ಸಮಾಜ ಕಲ್ಯಾಣ ಇಲಾಖೆ ಸಚಿವ ಎಚ್.ಸಿ. ಮಹದೇವಪ್ಪ ಅಭಿಪ್ರಾಯ
ಪ್ರತಿನಿಧಿ ವರದಿ ಚಾಮರಾಜನಗರ
ಶಿಕ್ಷಣದಿಂದ ಮಾತ್ರ ಸಮ ಸಮಾಜ ನಿರ್ಮಾಣ ಮಾಡಲು ಸಾಧ್ಯ ಎಂಬ ಅರಿವು ಅಂಬೇಡ್ಕರ್ ಅವರಿಗೆ ಇತ್ತು. ಹಾಗಾಗಿ ಅವರು ಶಿಕ್ಷಣವನ್ನು ಮೂಲಭೂತ ಹಕ್ಕಾಗಿ ಸಂವಿಧಾನದಲ್ಲಿ ಅಳವಡಿಸಿದರು ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಡಾ.ಎಚ್.ಸಿ. ಮಹದೇವಪ್ಪ ಹೇಳಿದರು.
ನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಪರಿಶಿಷ್ಟ ಜಾತಿ ಶಿಕ್ಷಕರ ಕ್ಷೇಮಾಭಿವೃದ್ಧಿ ಸಂಘದ ಜಿಲ್ಲಾ ಘಟಕದ ವತಿಯಿಂದ 2023-24ನೇ ಸಾಲಿನ ಎಸ್ಎಸ್ಎಲ್ಸಿ ಹಾಗೂ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರಧಾನ ಮತ್ತು ಜಿಲ್ಲಾ ಮಟ್ಟದ ಪರಿಶಿಷ್ಟ ಜಾತಿ ಶಿಕ್ಷಕರ ನೌಕರರ ಜಾಗೃತಿ ಸಮಾವೇಶ ಹಾಗೂ ಶೈಕ್ಷಣಿಕ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು.
ಅಂಬೇಡ್ಕರ್ ಒಬ್ಬ ಶಿಕ್ಷಕರಾಗಿದ್ದರು. ಕಾನೂನು ಕಾಲೇಜು ಪ್ರಾಧ್ಯಾಪಕರಾಗಿ ಉತ್ತಮ ಸೇವೆ ಸಲ್ಲಿಸಿದ್ದರು. ಅವರ ಅಶಯದಂತೆ ಶಿಕ್ಷಣ, ಸಂಘಟನೆ, ಹೋರಾಟಕ್ಕೆ ಹೆಚ್ಚಿನ ಒತ್ತು ನೀಡಬೇಕು. ನೂತನ ಶಿಕ್ಷಣ ನೀತಿಯು ಮನುವಾದಿ ಶಿಕ್ಷಣಕ್ಕೆ ಮತ್ತೇ ವಾಪಸ್ ಹೋದಂತೆ ಆಗಲಿದೆ. ಬಡ ಮಕ್ಕಳು ನಾಲ್ಕು ವರ್ಷ ಪದವಿ ಮಾಡುವುದು ಕಷ್ಟ. ಇದರಿಂದ ಶಿಕ್ಷಣದ ಮೌಲ್ಯ ಕುಸಿಯುತ್ತದೆ. ಮೂರು ವರ್ಷಗಳ ಪದವಿ ಪೂರ್ಣ ಮಾಡಿ ಅವರು ನಿರುದ್ಯೋಗಿಗಳಾಗುತ್ತಾರೆ. ಹೀಗಾಗಿ ನಮ್ಮ ಸರ್ಕಾರ ನೂತನ ಶಿಕ್ಷಣ ನೀತಿಯನ್ನು ಜಾರಿಗೊಳಿಸದೇ ಹಿಂದಿನ ಶಿಕ್ಷಣ ನೀತಿಯನ್ನು ಮುಂದುವರಿಸುತ್ತಿದೆ ಎಂದರು.
