ಪ್ರತಿನಿಧಿ ವರದಿ ಚಾಮರಾಜನಗರ
ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ವಿವಿಧ ವೃಂದದ ಸಿಬ್ಬಂದಿಗಳು ನಗರದಲ್ಲಿ ಅನಿರ್ಧಿಷ್ಟಾವಧಿ ಪ್ರತಿಭಟನೆ ನಡೆಸಿದರು.
ನಗರದ ಜಿಲ್ಲಾಡಳಿತ ಭವನದ ಎದುರು ಜಮಾಯಿಸಿದ ಆರ್ಡಿಪಿಆರ್ ಕುಟುಂಬದ ವಿವಿಧ ವೃಂದದ ಸಿಬ್ಬಂದಿಗಳು ಮೌನವಾಗಿ ಕುಳಿತು ಪ್ರತಿಭಟನೆ ನಡೆಸಿದರು.
ರಾಜ್ಯದ ಶೇ.68 ರಿಂದ 70 ಜನರಿಗೆ ಸ್ಥಳೀಯ ಸಂಸ್ಥೆಯಾದ ಗ್ರಾಪಂಗಳಿಂದ ಶೇ.70 ರಷ್ಟು ಸೇವೆಯನ್ನು ನೀಡಲಾಗುತ್ತಿದೆ. ಈ ವ್ಯವಸ್ಥೆಯಲ್ಲಿ ಕೆಲಸ ಮಾಡುತ್ತಿರುವ ಗ್ರಾಪಂ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು, ಕಾರ್ಯದರ್ಶಿಗಳು, ದ್ವಿತೀಯ ದರ್ಜೆ ಲೆಕ್ಕ ಸಹಾಯಕರು, ಗ್ರಾಪಂ ಎಲ್ಲ ಸಿಬ್ಬಂದಿ ಕಾರ್ಯ ನಿರ್ವಯಣೆಯಲ್ಲಿ ಎದುರಿ ಸುತ್ತಿರುವ ಹಲವು ಸಮಸ್ಯೆಗಳನ್ನು ಪರಿಹರಿಸುವಂತೆ ಹಾಗೂ ಸೂಕ್ತ ವ್ಯವಸ್ಥೆ ಕಲ್ಪಿಸುವಂತೆ ಸರ್ಕಾರ ಮತ್ತು ಇಲಾಖೆಗೆ ಹಲವಾರು ವರ್ಷಗಳಿಂದ ಮನವಿ ಸಲ್ಲಿಸು ತ್ತಾ ಬಂದರೂ ಯಾವುದೇ ಸಮಸ್ಯೆ ಪರಿಹಾರವಾಗಿಲ್ಲ ಎಂದು ಪ್ರತಿಭಟನಾಕಾರರು ಅಸಮಾಧಾನ ವ್ಯಕ್ತಪಡಿಸಿದರು.
