ಪ್ರತಿನಿಧಿ ವರದಿ ಮಡಿಕೇರಿ
ರೋಟರಿ ಸಂಸ್ಥೆ ಹಾಗೂ ಆದಾಯ ತೆರಿಗೆ ಇಲಾಖೆಯ ಸಹಭಾಗಿತ್ವದಲ್ಲಿ ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಗೆ ಆದಾಯ ತೆರಿಗೆಯ ಬಗ್ಗೆ ಅರಿವು ಕಾರ್ಯಕ್ರಮ ನಡೆಯಿತು.
ಕಾಲೇಜಿನ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದ ರೋಟರಿ ಸಂಸ್ಥೆಯ ಅಧ್ಯಕ್ಷ ರೋಟರಿಯನ್ ಎಂ.ಸುದಯ್ ನಾಣಯ್ಯ ಅವರು, ಆಡಳಿತ ವ್ಯವಸ್ಥೆ ಜಾರಿಗೆ ಬಂದಲ್ಲಿಂದ ತೆರಿಗೆ ಸಂಗ್ರಹ ಅದರ ಭಾಗವಾಗಿ ಸೇರಿಕೊಂಡಿದೆ. ಈ ವಿಚಾರದಲ್ಲಿ ಮೈಸೂರಿನ ಮಹಾರಾಜರಾದ ನಾಲ್ವಡಿ ಕೃಷ್ಣರಾಜ್ ಒಡೆಯರ್ ಅವರು ಉತ್ತಮ ಆಡಳಿತಗಾರರಾಗಿ ಪ್ರಸಿದ್ಧಿ ಪಡೆದಿದ್ದರು. ಸಂವಿಧಾನ ರಚನೆಯಾದ ನಂತರ ಅದರಡಿಯಲ್ಲಿ ರೂಪಿಸಿದ ಕಾಯ್ದೆಯನ್ವಯ ಭಾರತ ದೇಶದಲ್ಲಿ ತೆರಿಗೆ ಸಂಗ್ರಹ ಮಾಡಲಾಗುತ್ತಿದೆ ಎಂದು ತಿಳಿಸಿದರು. ರೋಟರಿಯನ್ ಈಶ್ವರ್ ಭಟ್ ಅವರು ಮಾತನಾಡಿ, ಆದಾಯ ತೆರಿಗೆ ಕಾಯ್ದೆಯಲ್ಲಿ ಆದಾಯವನ್ನು ವಿವಿಧ ರೀತಿಯಲ್ಲಿ ವಿಂಗಡಿಸಲಾಗಿದೆ. ಅದರನ್ವಯ ತೆರಿಗೆಯನ್ನು ಜನರಿಂದ ಪಡೆಯಲಾಗುತ್ತದೆ. ವಿದ್ಯಾರ್ಥಿಗಳಿಗೆ ತೆರಿಗೆಯ ಬಗ್ಗೆ ಏನೇ ಸಂಶಯಗಳಿದ್ದರೂ ಮುಕ್ತ ಮನಸ್ಸಿನಿಂದ ಬಗೆಹರಿಸಿಕೊಳ್ಳಬೇಕು. ಆ ಮೂಲಕ ಜ್ಞಾನವನ್ನು ಹೆಚ್ಚಿಸಿಕೊಳ್ಳಬೇಕು, ವಿದ್ಯಾರ್ಥಿಗಳಿಗೆ ಅಗತ್ಯ ಸಹಕಾರ ನೀಡುವುದಾಗಿ ಹೇಳಿದರು.
ಕಾಲೇಜಿನ ಪ್ರಾಂಶುಪಾಲ ವಿಜಯ್ ಉಪಸ್ಥಿತರಿದ್ದರು. ಸುಮಾರು 200ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿ ಆದಾಯ ತೆರಿಗೆಯ ಮಹತ್ವದ ಕುರಿತು ಮಾಹಿತಿ ಪಡೆದುಕೊಂಡರು. ಆದಾಯ ತೆರಿಗೆ ಇಲಾಖೆಯ ಸಿಬ್ಬಂದಿ ಸಂಭ್ರಮ್ ಕಾರ್ಯಕ್ರಮ ನಿರೂಪಿಸಿದರು.