ಕೊಳ್ಳೇಗಾಲ ಶಾಸಕ ಎ.ಅರ್.ಕೃಷ್ಣಮೂರ್ತಿ ಮಾತನಾಡಿ, ಶಿಕ್ಷಣಕ್ಕೆ ಪರಿಶಿಷ್ಟ ಜಾತಿ ಜನಾಂಗವು ಹೆಚ್ಚಿನ ಒತ್ತು ನೀಡಿದೆ. ಅಂಬೇಡ್ಕರ್ ಅವರ ಆಶಯದಂತೆ ಜಿಲ್ಲೆಯಲ್ಲಿ ನಮ್ಮ ತಂದೆ ಬಿ.ರಾಚಯ್ಯ ಅವರು ಶಿಕ್ಷಕರ ತರಬೇತಿ ಸಂಸ್ಥೆಯನ್ನು ಆರಂಭಿಸಿ, ಶಿಕ್ಷಕರನ್ನು ತಯಾರು ಮಾಡಿದರು. ಆದೇ ರೀತಿ ಕೆ.ಸಿ. ರಂಗಯ್ಯ ಅವರು ಬಹಳಷ್ಟು ಬಡ ಮಕ್ಕಳಿಗೆ ಶಿಕ್ಷಣವನ್ನು ಧಾರೆ ಎರೆದಿದ್ದಾರೆ. ಹೀಗಾಗಿ ಮಕ್ಕಳಿಗೆ ಗುಣಮಟ್ಟದ ಶಿಕ್ಷಣವನ್ನು ನೀಡಿ, ಜಿಲ್ಲೆಯಲ್ಲಿ ಶೈಕ್ಷಣಿಕ ಅಭಿವೃದ್ದಿಗೆ ಹೆಚ್ಚಿನ ಆದ್ಯೆತೆ ನೀಡಬೇಕು ಎಂದು ಕಿವಿಮಾತು ಹೇಳಿದರು.
ನಳಂದ ಬೌದ್ಧ ವಿಶ್ವವಿದ್ಯಾಲಯದ ಪ್ರಧಾನ ಕಾರ್ಯದರ್ಶಿ ಭಂತೇ ಬೋದಿದತ್ತ ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿದ್ದರು. ಕಾರ್ಯಕ್ರಮದಲ್ಲಿ ಎಡಿಸಿ ಗೀತಾ ಹುಡೇದ, ಡಿಡಿಪಿಐ ಸಿ.ಮಂಜುನಾಥ್ ಪ್ರಸನ್ನ, ಬಿಇಓ ಹನುಮಂತಶೆಟ್ಟಿ, ಪೌರಾಯುಕ್ತ ರಾಮದಾಸ್, ಡಾ.ರೇಣುಕಾದೇವಿ, ಸಮಾಜಕಲ್ಯಾಣ ಇಲಾಖೆಯ ಉಪ ನಿರ್ದೇಶಕಿ ಬಿಂದ್ಯಾ, ನಗರಸಭಾ ಸದಸ್ಯ ಆರ್.ಎಂ.ರಾಜಪ್ಪ ,ಬಿಆರ್ಸಿ ಸರೋಜ, ಕೆಆರ್ಡಿಎಲ್ ಅಭಿಯಂತರ ಚಿಕ್ಕಲಿಂಗಯ್ಯ ಸೇರಿದಂತೆ ಇತರರು ಇದ್ದರು.
24ಸಿಎಚ್ಎನ್.3:ಚಾಮರಾಜನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ನಡೆದ ಎಸ್ಎಸ್ಎಲ್ಸಿ ಹಾಗೂ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರಧಾನ ಮತ್ತು ಜಿಲ್ಲಾ ಮಟ್ಟದ ಪರಿಶಿಷ್ಟ ಜಾತಿ ಶಿಕ್ಷಕರ ನೌಕರರ ಜಾಗೃತಿ ಸಮಾವೇಶ ಹಾಗೂ ಶೈಕ್ಷಣಿಕ ಕಾರ್ಯಾಗಾರವನ್ನು ಸಚಿವ ಎಚ್.ಸಿ.ಮಹದೇವಪ್ಪ ಉದ್ಘಾಟಿಸಿದರು.
