ಗುಂಡ್ಲುಪೇಟೆ : ತಾಲೂಕಿನ ಹಾಲಹಳ್ಳಿ ಗ್ರಾಮದ ಚೆಕ್ ಡಾಮ್ ಹಾಗೂ ಶಿವಪುರ ಗ್ರಾಮದ ಕಲ್ಲುಕಟ್ಟೆ ಜಲಾಶಯದ ಅಭಿವೃದ್ಧಿಗೆ ಸುಮಾರು 2 ಕೋಟಿ ರೂ ವೆಚ್ಚದ ಅಭಿವೃದ್ಧಿ ಕಾಮಗಾರಿಗೆ ಶಾಸಕ ಎಚ್.ಎಂ.ಗಣೇಶ್ ಪ್ರಸಾದ್ ಭೂಮಿ ಪೂಜೆ ನೆರವೇರಿಸಿದರು.
ಬಳಿಕ ಮಾತನಾಡಿದ ಅವರು, ಕ್ಷೇತ್ರಕ್ಕೆ ಮುಖ್ಯಮಂತ್ರಿಗಳ ವಿಶೇಷ ಅನುದಾನ ಸೇರಿದಂತೆ 150 ಕೋಟಿ ಹೆಚ್ಚು ಅನುದಾನವನ್ನು ತರುವ ಮೂಲಕ ತಾಲೂಕಿನ ಗ್ರಾಮೀಣ ರಸ್ತೆಗಳು ಹಾಗೂ ಗ್ರಾಮದ ರಸ್ತೆಗಳು ಸೇರಿದಂತೆ ಸಮುದಾಯ ಭವನಗಳ ನಿರ್ಮಾಣ ಮತ್ತು ಇತರೆ ಅಭಿವೃದ್ಧಿ ಕಾಮಗಾರಿಗಳಿಗೆ ವಿಶೇಷ ಒತ್ತು ನೀಡಲಾಗಿದೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಹೆಚ್ಚು ಅನುದಾನವನ್ನು ತಂದು ಅಭಿವೃದ್ಧಿ ಕೆಲಸಗಳಿಗೆ ವಿಶೇಷ ಆದ್ಯತೆ ನೀಡಲಾಗುವುದೆಂದರು.
ತಾಲೂಕಿನ ಅಭಿವೃದ್ಧಿಗೆ ಪಿ ಡಬ್ಲ್ಯೂಡಿ ಇಲಾಖೆ ಹಾಗೂ ಮುಜರಾಯಿ ಇಲಾಖೆ ಸೇರಿದಂತೆ ಇತರೆ ಇಲಾಖೆಗಳಿಂದ ಈಗಾಗಲೇ ಅನುದಾನ ಕೋರಿ ಸರ್ಕಾರಕ್ಕೆ ಪ್ರಸ್ತಾವನೆ ನೀಡಲಾಗಿದ್ದು, ಶೀಘ್ರದಲ್ಲೇ ಸರ್ಕಾರದಿಂದ ಅನುದಾನ ಬಿಡುಗಡೆ ಆಗಲಿದದೆ. ತಾಲೂಕಿನ ಮುಖ್ಯ ರಸ್ತೆಗಳು , ಅಭಿವೃದ್ಧಿ ಕೆಲಸ ಕಾರ್ಯಗಳು ನಡೆಯಲಿವೆ. ಸಿಎಂ ಸಿದ್ದರಾಮಯ್ಯ ಅವರು ತಾಲೂಕಿನ ಮೇಲೆ ವಿಶೇಷ ಆಸಕ್ತಿ ಹೊಂದಿದ್ದು, ಇನ್ನು ಉಳಿದ ಮೂರುವರೆ ವರ್ಷದಲ್ಲಿ ಕ್ಷೇತ್ರವನ್ನು ಮತ್ತಷ್ಟು ಅಭಿವೃದ್ಧಿಪಡಿಸಲಾಗುವುದು ಎಂದರು.
ಈ ಸಂದರ್ಭದಲ್ಲಿ ಚಾಮುಲ್ ನಿರ್ದೇಶಕ ನಂಜುಂಡ ಪ್ರಸಾದ್, ಗ್ರಾ .ಪಂ.ಅಧ್ಯಕ್ಷರು, ಸದಸ್ಯರು, ಇಲಾಖೆ ಅಧಿಕಾರಿಗಳು, ಪಕ್ಷದ ಮುಖಂಡರು, ಕಾರ್ಯಕರ್ತರು, ಗ್ರಾಮಸ್ಥರು ಇತರರು ಹಾಜರಿದ್ದರು.