ರಾಜ್ಯದ ಎಲ್ಲ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳ ಹುದ್ದೆಯನ್ನು ಗೆಜೆಟೆಡ್ ಗ್ರೂಪ್ ‘ಬಿ’ಗೆ ಉನ್ನತೀಕರಿಸಬೇಕು. ಗ್ರಾಪಂ ಪಂಚ ನೌಕರರುಗಳಿಗೆ ವೇತನ ಶ್ರೇಣಿ ಮತ್ತು ಸೇವಾ ಹಿರಿತನದ ವೇತನವನ್ನು ಜಾರಿ ಮಾಡಿ, ಕಾರ್ಮಿಕ ಇಲಾಖೆಯ ವೇತನವನ್ನು ಹೊರತುಪಡಿಸಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಇಂದಲೇ ವೇತನ ನಿಗದಿಪಡಿಸಿ, ನೌಕರರ ಖಾತೆಗಳಿಗೆ ಸಂಬಳವನ್ನು ಪಾವತಿ ಮಾಡಬೇಕು. ಗ್ರೇಡ್-1 ಕಾರ್ಯದರ್ಶಿಗಳ ವೃಂದದ ಜೇಷ್ಠತಾ ಪಟ್ಟಿಯನ್ನು ತುರ್ತಾಗಿ ಪ್ರಕಟಣೆ ಮಾಡಿ, ಮುಂಬಡ್ತಿಯಿಂದ ವಂಚಿತರಾಗಿರುವ ಸಿಬ್ಬಂದಿಗೆ ಕಾಲಮಿತಿಯೊಳಗೆ ಮುಂಬಡ್ತಿ ನೀಡಲು ಕ್ರಮವಹಿಸಬೇಕು. ಸುಮಾರು 14 ವರ್ಷದಿಂದ ಗ್ರೇಡ್-2 ಕಾರ್ಯದರ್ಶಿ ಹುದ್ದೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವವರಿಗೆ ನೇರ ನೇಮಕಾತಿ ಕೋಟಾದಡಿ ಏಕಕಾಲದಲ್ಲಿ ಬಡ್ತಿ ನೀಡಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.
ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಪಾತ್ರಾಂಕಿತ ಅಧಿಕಾರಿಗಳ ವಿಭಾಗದಲ್ಲಿ ಸುಮಾರು 15 ರಿಂದ 20 ವರ್ಷಗಳಿಂದ ಉಪ ಕಾರ್ಯದರ್ಶಿ ವೃಂದದಲ್ಲಿ ಸೇವೆ ಸಲ್ಲುತ್ತಿರುವ ಅಧಿಕಾರಿಗಳಿಗೆ ಶೇ.33 ರಷ್ಟು ಜಿಲ್ಲಾ ಪಂಚಾಯತಿಗಳ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ಹುದ್ದೆ ಯನ್ನು ನೇಮಿಸಲಿರಿಸಿ, ವೃಂದ ಮತ್ತು ನೇಮಕಾತಿ ನಿಯಮಗಳಿಗೆ ಬದಲಾವಣೆ ತರಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.
ಗ್ರಾಪಂ ಸದಸ್ಯರ ಒಕ್ಕೂಟದ ಜಿಲ್ಲಾಧ್ಯಕ್ಷ ಕೆಂಪರಾಜು, ಉಪಾಧ್ಯಕ್ಷ ನಜೀರ್ ಉಲ್ಲಾಖಾನ್, ಪಿಡಿಒ ಸಂಘದ ಜಿಲ್ಲಾಧ್ಯಕ್ಷ ಕುಮಾರಸ್ವಾಮಿ, ಗೌರವಾಧ್ಯಕ್ಷ ಎಂ.ಜಿ.ಮಾದಪ್ಪ, ಪ್ರಧಾನ ಕಾರ್ಯದರ್ಶಿ ಶಾಂತರಾಜು, ಸುರೇಶ್, ಮಹದೇವಸ್ವಾಮಿ, ಕಾರ್ಯದರ್ಶಿ ಲಕ್ಷ್ಮಣ ನಾಯಕ, ಮಹದೇವಪ್ಪ, ಎಸ್ಡಿಎ ಸಂಘದ ಜಿಲ್ಲಾಧ್ಯಕ್ಷ ಶಿವ ಮಾದಪ್ಪ, ನಾಗೇಂದ್ರ, ಡಿಇಒ ಸಂಘದ ಅಧ್ಯಕ್ಷರು ಸೇರಿದಂತೆ ಇತರರು ಇದ್ದರು.
8ಸಿಎಚ್ಎನ್.1: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ವಿವಿಧ ವೃಂದದ ಸಿಬ್ಬಂದಿ ಚಾಮರಾಜನಗರದಲ್ಲಿ ಅನಿರ್ಧಿಷ್ಟಾವಧಿ ಪ್ರತಿಭಟನೆ ನಡೆಸಿದರು.