ಹೆಚ್ ಡಿ ಕೋಟೆ ತಾಲೂಕಿನಲ್ಲಿ ವ್ಯಾಘ್ರನ ಅಟ್ಟಹಾಸ ಮುಂದುವರಿದಿದೆ.ಹಾಡಹಗಲೇ ಹಸುವೊಂದನ್ನ ಹುಲಿ ಕೊಂದುಹಾಕಿದೆ.
ಹುಲಿ ದಾಳಿಗೆ ಬಲಿಯಾದ ಹಸುವಿನ ಕಳೇಬರದೊಂದಿಗೆ ರಸ್ತೆಯಲ್ಲಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದಾರೆ.ಹೆಚ್ ಡಿ ಕೋಟೆ ತಾಲೂಕಿನ ಕೆ ಎಡತೊರೆ ಗ್ರಾಮದಲ್ಲಿ ಹುಣಸೂರು ಎನ್ ಬೇಗೂರು ಮಾರ್ಗದ ರಸ್ತೆ ತಡೆದು ಪ್ರತಿಭಟನೆ ಮಾಡಲಾಗಿದೆ.
ಅನಿತಾ ಎಂಬುವರಿಗೆ ಸೇರಿದ ಹಸುವನ್ನು ಹುಲಿ ಕೊಂದುಹಾಕಿದೆ. ಜನರ ಚೀರಾಟ ಕೇಳಿ ಹಸುವಿನ ಮೃತದೇಹ ಬಿಟ್ಟು ಹುಲಿ ಕಾಲ್ಕಿತ್ತಿದೆ. ಕಳೆದೆರಡು ತಿಂಗಳಿಂದ ಈ ಪ್ರದೇಶದಲ್ಲಿ ಸಾಕು ಪ್ರಾಣಿಗಳ ಮೆಲೆ ದಾಳಿ ನಡೆಸಿ ಕೊಲ್ಲುತ್ತಿದ್ದರೂ ಹುಲಿ ಸೆರೆ ಹಿಡಿಯದ ಅರಣ್ಯ ಇಲಾಖೆಯ ವಿರುದ್ದ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹುಲಿ ಸೆರೆ ನಮ್ಮ ವ್ಯಾಪ್ತಿಗೆ ಬರೋದಿಲ್ಲ ಅಂತ ಹೆಚ್ ಡಿ ಕೋಟೆ ಮತ್ತು ಹುಣಸೂರಿನ ವೀರನಹೊಸಹಳ್ಳಿ ಭಾಗದ ಅರಣ್ಯ ಇಲಾಖೆ ಅಧಿಕಾರಿಗಳು ಉಡಾಫೆ ಉತ್ತರ ನೀಡ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಯಾರ ವ್ಯಾಪ್ತಿಗೆ ಬರುತ್ತದೆ ಎಂಬುದನ್ನು ಖಚಿತ ಪಡಿಸಿಕೊಳ್ಳದ ಅರಣ್ಯ ಇಲಾಖೆಯ ವಿರುದ್ಧ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪ್ರತಿಭಟನಾಕಾರರು ರಸ್ತೆ ತಡೆ ನಡೆಸಿದ್ದರಿಂದ ಕೆಲಕಾಲ ರಸ್ತೆ ಸಂಚಾರಕ್ಕೆ ಅಡ್ಡಿಯಾದ ಪರಿಣಾಮ ಪ್ರಯಾಣಿಕರು ಪರದಾಡಿದ್ದಾರೆ.
ಸ್ಥಳಕ್ಕಾಗಮಿಸಿದ ಪೊಲೀಸರ ಸಮ್ಮುಖದಲ್ಲೇ ಹೆಚ್ ಡಿ ಕೋಟೆ ಮತ್ತು ವೀರನಹೊಸಹಳ್ಳಿ ಭಾಗದ ಅರಣ್ಯ ಇಲಾಖೆ ಅಧಿಕಾರಿಗಳನ್ನು ಜನರು ತರಾಟೆಗೆ ತೆಗೆದುಕೊಂಡಿದ್ದಾರೆ. ಅಲ್ಲದೆ ಹುಲಿ ಸೆರೆ ಹಿಡಿಯದೆ ಇದ್ದಲ್ಲಿ ಉಗ್ರ ಹೋರಾಟ ಮಾಡುವುದಾಗಿ ಅಧಿಕಾರಿಗಳಿಗೆ ಎಚ್ಚರಿಕೆ ಕೊಟ್ಟಿದ್ದಾರೆ.