ಮೈಸೂರು: ರಾಜ್ಯಪಾಲರ ಪ್ರಾಸಿಕ್ಯೂಷನ್ ಅನುಮತಿಯನ್ನು ಪ್ರಶ್ನಿಸಿ ಕೋರ್ಟ್ ಮೊರೆ ಹೋಗಿದ್ದ ಸಿಎಂ ಸಿದ್ದರಾಮಯ್ಯ ಅವರ ಅರ್ಜಿಯನ್ನು ನ್ಯಾಯಪೀಠ ವಜಾಗೊಳಿಸಿದ ಬೆನ್ನಲ್ಲೇ ಸಿಎಂ ಗೆ ಒಂದರ ಮೇಲೊಂದು ತಲೆಬಿಸಿ ಶುರುವಾಗಿದೆ. ಸಿಎಂ ಮೇಲೆ FIR ದಾಖಲಿಸಿ, ತನಿಖೆ ಶುರುಮಾಡುವಂತೆ ಲೋಕಾಯುಕ್ತಾಗೆ ನ್ಯಾಯಾಲಯ ಸೂಚನೆ ನೀಡಿತ್ತು. ಹೀಗಾಗಿ ವಿಪಕ್ಷಗಳು ಸಿಎಂ ಸಿದ್ದರಾಮಯ್ಯ ಅವರ ದುಂಬಾಲು ಬಿದ್ದು ರಾಜೀನಾಮೆಗೆ ಒತ್ತಾಯಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಇಂದು ಮೈಸೂರು ಜಿಲ್ಲಾ ಪಂಚಾಯತ್ ಗೆ ಮುತ್ತಿಗೆ ಹಾಕುವುದಾಗಿ ಬಿಜೆಪಿ ತಿಳಿಸಿತ್ತು.
ಇಂದು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಸಿಎಂ ಸಿದ್ದರಾಮಯ್ಯ ಕೆಡಿಪಿ ಸಭೆ ನಡೆಸಲಿದ್ದು, ಈ ಹಿನ್ನೆಲೆ ಬೆಳಿಗ್ಗೆ 10 ಗಂಟೆಗೆ ಪ್ರತಿಭಟನೆ ಮಾಡಿ ಮುತ್ತಿಗೆ ಹಾಕುವುದಾಗಿ ಬಿಜೆಪಿ ನಾಯಕರು ತಿಳಿಸಿದ್ದರು.
ಮುಡಾ ಹಗರಣದಲ್ಲಿ ಸಿಲುಕಿರುವ ಸಿಎಂ ಸಿದ್ದರಾಮಯ್ಯ ಅವರು ರಾಜಿನಾಮೆ ನೀಡಿ ತನಿಖೆ ಎದುರಿಸಬೇಕೆಂದು ಬಿಜೆಪಿ ಒತ್ತಾಯಿಸಿದೆ.
ಇನ್ನು ಬಿಜೆಪಿ ನಾಯಕರು, ಕಾರ್ಯಕರ್ತರು ಜಿಲ್ಲಾ ಪಂಚಾಯತಿ ಮುತ್ತಿಗೆಗೆ ಮುಂದಾಗಿರುವ ಹಿನ್ನೆಲೆ ಮೈಸೂರು ಜಿಲ್ಲಾ ಪಂಚಾಯ್ತಿ ಬಳಿ ಪೊಲೀಸ್ ಸರ್ಪಗಾವಲು ಹಾಕಲಾಗಿದೆ. ಮುನ್ನೆಚ್ಚರಿಕೆಯಾಗಿ ಬಂದೋಬಸ್ತ್ ಮಾಡಿರುವ ಪೋಲಿಸ್ ಇಲಾಖೆ, ಜಿಲ್ಲಾ ಪಂಚಾಯತಿ ಬಳಿ ನೂರಾರು ಪೊಲೀಸರನ್ನು ಭದ್ರತೆಗೆ ನಿಯೋಜನೆ ಮಾಡಿದೆ.