ಜಿಲ್ಲೆಯ ಶೈಕ್ಷಣಿಕ ಪ್ರಗತಿಗಾಗಿ ಸರ್ಕಾರ ಹಾಗೂ ಶಿಕ್ಷಣ ಇಲಾಖೆ ಇನ್ನಿಲ್ಲದ ಕಸರತ್ತು ನಡೆಸುತ್ತಿದ್ದರೂ, ಸಿಎಂ ತವರು ಜಿಲ್ಲೆಯ ಎಚ್.ಡಿ. ಕೋಟೆ ತಾಲೂಕಿನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ ವಿದ್ಯಾರ್ಥಿಗಳನ್ನು ಕಾಡುತ್ತಿದೆ.
ಎಚ್.ಡಿ.ಕೋಟೆ ಪಟ್ಟಣದ ಸರ್ಕಾರಿ ಶಾಲೆಯಲ್ಲಿ ಇಂಗ್ಲಿಷ್, ಗಣಿತ ಮತ್ತು ವಿಜ್ಞಾನ ವಿಷಯಗಳಿಗೆ ಶಿಕ್ಷಕರೇ ಇಲ್ಲದಂತಾಗಿದೆ. ಶೈಕ್ಷಣಿಕ ವರ್ಷದ ಅರ್ಧಭಾಗ ಪೂರ್ಣಗೊಂಡರು ಪ್ರಮುಖ ವಿಷಯಗಳ ಬೋಧನೆಗೆ ಶಿಕ್ಷಕರಿಲ್ಲದಿರುವುದು ವಿದ್ಯಾರ್ಥಿಗಳಿಗೆ ತೊಂದರೆ ಉಂಟಾಗಿದೆ. ಒಂದು ಶಾಲೆಯಲ್ಲಿ ಶಿಕ್ಷಕರಿದ್ದರೆ, ವಿದ್ಯಾರ್ಥಿಗಳಿಲ್ಲ. ಮತ್ತೊಂದು ಶಾಲೆಯಲ್ಲಿ ವಿದ್ಯಾರ್ಥಿಗಳಿದ್ದಾರೆ ಶಿಕ್ಷಕರಿಲ್ಲ. ಹೀಗಾಗಿ ಶಿಕ್ಷಕರಿಲ್ಲದ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳನ್ನು ಶಿಕ್ಷಕರ ಕೊರತೆ ಇಲ್ಲದ ಶಾಲೆಗೆ ಸ್ಥಳಾಂತರಿಸಲು ವಿದ್ಯಾರ್ಥಿಗಳೇ ಮನವಿ ಮಾಡುವ ವಿಪರ್ಯಾಸ ಎದುರಾಗಿದೆ.
ಎಚ್.ಡಿ. ಕೋಟೆ ಪಟ್ಟಣದ ಸರ್ಕಾರಿ ಹಿರಿಯ ಪ್ರಾಥಮಿಕ ಬಾಲಕರ ಮಾದರಿ ಶಾಲೆಯಲ್ಲಿ ಶಿಕ್ಷಕರ ಕೊರತೆ ಉಂಟಾಗಿದ್ದು, ಒಂದರಿಂದ 8ನೇ ತರಗತಿವರೆಗೆ ಕಾರ್ಯನಿರ್ವಹಿಸುತ್ತಿರುವ ಈ ಶಾಲೆ ಶತಮಾನ ಕಂಡಿದೆ. ಶಾಲೆಯಲ್ಲಿ ಕಲಿತ ನೂರಾರು ಮಂದಿ ಉನ್ನತ ಹುದ್ದೆಯಲ್ಲಿದ್ದು, ಇದೀಗ ಶಿಕ್ಷಕರ ಕೊರತೆ ಕಾಡುತ್ತಿರುವುದು ವಿದ್ಯಾರ್ಥಿಗಳನ್ನು ಕಂಗಾಲಾಗಿಸಿದೆ.
