- ರಾಜ್ಯ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ನಿರ್ದೇಶಕ ಬಿ.ಕಲ್ಲೇಶ್ ಮಾಹಿತಿ
ತುಮಕೂರು: ಯಶಸ್ಸು ದೊರೆಯಬೇಕಾದರೆ ಕಠಿಣ ಪರಿಶ್ರಮ ಅಗತ್ಯವೆಂದು ರಾಜ್ಯ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ನಿರ್ದೇಶಕ ಬಿ.ಕಲ್ಲೇಶ್ ವಿದ್ಯಾರ್ಥಿಗಳಿಗೆ ಕರೆ ನೀಡಿದರು.
ಜಿಲ್ಲೆಯ ಕೊರಟಗೆರೆ ತಾಲೂಕು ಬಜ್ಜನಹಳ್ಳಿ ಗ್ರಾಮದ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವ್ಯಾಪ್ತಿಯ ಏಕಲವ್ಯ ಮಾದರಿ ವಸತಿ ಶಾಲೆಯಲ್ಲಿ ಇಸ್ರೋ, ಕೇಂದ್ರ ಬುಡಕಟ್ಟು ಮಂತ್ರಾಲಯ ಹಾಗೂ ಕರ್ನಾಟಕ ಪರಿಶಿಷ್ಟ ವಸತಿ ಶಾಲಾ ಸಂಸ್ಥೆಗಳ ಸಂಘದ ಸಹಯೋಗದಲ್ಲಿ ವಸತಿ ಶಾಲೆಗಳ ವಿದ್ಯಾರ್ಥಿಗಳಿಗಾಗಿ 7 ದಿನಗಳ ಕಾಲದ ಅಂತರಿಕ್ಷ ಶಿಕ್ಷಣದ ಬಗ್ಗೆ ಹಮ್ಮಿಕೊಂಡಿದ್ದ ತರಬೇತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಮೆರಿಟ್ ಆಧಾರದ ಮೇಲೆ ಬಜ್ಜನಹಳ್ಳಿ ವಸತಿ ಶಾಲೆಯ 30 ಹಾಗೂ ಕೋಲಾರ ಜಿಲ್ಲೆಯ ಗಂಗಾನರಪಲ್ಲಿ ವಸತಿ ಶಾಲೆಯ 10 ಸೇರಿ 40 ವಿದ್ಯಾರ್ಥಿಗಳನ್ನು ಈ ತರಬೇತಿಗೆ ಆಯ್ಕೆ ಮಾಡಿಕೊಳ್ಳಲಾಗಿದೆ. ವಿದ್ಯಾರ್ಥಿಗಳಿಗೆ ಇಂತಹ ಅವಕಾಶ ಜೀವನದಲ್ಲಿ ಮತ್ತೊಮ್ಮೆ ದೊರೆಯುವುದಿಲ್ಲ. ಈ ತರಬೇತಿಯ ಸದುಪಯೋಗ ಪಡೆದು ಕಠಿಣ ಅಭ್ಯಾಸ ಮಾಡಿದಲ್ಲಿ ಉಜ್ವಲ ಭವಿಷ್ಯ ನಿಮ್ಮದಾಗುತ್ತದೆ ಎಂದು ವಿದ್ಯಾರ್ಥಿಗಳಿಗೆ ಕಿವಿ ಮಾತು ಹೇಳಿದರು.
ಕೇಂದ್ರದ ನ್ಯಾಷನಲ್ ಎಜುಕೇಶನ್ ಸೊಸೈಟಿ ಆಫ್ ಟ್ರೈಬಲ್ ಸ್ಟೂಡೆಂಟ್ಸ್ ಪ್ರತಿನಿಧಿ ಪಿಯೂಷ್ ಆನಂದ್ ಮಾತನಾಡಿದರು.
ತರಬೇತಿಗೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ 7 ದಿನಗಳ ತರಬೇತಿ ಕಿಟ್ಗಳನ್ನು ನೀಡಲಾಯಿತು. ರಾಜ್ಯ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಡಾ.ಕೆ.ಆರ್.ರಾಜಕುಮಾರ್ ಮಾತನಾಡಿದರು.
ವಿದ್ಯಾರ್ಥಿಗಳೊಂದಿಗೆ ತರಬೇತಿ ಕುರಿತು ನಡೆದ ವಿಡಿಯೋ ಸಂವಾದದಲ್ಲಿ ಇಸ್ರೋ ಅಧ್ಯಕ್ಷ ಎಸ್.ಸೋಮನಾಥ್, ಕೇಂದ್ರ ಆಯುಕ್ತ ಅಜಿತ್ ಕುಮಾರ್ ಶ್ರೀವಾಸ್ತವ, ರಾಜ್ಯ ಬುಡಕಟ್ಟು ಸಚಿವಾಲಯದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಮಂಜುನಾಥ್ ಎನ್.ಪ್ರಸಾದ್, ಕೇಂದ್ರ ಬುಡಕಟ್ಟು ವ್ಯವಹಾರಗಳ ಮಂತ್ರಾಲಯದ ಕಾರ್ಯದರ್ಶಿ ವಿಭು ನಾಯರ್, ಇಲಾಖೆಯ ಉಪನಿರ್ದೇಶಕ ಪ್ರಕಾಶ್, ಜಿಲ್ಲಾ ಪರಿಶಿಷ್ಟ ಪಂಗಡಗಳ ಕಲ್ಯಾಣಾಧಿಕಾರಿ ತ್ಯಾಗರಾಜು, ತರಬೇತಿದಾರರಾದ ನಿಖಿತ, ತುಮಕೂರು ಹಾಗೂ ಕೋಲಾರ ಜಿಲ್ಲೆ ವಿವಿಧ ವಸತಿ ಶಾಲೆಗಳ ಪ್ರಾಂಶುಪಾಲರು, ಕರ್ನಾಟಕ, ರಾಜಸ್ಥಾನ, ತೆಲಂಗಾಣದ ಏಕಲವ್ಯ ಮಾದರಿ ವಸತಿ ಶಾಲೆಗಳ ವಿದ್ಯಾರ್ಥಿಗಳು ಭಾಗವಹಿಸಿದ್ದರು.