ಪ್ರತಿನಿಧಿ ವರದಿ ಚಾಮರಾಜನಗರ
ರಾಜ್ಯ ಸರ್ಕಾರವನ್ನು ಎಚ್ಚರಿಸಲು ಕೊಳ್ಳೇಗಾಲ ಮತ್ತು ಹನೂರು ತಾಲೂಕುಗಳ ಪರಿಶಿಷ್ಟಜಾತಿಗಳ ಒಳ ಮೀಸಲಾತಿ ಜಾರಿ ಹೋರಾಟ ಸಮಿತಿಗಳ ಒಕ್ಕೂಟದ ವತಿಯಿಂದ ಅ.14 ರಂದು ಒಳ ಮೀಸಲಾತಿ ಜಾರಿಗಾಗಿ ಬೃಹತ್ ಬೈಕ್ ರ್ಯಾಲಿ ಆಯೋಜಿಸಲಾಗಿದೆ ಎಂದು ಒಕ್ಕೂಟ ಕಾನೂನು ಸಲಹೆಗಾರ ಹಾಗೂ ವಕೀಲ ಬೂದಿತಿಟ್ಟು ರಾಜೇಂದ್ರ ಹೇಳಿದರು.
ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ಜಾರಿ ಮಾಡಲು ಆಯಾಯ ರಾಜ್ಯಗಳಿಗೆ ಪರಮಾಧಿಕಾರವಿದೆ ಎಂದು ಸುಪ್ರೀಂಕೋರ್ಟ್ ಐತಿಹಾಸಿಕ ತೀರ್ಪು ನೀಡಿದೆ. ಅದರಂತೆ ಒಳ ಮೀಸಲಾತಿ ಜಾರಿಗೊಳಿಸಲು ಸರ್ಕಾರದ ಗಮನ ಸೆಳೆಯುವ ಸಲುವಾಗಿ ಕೊಳ್ಳೇಗಾಲ ಮತ್ತು ಹನೂರು ತಾಲೂಕುಗಳ ಪರಿಶಿಷ್ಟಜಾತಿಗಳ ಒಳ ಮೀಸಲಾತಿ ಜಾರಿ ಹೋರಾಟ ಸಮಿತಿಗಳ ಒಕ್ಕೂಟದ ವತಿಯಿಂದ ಅ.14 ರಂದು ಬೃಹತ್ ಬೈಕ್ ರ್ಯಾಲಿ ಆಯೋಜಿಸಲಾಗಿದೆ. ಈ ರ್ಯಾಲಿಯಲ್ಲಿ ವಕೀಲರು, ಸಮಾಜದ ಮುಖಂಡರು, ಯುವಕರು ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಸಮುದಾಯದವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಅವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಕೊಳ್ಳೇಗಾಲದಲ್ಲಿ ಬಿ.ಆರ್.ಅಂಬೇಡ್ಕರ್ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಅಲ್ಲಿಂದ ಬೈಕ್ ರ್ಯಾಲಿ ಹೊರಟು ಯಳಂದೂರು, ಸಂತೇಮರಹಳ್ಳಿ ಮಾರ್ಗವಾಗಿ ಚಾಮರಾಜನಗರದ ಶ್ರೀಭುವನೇಶ್ವರಿ ವೃತ್ತದ ಕಡೆಯಿಂದ ಜಿಲ್ಲಾಡಳಿತ ಭವನಕ್ಕೆ ತೆರಳಿ ಜಿಲ್ಲಾಧಿಕಾರಿ ಅವರ ಮೂಲಕ ಮುಖ್ಯಮಂತ್ರಿ ಅವರಿಗೆ ಮನವಿ ಸಲ್ಲಿಸಲಾಗುವುದು ಎಂದರು.
ಸಮುದಾಯದವತಿಯಿಂದ 30 ವರ್ಷಗಳಿಂದ ಒಳ ಮೀಸಲಾತಿಗಾಗಿ ಹೋರಾಟ ಮಾಡಿಕೊಂಡು ಬರಲಾಗಿದ್ದು, ಮುಖ್ಯಮಂತ್ರಿ ಅವರು ಧ್ವಂಧ್ವ ನೀತಿ ತಾಳದೆ, ಮುಂದಿನ ಸಚಿವ ಸಂಪುಟದಲ್ಲಿ ನ್ಯಾಯಮೂರ್ತಿ ಎ.ಜೆ.ಸದಾಶಿವ ಆಯೋಗದ ವರದಿಯನ್ನು ಅಂಗೀಕರಿಸಿ, ಒಳ ಮೀಸಲಾತಿ ಜಾರಿ ಮಾಡಬೇಕು ಎಂದು ಒತ್ತಾಯಿಸಿದರು.
ಪಿ.ಶಿವಮಲ್ಲು, ಬಿ.ಬಸವರಾಜು ದ್ವಾರ್ಕಿ, ರವಳಪ್ಪ, ಎನ್.ರಾಚಪ್ಪ, ಸಿ.ಮಧು, ಇದ್ದರು.