70 ವಿದ್ಯಾರ್ಥಿಗಳ ದಾಖಲಾತಿ ಹೊಂದಿರುವ ಶಾಲೆಯಲ್ಲಿ ಮುಖ್ಯ ಶಿಕ್ಷಕ ಸೇರಿ ಕೇವಲ 3 ಮಂದಿ ಮಾತ್ರ ಕರ್ತವ್ಯ ನಿರ್ವಹಿಸುತ್ತಿದ್ದು, 5 ಮಂದಿ ಶಿಕ್ಷಕರಿದ್ದ ಶಾಲೆಯಲ್ಲಿ ಇಬ್ಬರು ಅತಿಥಿ ಶಿಕ್ಷಕರನ್ನು ಬೇರೆಡೆಗೆ ವರ್ಗಾವಣೆ ಮಾಡಿರುವುದರಿಂದ ವಿದ್ಯಾರ್ಥಿಗಳಿಗೆ ತೊಂದರೆ. 8ನೇ ತರಗತಿಯಲ್ಲಿ 16 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ.
ಎಚ್.ಡಿ.ಕೋಟೆ ಪಟ್ಟಣದ ಮತ್ತೊಂದು ಸರ್ಕಾರಿ ಜೂನಿಯರ್ ಕಾಲೇಜಿನಲ್ಲಿ ಕಾರ್ಯನಿರ್ವಹಿಸುತ್ತಿರುವ ಸರ್ಕಾರಿ ಪ್ರೌಢಶಾಲೆಯ 8ನೇ ತರಗತಿ ಶಾಲೆಯಲ್ಲಿ ಕೇವಲ 7ವಿದ್ಯಾರ್ಥಿಗಳಿದ್ದರೂ, ಈ ಶಾಲೆಯಲ್ಲಿ ಪೂರ್ಣ ಪ್ರಮಾಣದ ಶಿಕ್ಷಕರಿದ್ದಾರೆ. ಹೀಗೆ ಶಿಕ್ಷಕರು ಮತ್ತು ಶಿಕ್ಷಣ ಇಲಾಖೆ ಕಣ್ಣಾಮುಚ್ಚಾಲೆ ಆಟದಿಂದ ಡೋಲಾಯಮಾನ ಸ್ಥಿತಿಯಲ್ಲಿರುವ 8ನೇ ತರಗತಿ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿ ಕುಂಠಿತವಾಗಿದೆ.
ಮಕ್ಕಳ ಶೈಕ್ಷಣಿಕ ಹಿತದೃಷ್ಟಿಯಿಂದ ಶಿಕ್ಷಕರ ಕೊರತೆಯಿಲ್ಲದ ಜೂನಿಯರ್ ಕಾಲೇಜು ಶಾಲೆಗೆ ಬಾಲಕರ ಶಾಲೆಯ 16 ವಿದ್ಯಾರ್ಥಿಗಳನ್ನು ವರ್ಗಾವಣೆ ಮಾಡುವಂತೆ ಪೋಷಕರ ಒತ್ತಾಯ ಮಾಡಿದ್ದು, ನಮಗೆ ಟಿಸಿ ಕೊಡಿಸಿ ಎಂದು ಮನವಿ ಮಾಡಿದ್ದಾರೆ. ಆದರೂ ವಿದ್ಯಾರ್ಥಿಗಳ ಮತ್ತು ಪೋಷಕರ ಒತ್ತಾಯಕ್ಕೆ ಶಿಕ್ಷಣ ಇಲಾಖೆ ಅಧಿಕಾರಿಗಳು ತಲೆ ಕೆಡಿಸಿಕೊಳ್ಳುತ್ತಿಲ್ಲ ಎಂಬ ಆರೋಪ ಕೇಳಿ ಬಂದಿದೆ.
ಶಿಕ್ಷಕರಿಲ್ಲದೇ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳು ಕಲಿಕೆಯಲ್ಲಿ ಹಿಂದೆ ಬಿದ್ದಿದ್ದು, ಮುಖ್ಯಮಂತ್ರಿಗಳು ಮತ್ತು ಶಾಸಕರು ಕೂಡಲೇ ಇತ್ತ ಗಮನ ವಹಿಸಿ ವಿದ್ಯಾರ್ಥಿಗಳ ಭವಿಷ್ಯಕ್ಕೆ ನೆರವಾಗುವಂತೆ ಪೋಷಕರು ಮನವಿ ಮಾಡಿದ್ದಾರೆ.