ಮುಡಾದಲ್ಲಿ 50:50 ಅನುಪಾತದಡಿ ನಿವೇಶನ ಹಂಚಿಕೆಯಲ್ಲಿ ನಡೆದಿರುವ ಬಹುಕೋಟಿ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಹೆಸರು ತಳುಕು ಹಾಕಿಕೊಂಡ ಬಳಿಕ ನಡೆದ ಘಟನೆಗೆ ಇದೀಗ ಮಹತ್ವದ ತಿರುವು ಸಿಕ್ಕಿದೆ. ಸಿಎಂ ಸಿದ್ದರಾಮಯ್ಯ ವಿರುದ್ಧ ದಾಖಲಾಗಿದ್ದ ದೂರುಗಳನ್ನು ಆಧರಿಸಿ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಸೂಚಿಸಿದ ಕ್ರಮ ಪ್ರಶ್ನಿಸಿ ನ್ಯಾಯಾಲಯದ ಮೆಟ್ಟಿಲೇರಿದ್ದ ಸಿದ್ದರಾಮಯ್ಯಗೆ ಹಿನ್ನಡೆಯಾಗಿರುವುದು ಬಿಗ್ ಶಾಕ್ ನೀಡಿದೆ. ಹೈಕೋರ್ಟ್ ಆದೇಶ ಹೊರ ಬೀಳುತ್ತಿದ್ದಂತೆ ಜನತಾ ಪ್ರತಿನಿಧಿಗಳ ನ್ಯಾಯಾಲಯ ಕೂಡ ಸಿದ್ದರಾಮಯ್ಯ ವಿರುದ್ಧ ಎಫ್ಐಆರ್ ದಾಖಲಿಸುವಂತೆ ಮೈಸೂರು ಲೋಕಾಯುಕ್ತಕ್ಕೆ ಸೂಚನೆ ನೀಡಿದೆ. ಈ ಮೂಲಕ ಸಿದ್ದರಾಮಯ್ಯ ಮತ್ತಷ್ಟು ಸಂಕಷ್ಟಕ್ಕೆ ಸಿಲುಕಿದ್ದಾರೆ. ಒಂದು ವೇಳೆ ಎಫ್ಐಆರ್ ದಾಖಲಾದರೆ ಖುದ್ದು ಸಿದ್ದರಾಮಯ್ಯ ಅವರೇ ಲೋಕಾಯುಕ್ತ ಕಚೇರಿಗೆ ಭೇಟಿ ನೀಡಿ ವಿಚಾರಣೆ ಎದುರಿಸಬೇಕಾಗುತ್ತದೆ. ತವರು ಜಿಲ್ಲೆಯಲ್ಲಿ ನಡೆದಿರುವ ಹಗರಣ ಸಂಬಂಧ, ತವರು ಜಿಲ್ಲೆಯಲ್ಲೇ ವಿಚಾರಣೆ ಎದುರಿಸುವುದು ಸಿಎಂ ಸಿದ್ದರಾಮಯ್ಯ ಮಾತ್ರವಲ್ಲದೇ ಕಾಂಗ್ರೆಸ್ ಪಕ್ಷವನ್ನು ಮುಜುಗರಕ್ಕೀಡು ಮಾಡಲಿದೆ. ಅಲ್ಲದೇ ಕಾಂಗ್ರೆಸ್ ಪಕ್ಷದ ಇಮೇಜ್ ಗೂ ಧಕ್ಕೆಯಾಗಲಿದೆ. ಹಾಗಾಗಿ ಕಾಂಗ್ರೆಸ್ ಪಕ್ಷದಲ್ಲಿ ತಲ್ಲಣ ಉಂಟಾಗಿದ್ದು, ಮುಂದೇನು ಮಾಡಬೇಕೆಂಬ ಚರ್ಚೆ ನಡೆದಿದೆ.
ಸಿದ್ದರಾಮಯ್ಯ ವಿರುದ್ಧ ಎಫ್ಐಆರ್ ದಾಖಲಾದರೆ ಕಳೆಗುಂದಲಿರುವ ದಸರಾ ಮಹೋತ್ಸವ!