———————-
ಬಾಕ್ಸ್….
ಸಮಾವೇಶಕ್ಕೆ ಸಂಸದರೇ ಗೈರು
ಚಾಮರಾಜನಗರ ತಾಲೂಕಿನ ಸಂತೇಮರಹಳ್ಳಿಯ ಡಾ.ಬಿ.ಆರ್.ಅಂಬೇಡ್ಕರ್ ಸಮುದಾಯ ಭವನದಲ್ಲಿ ಮಹಾನಾಯಕ ಡಾ.ಬಿ.ಆರ್.ಅಂಬೇಡ್ಕರ್ ಸೇವಾಟ್ರಸ್ಟ್ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ನೂತನ ಸಂಸದರಿಗೆ ಅಭಿನಂದನಾ ಸಮಾರಂಭದಲ್ಲಿ ನೂತನ ಸಂಸದ ಸುನಿಲ್ ಬೋಸ್ ಅವರೇ ಕಾಣಲಿಲ್ಲ.
ಚಾಮರಾಜನಗರ ಲೋಕಸಭಾ ಕ್ಷೇತ್ರದ ನೂತನ ಸಂಸದರಾದ ಸುನೀಲ್ ಬೋಸ್ ಅವರನ್ನು ಕ್ಚೇತ್ರದ ಮತದಾರರು ಒಂದು ಲಕ್ಷಕ್ಕೂ ಹೆಚ್ಚಿನ ಮತಗಳ ಅಂತರವನ್ನು ನೀಡಿ ಗೆಲ್ಲಿಸುವ ಮೂಲಕ ಇತಿಹಾಸ ನಿರ್ಮಿಸಿದ್ದರು. ಈ ಹಿನ್ನಲೆಯಲ್ಲಿ ಅವರಿಗೆ ಅಭಿನಂದನೆ ಸಲ್ಲಿಸಲು ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಆದರೆ ಕಾರ್ಯಕ್ರಮದ ಕೇಂದ್ರ ಬಿಂದುವಾಗಿದ್ದ ಸಂಸದ ಸುನಿಲ್ ಬೋಸ್ ಅವರೇ ಕಾರ್ಯಕ್ರಮಕ್ಕೆ ಗೈರಾಗಿದ್ದರು. ಇದರಿಂದ ಮತದಾರರು ನಿರಾಸೆಗೊಂಡರು.
—————
ಕೋಟ್
ಸಂವಿಧಾನದತ್ತವಾಗಿ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡಿದ ಪರಿಣಾಮ ಎಲ್ಲರು ಸುಶಿಕ್ಷಿತರವಾಗಿ ಉತ್ತಮ ಸಮಾಜವನ್ನು ಕಾಣಲು ಸಾಧ್ಯವಾಗಿದೆ. ಈ ಹಿಂದೆ ಶಿಕ್ಷಣ ಒಂದು ವರ್ಗದ ಸ್ವತ್ತಾಗಿತ್ತು. ಡಾ.ಬಿ.ಆರ್ ಅಂಬೇಡ್ಕರ್ ಅವರು ಸಂವಿಧಾನ ರಚನೆ ಮಾಡಿ, ಎಲ್ಲರಿಗೂ ಶಿಕ್ಷಣ, ಉದ್ಯೋಗ ಹಾಗೂ ಸಮಾನತೆಯನ್ನು ಕಲ್ಪಿಸಿಕೊಟ್ಟರು. ಧರ್ಮಾಧಾರಿತ ಶಿಕ್ಷಣ ಬೇಡ ಎಂದು ಹೇಳಿದರು.