ರಾಜಕೀಯದಲ್ಲಿ ಟೀಕೆ, ಟಿಪ್ಪಣಿಗಳು ಸಹಜ. ಕೆಲವೊಮ್ಮೆ ಉದ್ವೇಗದಲ್ಲಿ ಮತ್ತೊಬ್ಬರ ಘನತೆಗೆ ಚ್ಯುತಿ ತರುವಂತಹ ಹೇಳಿಕೆ ಅರಿವಿಗೆ ಬಾರದೆಯೇ ಬಂದು ಬಿಡುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಜಿಂದಾಲ್ ಕಂಪನಿಗೆ ಭೂಮಿ ನೀಡಿರುವ ನಮ್ಮ ಸರ್ಕಾರದ ತೀರ್ಮಾನವನ್ನು ವಿರೋಧಿಸಿ ಮಾತನಾಡುವಾಗ ವಿರೋಧ ಪಕ್ಷದ ಉಪನಾಯಕರಾದ ಅರವಿಂದ ಬೆಲ್ಲದ್ ಅವರು ಸಿಎಂ ಸಿದ್ದರಾಮಯ್ಯ ಅವರನ್ನು ವೈಯಕ್ತಿಕವಾಗಿ ನಿಂದನೆ ಮಾಡಿದ್ದರು. ನಂತರ ತಮ್ಮ ತಪ್ಪಿನ ಅರಿವಾಗಿ ಇಂದು ಪತ್ರದ ಮೂಲಕ ಸಿಎಂಗೆ ಕ್ಷಮೆ ಕೋರಿದ್ದರು. ಅವರ ಈ ನಡೆಯನ್ನು ಮುಕ್ತವಾಗಿ ಸ್ವಾಗತಿಸಿರುವ ಸಿಎಂ, ರಾಜಕೀಯದಲ್ಲಿ ಟೀಕೆ, ಟಿಪ್ಪಣಿಗಳು ಸಹಜ. ಕೆಲವೊಮ್ಮೆ ಉದ್ವೇಗದಲ್ಲಿ ಮತ್ತೊಬ್ಬರ ಘನತೆಗೆ ಚ್ಯುತಿ ತರುವಂತಹ ಹೇಳಿಕೆ ಅರಿವಿಗೆ ಬಾರದೆಯೇ ಬಂದು ಬಿಡುತ್ತದೆ. ಜೊತೆಗೆ ಅವರ ಬಗ್ಗೆ ನನ್ನ ಮನಸ್ಸಿನಲ್ಲಿ ದ್ವೇಷವಾಗಲೀ, ಬೇಸರವಾಗಲೀ ಯಾವುದು ಇಲ್ಲವೆಂದು ಹೇಳಿದ್ದಾರೆ.
ಈ ವಿಚಾರದ ಬಗೆಗೆ ತಮ್ಮ ʼಎಕ್ಸ್ʼ ಖಾತೆಯಲ್ಲಿ ಪೋಸ್ಟ್ ಒಂದನ್ನು ಶೇರ್ ಮಾಡುವ ಮೂಲಕ ಸಿಎಂ ಅರವಿಂದ್ ಬೆಲ್ಲದ್ ಅವರ ಬಗೆಗೆ ಮಾತನಾಡಿದ್ದಾರೆ. ನಾನು ಒಂದೆರಡು ಬಾರಿ ಬಾಯ್ತಪ್ಪಿನಿಂದ ಏಕವಚನ ಬಳಕೆ ಮಾಡಿ ನಂತರ ವಿಷಾದ ವ್ಯಕ್ತಪಡಿಸಿದ್ದೇನೆ, ಆ ತಪ್ಪು ಮರುಕಳಿಸದಂತೆ ತಿದ್ದಿಕೊಳ್ಳುವ ಪ್ರಯತ್ನವನ್ನು ಮಾಡಿದ್ದೇನೆ ಎಂದಿರುವ ಇವರು ನನ್ನ ಸುದೀರ್ಘ 40 ವರ್ಷಗಳ ರಾಜಕೀಯ ಜೀವನದಲ್ಲಿ ವಿಪಕ್ಷಗಳ ಹಲವು ಕಿರಿಯ, ಹಿರಿಯ ನಾಯಕರಿಂದ ವೈಯಕ್ತಿಕ ನಿಂದನೆ, ಚಾರಿತ್ರ್ಯಹನನ ಮಾಡುವಂತಹ ಪದಬಳಕೆ ಎಲ್ಲವನ್ನೂ ಕೇಳಿದ್ದೇನೆ, ಎದುರಿಸಿದ್ದೇನೆ.
ಆದರೆ ಇದೇ ಮೊದಲ ಬಾರಿಗೆ ಅರವಿಂದ ಬೆಲ್ಲದ್ ಅವರು ತಾವು ಬಳಸಿದ ಪದದ ಬಗ್ಗೆ ಸ್ವತಃ ಅವರೇ ಬೇಸರ ವ್ಯಕ್ತಪಡಿಸಿ, ಪತ್ರದ ಮೂಲಕ ಕ್ಷಮೆ ಕೇಳಿ ಹೊಸ ತಲೆಮಾರಿನ ರಾಜಕಾರಣಿಗಳಿಗೆ ಮೇಲ್ಪಂಕ್ತಿ ಹಾಕಿಕೊಟ್ಟಿದ್ದಾರೆ ಎಂದಿದ್ದಾರೆ.
https://x.com/siddaramaiah/status/1830906321220112638?t=vm9ut7mxL2ACG5OdWdgO0g&s=19
ಅರವಿಂದ್ ಅವರ ತಂದೆ ಚಂದ್ರಕಾಂತ ಬೆಲ್ಲದ್ ಅವರು ನನ್ನ ದೀರ್ಘಕಾಲದ ಸ್ನೇಹಿತರು. ಅವರೊಬ್ಬ ಸಜ್ಜನ ರಾಜಕಾರಣಿ. ಅವರ ಸಜ್ಜನಿಕೆಯ ಪರಂಪರೆಯನ್ನು ಅರವಿಂದ್ ಮುಂದುವರಿಸಿಕೊಂಡು ಹೋಗಲಿ ಎಂದು ಹಾರೈಸುತ್ತೇನೆ. ರಾಜಕೀಯವು ಬರೀ ಟೀಕೆ, ಆರೋಪ-ಪ್ರತ್ಯಾರೋಪಗಳಿಂದಲೇ ತುಂಬಿಹೋಗುತ್ತಿರುವ ಈ ಕಾಲದಲ್ಲಿ ಅರವಿಂದ ಬೆಲ್ಲದ್ ಅವರ ನಡೆ ಮೌಲ್ಯಯುತ ರಾಜಕಾರಣದ ಜೀವಂತಿಕೆಯ ಸಂಕೇತವಾಗಿ ಕಾಣುತ್ತಿದೆ. “ಪಶ್ಚಾತಾಪಕ್ಕಿಂತ ದೊಡ್ಡ ಪ್ರಾಯಶ್ಚಿತ ಬೇರೊಂದಿಲ್ಲ” ಎಂಬ ಮಾತು ಈ ಸಂದರ್ಭಕ್ಕೆ ಹೆಚ್ಚು ಅರ್ಥಪೂರ್ಣವೆನಿಸುತ್ತಿದೆ ಎಂದು ಹರ್ಷ ವ್ಯಕ್ತಪಡಿಸಿದ್ದಾರೆ.