ಮೈಸೂರು: ಮುಡಾ ಹಗರಣದ ನೈತಿಕ ಹೊಣೆ ಹೊತ್ತು ಸಿಎಂ ಸಿದ್ದರಾಮಯ್ಯ ಈ ಕೂಡಲೇ ರಾಜೀನಾಮೆ ನೀಡಬೇಕು ಎಂದು ಮೈಸೂರು-ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಇಂದು ಆಗ್ರಹಿಸಿದ್ದಾರೆ.
ಮೈಸೂರಿನ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮುಡಾ ಹಗರಣದ ವಿರುದ್ಧ ಬಿಜೆಪಿ ನಿರಂತರ ಹೋರಾಟ ನಡೆಸುತ್ತಾ ಬಂದಿದೆ. ಬಿಜೆಪಿಯಿಂದ ಬೆಂಗಳೂರಿನಿಂದ ಮೈಸೂರಿನವರೆಗೆ ಪಾದಯಾತ್ರೆ ನಡೆಸಲಾಗಿತ್ತು. ಇದೀಗ ಮುಡಾ ಮೇಲೆ ಇಡಿ ದಾಳಿ ನಡೆದಿದೆ. ನಿಷ್ಪಕ್ಷಪಾತ ತನಿಖೆಯ ದೃಷ್ಟಿಯಿಂದ ಸಿಎಂ ಸಿದ್ದರಾಮಯ್ಯ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ಮುಡಾ ಹಗರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದು ಆಗ್ರಹಿಸಿದ್ದಾರೆ. ಅಲ್ಲದೆ ಮುಡಾ ಹಗರಣವನ್ನು ಸಿಬಿಐಗೆ ವಹಿಸುವಂತೆ ರಾಜ್ಯಪಾಲರಿಗೂ ಮನವಿ ಸಲ್ಲಿಸುತ್ತೇವೆ ಎಂದು ತಿಳಿಸಿದರು.
ಮುಡಾ ಮೇಲೆ ಇಡಿ ದಾಳಿ ರಾಜಕೀಯ ಪ್ರೇರಿತ ಎಂದು ಕಾಂಗ್ರೆಸ್ ನಾಯಕರ ಆರೋಪ ವಿಚಾರವಾಗಿ ಪ್ರತಿಕ್ರಿಯೆ ನೀಡಿ, ಇಡಿ ಸಂಸ್ಥೆ ಸ್ವತಂತ್ರ ತನಿಖಾ ಸಂಸ್ಥೆಯಾಗಿದೆ. ಯಾರ ಹಿಡಿತದಲ್ಲೂ ಇಡಿ ಇಲಾಖೆ ಇಲ್ಲ.
ಅನೇಕ ಪ್ರಕರಣದಲ್ಲಿ ಇಡಿ ನ್ಯಾಯ ಒದಗಿಸಿದೆ. ಅದೇ ರೀತಿ ಮುಡಾದಲ್ಲೂ ಸಂಪೂರ್ಣ ತನಿಖೆ ನಡೆಸುತ್ತದೆ. ಪ್ರಕರಣದ ಸತ್ಯಾಸತ್ಯತೆ ಹೊರ ತರುತ್ತದೆ ಎಂದು ಮೈಸೂರಿನಲ್ಲಿ ಸಂಸದ ಯದುವೀರ್ ಒಡೆಯರ್ ಹೇಳಿಕೆ ನೀಡಿದರು.
ಸುದ್ದಿಗೋಷ್ಠಿಯಲ್ಲಿ ಶಾಸಕ ಶ್ರೀವತ್ಸ, ಮಾಜಿ ಶಾಸಕ ಎಲ್ ನಾಗೇಂದ್ರ, ಬಿಜೆಪಿ ವಕ್ತಾರ ಎಂ ಜಿ ಮಹೇಶ್ ಸೇರಿದಂತೆ ಇತರರು ಭಾಗಿಯಾಗಿದ್ದರು.