ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಜೈಲಿನಲ್ಲಿರುವ ನಟ ದರ್ಶನ್ ಹೈಕೋರ್ಟ್ನಲ್ಲಿ ಜಾಮೀನಿಗೆ ಅರ್ಜಿ ಸಲ್ಲಿಸಿದ್ದಾರೆ. ಬೆನ್ನು ನೋವಿಗೆ ತುರ್ತು ಚಿಕಿತ್ಸೆಯ ಅಗತ್ಯವಿದೆ ಎಂದು ಮನವಿ ಮಾಡಿ, ಜಾಮೀನಿಗೆ 300 ಪುಟಗಳ ದಾಖಲೆ ಸಲ್ಲಿಸಿರುವ ನಟ ದರ್ಶನ್ ಜಾಮೀನಿಗಾಗಿ ಇದೀಗ ಹೈ ಕೋರ್ಟ್ ಮೊರೆ ಹೋಗಿದ್ದಾರೆ.
ದರ್ಶನ್ ಅವರಿಗೆ ಬೆನ್ನುನೋವಿನ ಸಮಸ್ಯೆಯಿದ್ದು, ಅವರಿಗೆ ತುರ್ತು ಚಿಕಿತ್ಸೆಯ ಅಗತ್ಯವಿದೆ. ಹಾಗಾಗಿ ಅವರಿಗೆ ತ್ವರಿತವಾಗಿ ಜಾಮೀನು ಮಂಜೂರು ಮಾಡಬೇಕೆಂದು ಜಾಮೀನು ಅರ್ಜಿಯಲ್ಲಿ ಕೋರಲಾಗಿದೆ. ಕಳೆದ 120 ದಿನಗಳಿಂದ ಜೈಲಿನಲ್ಲಿದ್ದ ದರ್ಶನ್ ಮತ್ತು ಪವಿತ್ರಾ ಗೌಡಗೆ ಮೊನ್ನೆಯಷ್ಟೇ ನ್ಯಾಯಾಲಯದಿಂದ ಜಾಮೀನು ನಿರಾಕರಿಸಲಾಗಿದೆ. ಸದ್ಯ ದರ್ಶನ್ ಬಳ್ಳಾರಿ ಜೈಲಿನಲ್ಲಿದ್ದಾರೆ. ಜೂನ್ 8ರಂದು ರೇಣುಕಾಸ್ವಾಮಿ ಕೊಲೆ ನಡೆದಿತ್ತು. ಜೂನ್ 11ರಂದು ದರ್ಶನ್ ಮತ್ತಿತರ ಆರೋಪಿಗಳನ್ನು ಬಂಧಿಸಲಾಗಿತ್ತು. ಈ ಹತ್ಯೆ ಪ್ರಕರಣದಲ್ಲಿ ದರ್ಶನ್ ಆರೋಪಿ ನಂ 2 ಆಗಿದ್ದರೆ ಇವರ ಆಪ್ತ ಸ್ನೇಹಿತೆ ಪವಿತ್ರಾ ಗೌಡ ಮೊದಲ ಆರೋಪಿಯಾಗಿದ್ದಾರೆ.