ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾ ಹುಡೇದ ಸಲಹೆ
ಪ್ರತಿನಿಧಿ ವರದಿ ಚಾಮರಾಜನಗರ
ಕ್ರೀಡಾಪಟುಗಳು ಸೋಲು-ಗೆಲುವನ್ನು ಸಮಾನವಾಗಿ ಸ್ವೀಕರಿಸಿ, ಸೋಲು ಮುಂದಿನ ಗೆಲುವಿನ ಮೆಟ್ಟಿಲೆಂದು ಅರಿತು ಕ್ರೀಡಾಸ್ಪೂರ್ತಿ ಮೆರೆಯುವಂತೆ ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾ ಹುಡೇದ ಸಲಹೆ ನೀಡಿದರು.
ನಗರದ ಡಾ.ಬಿ.ಆರ್.ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿ ಶನಿವಾರ ಜಿಲ್ಲಾಡಳಿತ, ಜಿಪಂ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದ್ದ ಮೈಸೂರು ವಿಭಾಗಮಟ್ಟದ ದಸರಾ ಕ್ರೀಡಾಕೂಟದ ಅಂಗವಾಗಿ 8 ಜಿಲ್ಲೆಗಳ ಕ್ರೀಡಾಪಟುಗಳು ಪಾಲ್ಗೊಂಡಿದ್ದ ಪುಟ್ಬಾಲ್ ಮತ್ತು ಹ್ಯಾಂಡ್ಬಾಲ್ ಸ್ಪರ್ಧೆಗಳನ್ನು ಉದ್ಘಾಟಿಸಿ ಮಾತನಾಡಿದರು.
ಕ್ರೀಡೆಯಲ್ಲಿ ಪಾಲ್ಗೊಳ್ಳುವುದರಿಂದ ದೇಹ ಸದೃಢಗೊಳ್ಳಲಿದೆ. ಇದರಿಂದ ದೈಹಿಕ, ಮಾನಸಿಕ ಸ್ವಾಸ್ಥ್ಯ, ಸ್ಥಿರತೆ ಉಂಟಾಗಲಿದ್ದು, ಪ್ರತಿಯೊಬ್ಬರು ಕ್ರೀಡೆಗೆ ಆದ್ಯತೆ ನೀಡಬೇಕು. ಕ್ರೀಡೆಯಿಂದ ವ್ಯಕ್ತಿಯ ಸರ್ವತೋಮುಖ ಬೆಳವಣಿಗೆ ಸಾಧ್ಯವಾಗಲಿದೆ. ಕ್ರೀಡಾಪಟುಗಳು ತಮ್ಮಲ್ಲಿರುವ ನಕಾರಾತ್ಮಕ ಅಂಶಗಳನ್ನು ಸರಿಪಡಿಸಿಕೊಳ್ಳಲು ಉತ್ತಮ ವೇದಿಕೆಯಾಗಿದೆ. ತೀರ್ಪುಗಾರರು ನಿಷ್ಪಕ್ಷವಾಗಿ ತೀರ್ಪು ನೀಡಬೇಕು ಎಂದರು.
ಚುಡಾ ಅಧ್ಯಕ್ಷ ಮಹಮ್ಮದ್ ಅಸ್ಗರ್ ಮಾತನಾಡಿ, ಕ್ರೀಡೆಯಲ್ಲಿ ಸೋಲು-ಗೆಲುವು ಸಹಜ. ಕ್ರೀಡಾಪಟುಗಳು ತೀರ್ಪುಗಾರರು ನೀಡುವ ತೀರ್ಪಿಗೆ ಬದ್ದರಾಗಿರಬೇಕು. ಕ್ರೀಡೆಯಲ್ಲಿ ಗೆದ್ದವರು ಹಿಗ್ಗದೇ, ಸೋತವರು ಹತಾಶರಾಗದೇ ಗೆಲ್ಲಲು ಮರಳಿ ಪ್ರಯತ್ನ ಮಾಡಬೇಕು ಎಂದರು.
ಜಿಲ್ಲಾ ನೆಟ್ಬಾಲ್ ಅಸೋಶಿಯೇಷನ್ ಅಧ್ಯಕ್ಷೆ ನರ್ಗಿಸ್ ಬಾನು ಮಾತನಾಡಿ, ಪ್ರಥಮ ಬಾರಿಗೆ ಮೈಸೂರು ವಿಭಾಗಮಟ್ಟದ ದಸರಾ ಕ್ರೀಡಾಕೂಟದ ಪುಟ್ಬಾಲ್ ಹಾಗೂ ನೆಟ್ಬಾಲ್ ಸ್ಪರ್ಧೆಗಳು ಚಾಮರಾಜನಗರದಲ್ಲಿ ನಡೆಯುತ್ತಿದೆ. ಇದು ಜಿಲ್ಲೆಯ ಕ್ರೀಡಾಭಿವೃದ್ಧಿಗೆ ಸಹಕಾರಿಯಾಗಲಿದೆ. ಕ್ರೀಡಾಪಟುಗಳಿಗೆ ತಮ್ಮ ಪ್ರತಿಭೆ ತೋರಲು ಉತ್ತಮ ಅವಕಾಶವಿದೆ ಎಂದು ಹೇಳಿದರು.
ಪಂಚಗ್ಯಾರಂಟಿ ಯೋಜನೆಗಳ ಜಿಲ್ಲಾಧ್ಯಕ್ಷ ಎಚ್.ವಿ.ಚಂದ್ರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಶಿವಸ್ವಾಮಿ, ಜಿಲ್ಲಾ ಕ್ರೀಡಾಂಗಣ ಸಮಿತಿ ಸದಸ್ಯ ಶ್ರೀನಿವಾಸಪ್ರಸಾದ್, ಜಿಲ್ಲಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ (ಗ್ರೇಡ್-2) ಚಿಕ್ಕಬಸವಯ್ಯ, ಪುಟ್ಬಾಲ್ ತರಬೇತುದಾರ ಗಣೇಶ್, ಇತರರು ಇದ್ದರು.
28ಸಿಎಚ್ಎನ್.2: ಚಾಮರಾಜನಗರದ ಡಾ.ಬಿ.ಆರ್.ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿ ಮೈಸೂರು ವಿಭಾಗಮಟ್ಟದ ದಸರಾ ಕ್ರೀಡಾಕೂಟದ ಅಂಗವಾಗಿ ನಡೆದ ಪುಟ್ಬಾಲ್ ಮತ್ತು ಹ್ಯಾಂಡ್ಬಾಲ್ ಸ್ಪರ್ಧೆಗಳನ್ನು ಎಡಿಸಿ ಗೀತಾ ಹುಡೇದ ಉದ್ಘಾಟಿಸಿದರು.