ಇನ್ನು ಈ ಬಾರಿಯ ದಸರಾ ಮಹೋತ್ಸವದ ಉದ್ಘಾಟನೆಗೆ ಕೆಲವೇ ದಿನಗಳು ಮಾತ್ರ ಬಾಕಿಯಿವೆ. ಆದರೂ ಕಾರ್ಯಕ್ರಮಗಳ ಪಟ್ಟಿ ಅಂತಿಮಗೊಂಡಿಲ್ಲ. ಕೆಲ ಕಾರ್ಯಕ್ರಮಗಳ ಸ್ಥಳ ಬದಲಾವಣೆ ಮಾಡಿರುವುದರಿಂದ ಗೊಂದಲದ ಗೂಡಾಗಿ ಪರಿಣಮಿಸಿದೆ. ಮಹಾರಾಜ ಕಾಲೇಜು ಮೈದಾನದಲ್ಲಿ ನಡೆಯುತ್ತಿದ್ದ ಯುವ ದಸರಾ ಕಾರ್ಯಕ್ರಮವನ್ನು ನಗರದ ಹೊರವಲಯದ ರಿಂಗ್ ರಸ್ತೆಯ ಉತ್ತನಹಳ್ಳಿ ಬಳಿಯಿರುವ ವಿಶಾಲವಾದ ಮೈದಾನಕ್ಕೆ ಸ್ಥಳಾಂತರಿಸಲಾಗಿದೆ. ಸ್ಕೌಟ್ಸ್ ಅಂಡ್ ಗೈಡ್ಸ್ ಮೈದಾನದಲ್ಲಿ ನಡೆಯುತ್ತಿದ್ದ ಆಹಾರ ಮೇಳವನ್ನು ಮಹಾರಾಜ ಕಾಲೇಜು ಮೈದಾನಕ್ಕೆ ಸ್ಥಳಾಂತರ ಮಾಡಲಾಗಿದೆ. ಕಾಡಾ ಕಚೇರಿ ಆವರಣದಲ್ಲಿ ನಡೆಯುತ್ತಿದ್ದ ಪುಸ್ತಕ ಮೇಳವನ್ನು ಸ್ಕೌಟ್ಸ್ ಅಂಡ್ ಗೈಡ್ಸ್ ಮೈದಾನಕ್ಕೆ ಸ್ಥಳಾಂತರಿಸಲಾಗಿದೆ. ಇದೇ ರೀತಿ ದಸರಾ ಮಹೋತ್ಸವದ ಕೆಲ ಕಾರ್ಯಕ್ರಮಗಳ ಸ್ಥಳ ಬದಲಾವಣೆ ಮಾಡಿರುವುದು ಕೂಡ ಸಾಕಷ್ಟು ಗೊಂದಲಕ್ಕೆ ಕಾರಣವಾಗಿದೆ. ಕಡೇ ಗಳಿಗೆಯಲ್ಲಿ ಕಾರ್ಯಕ್ರಮಗಳ ಸ್ಥಳ ಬದಲಾವಣೆ ಮಾಡಿರುವುದಕ್ಕೆ ಪರ-ವಿರೋಧ ಚರ್ಚೆಗೂ ಗ್ರಾಸವಾಗಿದೆ. ಎಲ್ಲವೂ ಅಧಿಕಾರಿಗಳ ಅಣತಿಯಂತೆ ನಡೆಯುತ್ತಿದ್ದು, ದಸರಾ ಉಪ ಸಮಿತಿಗಳಿಗೆ ಅಧಿಕಾರೇತರರನ್ನು ನೇಮಿಸುವ ಪ್ರಕ್ರಿಯೆ ನೆನೆಗುದಿಗೆ ಬಿದ್ದಿದೆ. ಇದರ ನಡುವೆಯೇ ಸಿಎಂ ಸಿದ್ದರಾಮಯ್ಯ ವಿರುದ್ಧ ಎಫ್ಐಆರ್ ದಾಖಲಾಗುವ ಸಾಧ್ಯತೆ ಇದೆ ಎಂಬ ವಿಚಾರ ಬರಸಿಡಿಲಿನಂತೆ ಬಂದು ಅಪ್ಪಳಿಸಿದೆ. ಎಫ್ಐಆರ್ ದಾಖಲಾದರೆ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕಾಗುತ್ತದೆ ಎಂಬ ವಿಚಾರ ಮುನ್ನೆಲೆಗೆ ಬಂದಿದೆ. ಒಂದು ವೇಳೆ ಸಿದ್ದರಾಮಯ್ಯ ರಾಜೀನಾಮೆ ನೀಡಿದರೆ ಮುಂದೇನು ಮಾಡಬೇಕೆಂಬ ಜಿಜ್ಞಾಸೆಗೆ ಸಿಲುಕಿರುವ ಅಧಿಕಾರ ವರ್ಗಕ್ಕೆ ದಿಕ್ಕು ತೋಚದಂತಾಗಿದೆ. ಮೊದಲೇ ಕುಂಟುತ್ತಾ ಸಾಗಿದ್ದ ದಸರಾ ಸಿದ್ದತಾ ಕಾರ್ಯಗಳು ಇದೀಗ ಮತ್ತಷ್ಟು ಕುಂಠಿತವಾಗುವ ಆತಂಕವಿದೆ. ಒಟ್ಟಿನಲ್ಲಿ ದಸರಾ ಮಹೋತ್ಸವದ ಉದ್ಘಾಟನೆಗೆ ಒಂದು ವಾರ ಬಾಕಿಯಿರುವಾಗ ಸಿಎಂ ಸಿದ್ದರಾಮಯ್ಯ ಕುರ್ಚಿಗೆ ಕಂಟಕ ಎದುರಾಗಿದೆ. ಇದರ ಕರಾಳ ಛಾಯೆ ದಸರಾ ಮಹೋತ್ಸವದ ಮೇಲೆ ಆವರಿಸಿದ್ದು, ಮುಂದೇನಾಗುವುದೋ ಕಾಯ್ದು ನೋಡಬೇಕಾಗಿದೆ.