ಎರಡು ತಿಂಗಳ ಹಿಂದೆ ನಡೆದಿದ್ದ, ಸ್ಯಾಂಡಲ್ವುಡ್ ನಟ ನಾಗಭೂಷಣ್ ಕಾರು ಅಪಘಾತ ಪ್ರಕರಣ ಸಂಬಂಧ ತನಿಖೆ ಪೂರ್ಣಗೊಳಿಸಿರುವ ಕುಮಾರಸ್ವಾಮಿ ಲೇಔಟ್ ಸಂಚಾರ ಠಾಣೆ ಪೊಲೀಸರು ಸುಮಾರು 70 ಪುಟಗಳ ದೋಷಾರೋಪ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ. ನಟ ನಾಗಭೂಷಣ್ ಕಾರು ಚಾಲನೆ ವೇಳೆ ಮದ್ಯ ಸೇವಿಸಿರಲಿಲ್ಲ. ಅತಿವೇಗ ಹಾಗೂ ನಿರ್ಲಕ್ಷ್ಯದ ಚಾಲನೆಯೇ ಅಪಘಾತಕ್ಕೆ ಕಾರಣ ಎಂಬುದು ತನಿಖೆಯಲ್ಲಿ ಬೆಳಕಿಗೆ ಬಂದಿದೆ. ದೋಷಾರೋಪ ಪಟ್ಟಿಯಲ್ಲಿ 20ಕ್ಕೂ ಅಧಿಕ ಸಾಕ್ಷಿಗಳು, ಪ್ರತ್ಯಕ್ಷ ದರ್ಶಿಗಳು, ಗಾಯಾಳು ಕೃಷ್ಣ ಅವರ ಹೇಳಿಕೆಗಳನ್ನು ಪೊಲೀಸರು ದಾಖಲಿಸಿದ್ದಾರೆ. ಇದರ ಜತೆಗೆ ಘಟನಾ ಸ್ಥಳದ ಸುತ್ತಮುತ್ತಲ ಸಿಸಿಟಿವಿ ಕ್ಯಾಮರಾ ದೃಶ್ಯಾವಳಿಗಳ ಬಗ್ಗೆಯೂ ದೋಷಾರೋಪಟ್ಟಿಯಲ್ಲಿ ಉಲ್ಲೇಖಿಸಿದ್ದಾರೆ.
ಪ್ರಕರಣದ ಹಿನ್ನೆಲೆ: ನಟ ನಾಗಭೂಷಣ್ ಅವರು ಸೆ.30ರ ರಾತ್ರಿ 9.30ರ ಸುಮಾರಿಗೆ ತಮ್ಮ ಕಿಯಾ ಕಾರಿನಲ್ಲಿ ಉತ್ತರಹಳ್ಳಿ ಕಡೆಯಿಂದ ಜೆ.ಪಿ.ನಗರದ ತಮ್ಮ ಮನೆಗೆ ಹೊರಟಿದ್ದರು. ಮಾರ್ಗ ಮಧ್ಯೆ ವಸಂತಪುರ ಮುಖ್ಯರಸ್ತೆಯಲ್ಲಿ ಪ್ರೇಮಾ(48) ಮತ್ತು ಕೃಷ್ಣ(58) ದಂಪತಿ ಊಟ ಮುಗಿಸಿ ವಾಯುವಿಹಾರಕ್ಕೆ ತೆರಳಲು ಅಪಾರ್ಟ್ಮೆಂಟ್ನಿಂದ ಹೊರಗೆ ಬಂದು ಪಾದಚಾರಿ ಮಾರ್ಗದಿಂದ ರಸ್ತೆಗೆ ಇಳಿದಿದ್ದರು.
ಈ ವೇಳೆ ಹಿಂದಿನಿಂದ ವೇಗವಾಗಿ ಕಾರು ಚಾಲನೆ ಮಾಡಿಕೊಂಡು ಬಂದ ನಾಗಭೂಷಣ್ ಏಕಾಏಕಿ ದಂಪತಿಗೆ ಡಿಕ್ಕಿ ಹೊಡೆದು ಬಳಿಕ ಪಾದಚಾರಿ ಮಾರ್ಗದ ವಿದ್ಯುತ್ ಕಂಬಕ್ಕೆ ಗುದ್ದಿಸಿದ್ದರು. ಡಿಕ್ಕಿಯ ರಭಸಕ್ಕೆ ಪ್ರೇಮಾ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದರು. ಇವರ ಪತಿ ಕೃಷ್ಣ ಗಂಭೀರವಾಗಿ ಗಾಯಗೊಂಡಿದ್ದರಿಂದ ಸ್ಥಳೀಯರು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಈ ಸಂಬಂಧ ಮೃತರ ಕುಟುಂಬದವರು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡಿದ್ದ ಕುಮಾರಸ್ವಾಮಿ ಲೇಔಟ್ ಸಂಚಾರ ಠಾಣೆ ಪೊಲೀಸರು, ನಟ ನಾಗಭೂಷಣ್ ಅವರನ್ನು ಬಂಧಿಸಿ ವಿಚಾರಣೆ ನಡೆಸಿ ಠಾಣಾ ಜಾಮೀನಿನ ಮೇಲೆ ಬಿಡುಗಡೆಗೊಳಿಸಿದ್ದರು.