ಮಹದೇಶ್ವರ ಬೆಟ್ಟದಲ್ಲಿ ಯುಗಾದಿ ಜಾತ್ರಾ ಮಹೋತ್ಸವ
ಪ್ರತಿನೀಧಿ ವರದಿ ಹನೂರು
ತಾಲೂಕಿನ ಶ್ರೀ ಕ್ಷೇತ್ರ ಮಲೆಮಾದೇಶ್ವರ ಬೆಟ್ಟದಲ್ಲಿ ಏ.೬ರಿಂದ ನಾಲ್ಕು ದಿನಗಳ ಕಾಲ ಯುಗಾದಿ ಜಾತ್ರಾ ಮಹೋತ್ಸವ ಜರುಗಲಿದ್ದು ಲಕ್ಷಾಂತರ ಭಕ್ತರು ಭೇಟಿ ನೀಡುವ ನಿರೀಕ್ಷೆ ಇರುವುದರಿಂದ ಪ್ರಾಧಿಕಾರದ ವತಿಯಿಂದ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ.
ಏ. ೬ ರಿಂದ ಯುಗಾದಿ ಜಾತ್ರಾ ಮಹೋತ್ಸವ ಪ್ರಾರಂಭವಾಗಲಿದೆ . ಏ. 7 ರಂದು ಶ್ರೀ ಸ್ವಾಮಿಗೆ ಎಣ್ಣೆ ಮಜ್ಜನ ವಿಶೇಷ ಸೇವೆ ಉತ್ಸವಾದಿಗಳು, 8 ರಂದು ಅಮಾವಾಸ್ಯೆ ಶ್ರೀ ಸ್ವಾಮಿಗೆ ವಿಶೇಷ ಸೇವೆ ಉತ್ಸವಾದಿಗಳು ಜರುಗಲಿದೆ, 9 ರಂದು ಬೆಳಗ್ಗೆ ಮಹಾರಥೋತ್ಸವ ಬೆಳಗ್ಗೆ 7:30 ರಿಂದ 9 ಗಂಟೆಯವರೆಗೆ ಜರುಗಲಿದೆ.
ಬಿಸಿಲಿನ ತಾಪಮಾನ ಹೆಚ್ಚಾಗಿರುವುದರಿಂದ ಶ್ರೀ ಕ್ಷೇತ್ರಕ್ಕೆ ಬರುವಂತಹ ಭಕ್ತಾದಿಗಳಿಗೆ ಶ್ರೀ ಮಲೆ ಮಹದೇಶ್ವರ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಕುಡಿಯುವ ನೀರಿಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ. ಪ್ರಾಧಿಕಾರದ ಆವರಣ ಹಾಗೂ ಮುಖ್ಯ ರಸ್ತೆಗಳಲ್ಲಿ ಮಡಿಕೆಯಲ್ಲಿ ಶುದ್ಧ ಕುಡಿಯುವ ನೀರು ಪೂರೈಕೆ ಮಾಡಲಾಗುತ್ತಿದೆ.ಇದರ ಸದುಪಯೋಗವನ್ನು ಭಕ್ತರು ಪಡೆದುಕೊಳ್ಳಬೇಕು ಜತೆಗೆ ಕುಡಿಯುವ ನೀರನ್ನು ಪೋಲು ಮಾಡಬಾರದು ಎಂದು ಪ್ರಾಧಿಕಾರ ಮನವಿ ಮಾಡಿದೆ.
ಶ್ರೀ ಕ್ಷೇತ್ರದ ಎರಡು ಕಡೆಗಳಲ್ಲಿ ಶುದ್ಧ ಕುಡಿಯುವ ನೀರಿನ ಘಟಕದಲ್ಲಿ ಜನರಿಗೆ ದಿನದ 24 ಗಂಟೆಯೂ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಲಾಗಿದೆ. ದಾಸೋಹ ಭವನದಲ್ಲಿ ವಿಶೇಷ ದಾಸೋಹದ ವ್ಯವಸ್ಥೆ ಕಲ್ಪಿಸಲಾಗಿದ್ದು ಒಂದು ಬಾರಿಗೆ 2 ಸಾವಿರಕ್ಕೂ ಹೆಚ್ಚು ಜನರು ಪ್ರಸಾದ ಸ್ವೀಕರಿಸಬಹುದಾಗಿದೆ. ಶ್ರೀ ಕ್ಷೇತ್ರಕ್ಕೆ ಬರುವ ಭಕ್ತಾದಿಗಳಿಗೆ ನಿರಂತರ ದಾಸೋಹದ ವ್ಯವಸ್ಥೆಯನ್ನು ಸಹ ಮಾಡಲಾಗಿದೆ.
