ಮೈಸೂರು: ನಿವೇಶನ ಅಕ್ರಮ ಹಂಚಿಕೆ ಸೇರಿದಂತೆ ಒಂದಿಲ್ಲೊಂದು ಹಗರಣಗಳಿಂದ ಗಮನ ಸೆಳೆದಿರುವ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ದಿನಕ್ಕೊಂದು ಬೆಳವಣಿಗೆಗಳು ನಡೆಯುತ್ತಿವೆ. ಮುಡಾ ಹಗರಣಗಳ ತನಿಖೆ ನಡೆಯುತ್ತಿರುವ ಬೆನ್ನಲ್ಲೇ ಅಧ್ಯಕ್ಷ ಕೆ. ಮರೀಗೌಡ ರಾಜೀನಾಮೆ ನೀಡಿರುವುದು ಕುತೂಹಲಕ್ಕೆ ಕಾರಣವಾಗಿದೆ. ಇದರ ಜತೆಗೆ, ಪ್ರಾಧಿಕಾರದ ಮುಂದಿನ ಬೆಳವಣಿಗೆ ಏನು ಎಂಬ ಪ್ರಶ್ನೆ ಉದ್ಭವಿಸಿದೆ.
ಮುಡಾ ಹಗರಣ ಬೆಳಕಿಗೆ ಬಂದ ಹಿನ್ನೆಲೆಯಲ್ಲಿ ನಾಲ್ಕೈದು ತಿಂಗಳಿನಿಂದ ಕಚೇರಿಯಲ್ಲಿ ಯಾವುದೇ ಕೆಲಸ ಕಾರ್ಯಗಳು ನಡೆಯುತ್ತಿಲ್ಲ. ಇದರಿಂದಾಗಿ ಈಗಾಗಲೇ ಜನಸಾಮಾನ್ಯರು ಸೇರಿದಂತೆ ರಿಯಲ್ ಎಸ್ಟೇಟ್ ಉದ್ಯಮಿಗಳಿಗೂ ಸಾಕಷ್ಟು ತೊಂದರೆಯಾಗಿದೆ. ಈ ನಡುವೆ, ದಸರಾ ಮುಗಿದ ನಂತರದಲ್ಲಿ ಮುಡಾ ಸಭೆ ನಡೆಸುವ ಭರವಸೆ ನೀಡಿದ್ದ ಅಧ್ಯಕ್ಷ ಕೆ. ಮರೀಗೌಡ ರಾಜೀನಾಮೆ ಸಲ್ಲಿಸಿರುವುದು ಮುಡಾ ಕಾರ್ಯಚಟುವಟಿಕೆಗಳಿಗೆ ಮತ್ತಷ್ಟು ಸಮಸ್ಯೆ ಉಂಟಾಗುವ ಸಾಧ್ಯತೆ ಎದುರಾಗಿದೆ.
ಈ ಎಲ್ಲ ಬೆಳವಣಿಗೆಗಳ ನಡುವೆಯೇ ಪ್ರಾಧಿಕಾರದ ಆಡಳಿತ ಮಂಡಳಿಯನ್ನು ವಜಾಗೊಳಿಸಿ, ಆಡಳಿತಾಧಿಕಾರಿ ನೇಮಕ ಮಾಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಅವರು ಅಗತ್ಯ ತಯಾರಿಗಳನ್ನು ಮಾಡಿಕೊಳ್ಳುತ್ತಿದ್ದಾರೆ ಎನ್ನಲಾಗಿದೆ. ಅ.25ರಂದು ನಡೆಯುವ ಕ್ಯಾಬಿನೆಟ್ ಸಭೆಯಲ್ಲಿ ಮರೀಗೌಡ ಅವರ ರಾಜೀನಾಮೆ ಅಂಗೀಕರಿಸಿ, ಆಡಳಿತಾಧಿಕಾರಿ ನೇಮಕದ ನಿಟ್ಟಿನಲ್ಲಿ ಮುಂದಿನ ಕ್ರಮಗಳನ್ನು ತೆಗೆದುಕೊಳ್ಳುವ ಸಾಧ್ಯತೆ ಇದೆ.
ಸರ್ಕಾರ ಮುಡಾ ಆಡಳಿತ ಮಂಡಳಿಯನ್ನು ವಜಾಗೊಳಿಸಿದರೆ, ಕರ್ನಾಟಕ ನಗರಾಭಿವೃದ್ಧಿ ಪ್ರಾಧಿಕಾರದ ಕಾಯ್ದೆ ಅನ್ವಯ ಪ್ರಾಧಿಕಾರದ ಸಂಪೂರ್ಣ ಅಧಿಕಾರ ಆಡಳಿತಾಧಿಕಾರಿಗೆ ವರ್ಗಾವಣೆ ಆಗಲಿದೆ. ಹೀಗಾಗಿ, ಅಧ್ಯಕ್ಷರ ಅನುಪಸ್ಥಿತಿಯಲ್ಲಿ ಜಿಲ್ಲಾಧಿಕಾರಿಯೇ ಆಡಳಿತಾಧಿಕಾರಿಯಾಗಿ ಕಾರ್ಯನಿರ್ವಹಿಸಲಿದ್ದಾರೆ. ಆದರೆ ಸರ್ಕಾರ ಮೈಸೂರು ಜಿಲ್ಲಾಧಿಕಾರಿಯನ್ನೇ ಆಡಳಿತಾಧಿಕಾರಿಯನ್ನಾಗಿ ನೇಮಕ ಮಾಡುವುದೇ ಅಥವಾ ಬೇರೊಬ್ಬರು ಐಎಎಸ್ ಅಧಿಕಾರಿಯನ್ನು ನೇಮಕ ಮಾಡುವುದೇ ಎಂಬುದು ಸ್ಪಷ್ಟವಾಗಿಲ್ಲ.