯಯನ ಪೀಠದ ಕಾರ್ಯವ್ಯಾಪ್ತಿಯನ್ನು ಮೀರಿ ಅಭಿಪ್ರಾಯ ಸಂಗ್ರಹಿಸುವ ಮೂಲಕ ಅನಗತ್ಯವಾಗಿ ಗೊಂದಲ ಸೃಷ್ಟಿಸಲು ಮುಂದಾಗಿದ್ದಾರೆ. ಮೈಸೂರು ವಿಶ್ವವಿದ್ಯಾನಿಲಯದ ಡಾ ಬಿ ಆರ್ ಅಂಬೇಡ್ಕರ್ ಸಂಶೋಧನಾ ಮತ್ತು ವಿಸ್ತರಣಾ ಕೇಂದ್ರದಲ್ಲಿ ಇತ್ತೀಚೆಗೆ ಮೀಸಲಾತಿ ಮತ್ತು ವರ್ಗೀಕರಣೆ ಎಂಬ ವಿಷಯ ಕುರಿತು ಕಾರ್ಯಾಗಾರ ಏರ್ಪಡಿಸಲಾಗಿತ್ತು. ಆ ಕೇಂದ್ರದ ನಿರ್ದೇಶಕರಾದ ಡಾ ಜೆ ಸೋಮಶೇಖರ್ ಅವರು ಕಾರ್ಯಾಗಾರ ಏರ್ಪಡಿಸಿ ಸರ್ವೋಚ್ಚ ನ್ಯಾಯಾಲಯವು ಒಳ ಮೀಸಲಾತಿ ಕುರಿತು ನೀಡಿರುವ ತೀರ್ಪಿಗೆ ವಿರುದ್ಧವಾಗಿ ಅಭಿಪ್ರಾಯ ಸಂಗ್ರಹಣೆ ಮಾಡುತ್ತಿದ್ದಾರೆ. ಇದು ಸರ್ವೋಚ್ಚ ನ್ಯಾಯಾಲಯವು ನೀಡಿರುವ ತೀರ್ಪನ್ನು ಪ್ರಶ್ನಿಸುವ ಪ್ರಯತ್ನವಾಗಿದ್ದು, ನ್ಯಾಯಾಂಗ ನಿಂದನೆಯಾಗಿದೆ. ಹಾಗಾಗಿ ಡಾ ಜೆ ಸೋಮಶೇಖರ್ ವಿರುದ್ಧ ರಾಜ್ಯಪಾಲರಿಗೆ ದೂರು ನೀಡಲಾಗಿದೆ ಎಂದು ತಿಳಿಸಿದ್ದಾರೆ.