ಶ್ರೀ ಕ್ಷೇತ್ರಕ್ಕೆ ಹೆಚ್ಚಿನ ಭಕ್ತಾದಿಗಳು ಆಗಮಿಸುವುದರಿಂದ ೩ ಲಕ್ಷ ಲಾಡು ತಯಾರು ಮಾಡಿಕೊಳ್ಳಲಾಗಿದೆ. ಭಕ್ತಾದಿಗಳಿಗೆ ರಾಜಗೋಪುರದ ಎಡ ಹಾಗೂ ಬಲ ಭಾಗದಲ್ಲಿ ನೆರಳಿನ ವ್ಯವಸ್ಥೆ ದೇವರ ದರ್ಶನ ಪಡೆಯಲು ಸರತಿ ಸಾಲಿನಲ್ಲಿ ನಿಲ್ಲುವ ಸ್ಥಳದಲ್ಲಿ ಹಾಗೂ ದಾಸೋಹ ಮುಂಭಾಗದಲ್ಲಿ ಶಾಮಿಯಾನ ಅಳವಡಿಸಲಾಗಿದ್ದು, ಜತೆಗೆ ವಾಹನಗಳಿಗೆ ಪಾರ್ಕಿಂಗ್ ಸೌಲಭ್ಯ, ಜಾತ್ರಾ ಆವರಣದಲ್ಲಿ ಸ್ವಚ್ಛತೆ ಕಾಪಾಡಲು ಪೌರಕಾರ್ಮಿಕ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.
ರಥೋತ್ಸವ ನಿರ್ಮಾಣಕ್ಕೆ ಚಾಲನೆ: ಏ.9ರಂದು ನಡೆಯಲಿರುವ ಯುಗಾದಿ ರಥೋತ್ಸವಕ್ಕೆ ಗುರುವಾರ ಬೆಳಗ್ಗೆ ವಿಶೇಷ ಪೂಜೆ ಸಲ್ಲಿಸಿ ರಥ ನಿರ್ಮಾಣ ಮಾಡಲು ಚಾಲನೆ ನೀಡಲಾಗಿದೆ ರಥ ನಿರ್ಮಾಣ ಮಾಡುವ ಸರದಿ ಸಾಲಿನ ಭಕ್ತರು ಸಮುದಾಯದ ಜನರು ರಥ ನಿರ್ಮಾಣದಲ್ಲಿ ತಲ್ಲೀನರಾಗಿದ್ದಾರೆ.
ಸ್ವಚ್ಛತೆಗೆ ಹೆಚ್ಚಿನ ಆದ್ಯತೆ : ಈ ಯುಗಾದಿ ಜಾತ್ರಾ ಮಹೋತ್ಸವಕ್ಕೆ ತಮಿಳುನಾಡು ಹಾಗೂ ಕರ್ನಾಟಕದಿಂದ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವುದರಿಂದ ಬರುವ ಭಕ್ತರಿಗೆ ಹೆಚ್ಚಾಗಿ ಸ್ವಚ್ಛತೆಗೆ ಆದ್ಯತೆ ನೀಡಲು ತಿಳಿಸಲಾಗಿದೆ ಜೊತೆಗೆ ತಮಿಳುನಾಡುನಿಂದ ಅಧಿಕ ಸಂಖ್ಯೆಯಲ್ಲಿ ಮಹದೇಶ್ವರ ಬೆಟ್ಟಕ್ಕೆ ಭಕ್ತರು ಬರುವುದರಿಂದ ಪಾಲಾರ್ ರಸ್ತೆಯಲ್ಲಿ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ.
ಯುಗಾದಿ ಜಾತ್ರಾ ಮಹೋತ್ಸವ ಪ್ರಯುಕ್ತ ಲಕ್ಷಾಂತರ ಭಕ್ತಾದಿಗಳು ಆಗಮಿಸುವ ನಿರೀಕ್ಷೆಯಿದ್ದು ಭಕ್ತರಿಗೆ ಎಲ್ಲಾ ರೀತಿಯ ಮೂಲ ಸೌಲಭ್ಯಗಳನ್ನು ಕಲ್ಪಿಸಲಾಗಿದೆ. ಯುಗಾದಿ ಜಾತ್ರಾ ಮಹೋತ್ಸವಕ್ಕೆ ತಮಿಳುನಾಡಿನ ಭಕ್ತಾದಿಗಳು ಹೆಚ್ಚು ಬರುವುದರಿಂದ ಪಾಲಾರ್ ರಸ್ತೆಯಲ್ಲಿ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ.
ರಘು ಕಾರ್ಯದರ್ಶಿ ಶ್ರೀ ಮಲೆ ಮಾದೇಶ್ವರ ಅಭಿವೃದ್ಧಿ ಪ್ರಾಧಿಕಾರ