ಪ್ರತಿನಿಧಿ ವರದಿ ಚಾಮರಾಜನಗರ
ಕರ್ನಾಟಕ ರಾಜ್ಯ ಛಲವಾದಿ ಕ್ಷೇಮಾಭಿವೃದ್ದಿ ಸಂಘವು ನೊಂದ ಬಡಜನರ ಧ್ವನಿಯಾಗಿ ಕೆಲಸ ಮಾಡುತ್ತದೆ ಎಂದು ಸಂಘದ ಸಂಸ್ಥಾಪಕ ರಾಜ್ಯಾಧ್ಯಕ್ಷ ಚಿದರವಳ್ಳಿ ಮಹದೇವಸ್ವಾಮಿ ಹೇಳಿದರು.
ನಗರದ ಪ್ರವಾಸಿ ಮಂದಿರದಲ್ಲಿ ನಡೆದ ಕರ್ನಾಟಕ ರಾಜ್ಯ ಛಲವಾದಿ ಕ್ಷೇಮಾಭಿವೃದ್ದಿ ಸಂಘದ ಜಿಲ್ಲಾ ಸಮಿತಿ ಸಭೆಯಲ್ಲಿ ಜಿಲ್ಲಾ ಕಾರ್ಯಕಾರಿ ಸಮಿತಿಯನ್ನು ಅವಿರೋಧ ಆಯ್ಕೆ ಮಾಡಿ, ಪದಾಧಿಕಾರಿಗಳಿಗೆ ಆದೇಶ ಪತ್ರ ವಿತರಿಸಿ ಮಾತನಾಡಿದರು.
ಈಗಾಗಲೇ ರಾಜ್ಯದಲ್ಲಿ ಕರ್ನಾಟಕ ರಾಜ್ಯ ಛಲವಾದಿ ಕ್ಷೇಮಾಭಿವೃದ್ದಿ ಸಂಘ ಅಸ್ತಿತ್ವದಲ್ಲಿದ್ದು, ಸಂಘವನ್ನು ಉತ್ತಮ ರೀತಿಯಲ್ಲಿ ನಡೆಸಿಕೊಂಡು, ನೊಂದ ಬಡ ಜನರ ಧ್ವನಿಯಾಗಿ ಕೆಲಸ ಮಾಡಲಾಗುತ್ತಿದೆ ಎಂದರು.
ಸಂಘದ ಸರ್ವತೋಮುಖ ಅಭಿವೃದ್ಧಿ ಕಾರ್ಯಕ್ರಮಗಳನ್ನು ತಾಲೂಕು, ಜಿಲ್ಲಾ ಮತ್ತು ರಾಜ್ಯಾದ್ಯಂತ ಹಮ್ಮಿಕೊಳ್ಳುವುದು, ಸಂಘಟನೆ ಹಾಗೂ ಶೈಕ್ಷಣಿಕ, ಸಾಂಸ್ಕೃತಿಕ, ಸಾಮಾಜಿಕ ಪ್ರಗತಿಯೂ ಸೇರಿದಂತೆ ಛಲವಾದಿ ಸಮಾಜದ ಕುಂದು ಕೊರತೆಗಳಿಗೆ ಸ್ಪಂಧಿಸುವ ಜತೆಗೆ ಅವರ ಸಮಸ್ಯೆಗಳನ್ನು ಸಂಬಂಧಪಟ್ಟವರ ಗಮನಕ್ಕೆ ತರುವ ಕೆಲಸದಲ್ಲಿ ಸಂಘವು ಕ್ರಿಯಾಶೀಲವಾಗಿದೆ ಎಂದರು.
ಕರ್ನಾಟಕ ರಾಜ್ಯ ಛಲವಾದಿ ಕ್ಷೇಮಾಭಿವೃದ್ಧಿ ಸಂಘದ ಜಿಲ್ಲಾ ಕಾರ್ಯಕಾರಿ ಸಮಿತಿಗೆ ಅವಿರೋಧ ವಾಗಿ ಆಯ್ಕೆಯಾದ ಜಿಲ್ಲಾಧ್ಯಕ್ಷ ಎಂ.ಶಿವನಾಗಣ್ಣ, ಉಪಾಧ್ಯಕ್ಷ ಸಿ.ಸೋಮಣ್ಣ, ಮಹಾಲಿಂಗಯ್ಯ, ಪ್ರಧಾನ ಕಾರ್ಯದರ್ಶಿ ಸೋಮಸುಂದರ, ಖಜಾಂಚಿ ಎ.ಶಿವಣ್ಣ, ಜಂಟಿ ಕಾರ್ಯದರ್ಶಿ ಬಿ.ರವಿ, ಎಸ್.ಸುರೇಶ್, ನಾಗರತ್ನ, ಸಂಘಟನಾ ಕಾರ್ಯದರ್ಶಿ ಪಿ.ಸುರೇಂದ್ರಕುಮಾರ್, ಪ್ರಸಾದ್, ಸಿದ್ದರಾಜು, ಸಹಕಾರ್ಯದರ್ಶಿ ಪುಟ್ಟನಂಜಯ್ಯ, ಪುಟ್ಟಲಿಂಗಮ್ಮ ಅವರಿಗೆ ರಾಜ್ಯಾಧ್ಯಕ್ಷ ಚಿದರವಳ್ಳಿ ಮಹದೇವಸ್ವಾಮಿ ಆದೇಶಪತ್ರ ವಿತರಿಸಿದರು.
ಸಂಘದ ರಾಜ್ಯ ಸಂಘಟನಾ ಕಾರ್ಯದರ್ಶಿ ಸಿ.ಎನ್.ರಾಜೇಂದ್ರ ಪ್ರಸಾದ್ ಸೇರಿದಂತೆ ಇತರರು ಇದ್ದರು.