ಪಾಂಡವಪುರ: ಹೆಣ್ಣುಭ್ರೂಣ ಹತ್ಯೆ ತಡೆಗೆ ಅಧಿಕಾರಿಗಳು ಕಠಿಣ ಕ್ರಮ ಕೈಗೊಂಡರೂ ಮಂಡ್ಯದಲ್ಲಿ ಮತ್ತೆಮತ್ತೆ ಅಂಥದ್ದೇ ಪ್ರಕರಣಗಳು ಬೆಳಕಿಗೆ ಬರುತ್ತಿದ್ದು, ಕಳೆದ ಒಂದು ತಿಂಗಳ ಹಿಂದೆ ನಡೆದಿದೆ ಎನ್ನಲಾದ ಮತ್ತೊಂದು ಭ್ರೂಣಹತ್ಯೆ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.
ಪಾಂಡವಪುರ ತಾಲೂಕಿನ ಗರ್ಭಿಣಿ ಮಹಿಳೆಯೊಬ್ಬರು ಇತ್ತೀಚೆಗೆ ಗರ್ಭಪಾತ ಮಾಡಿಸಿಕೊಂಡಿರುವ ವಿಚಾರ ಸಂಬಂಧ ಹೆಣ್ಣು ಭ್ರೂಣ ಹತ್ಯೆ ಶಂಕೆ ವ್ಯಕ್ತವಾಗಿದೆ. ಹೊಟ್ಟೆ ನೋವಿನಿಂದ ಬಳಲುತ್ತಿದ್ದ ಮಹಿಳೆ ತೀವ್ರ ರಕ್ತಸ್ರಾವ ಆಗುತ್ತಿದ್ದ ಹಿನ್ನೆಲೆ ಪಟ್ಟಣದ ಸಾರ್ವಜನಿಕರ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಾಗಿದ್ದರು. ಈ ವೇಳೆ ಹೊಟ್ಟೆಯಲ್ಲಿ ಭ್ರೂಣದ ಸ್ವಲ್ಪ ಭಾಗ ಉಳಿದಿರುವುದುದರಿಂದ ರಕ್ತಸ್ರಾವ ಮತ್ತು ಹೊಟ್ಟೆನೋವು ಕಾಣಿಸಿಕೊಂಡಿದೆ ಎಂಬುದನ್ನು ಅರಿತ ವೈದ್ಯರು ಮಹಿಳೆಯನ್ನು ಪ್ರಶ್ನಿಸಿದ್ದಾರೆ. ಮಹಿಳೆಯು ಗೊಂದಲದ ಹೇಳಿಕೆ ನೀಡಿದ್ದರಿಂದ ಅನುಮಾನಗಂಡ ವೈದ್ಯರು ಆರೋಗ್ಯ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದಿದ್ದಾರೆ ಎನ್ನಲಾಗಿದೆ.
ಏ.16ರಂದು ಗರ್ಭಪಾತ ಮಾಡಿಸಿಕೊಂಡಿರುವ ಬಗ್ಗೆ ಮಹಿಳೆ ಹೇಳಿಕೆ ನೀಡಿದ್ದಾರೆ ಎಂದು ತಿಳಿದುಬಂದಿದ್ದು, ಸ್ಥಳಕ್ಕೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕೆ.ಮೋಹನ್ ಭೇಟಿ ನೀಡಿ ಪರಿಶೀಲಿಸಿದ್ದಾರೆ.
ಹೆಣ್ಣು ಭ್ರೂಣ ಹತ್ಯೆ ಶಂಕೆ ವ್ಯಕ್ತವಾಗಿರುವುದರಿಂದ ಪೊಲೀಸ್ ಇನ್ಸ್ ಪೆಕ್ಟರ್ ಕುಮಾರ್, ಸಬ್ ಇನ್ಸ್ ಪೆಕ್ಟರ್ ಉಮೇಶ್, ಆರೋಗ್ಯ ಇಲಾಖೆಯ ಡಾ.ಬೆಟ್ಟಸ್ವಾಮಿ, ಡಾ.ಸೋಮಶೇಖರ್, ಪಾಂಡವಪುರ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ.ಸಿ.ಎ.ಅರವಿಂದ್ ಹೆಚ್ಚಿನ ಮಾಹಿತಿ ಸಂಗ್ರಹಿಸುತ್ತಿದ್ದಾರೆ.