ಚಿಕ್ಕಬಳ್ಳಾಪುರ : ಕಳೆದ ೧೦ ವರ್ಷಗಳಲ್ಲಿ ಕಾರ್ಮಿಕ ವಲಯವನ್ನು ಸಂಪೂರ್ಣವಾಗಿ ನಿರ್ಲಕ್ಷಿಸಿರುವ ಕೇಂದ್ರ ಬಿಜೆಪಿ ಸರ್ಕಾರವು ಕಾರ್ಮಿಕ ವಿರೋಧಿ ನಿಲುವುಗಳ ಮೂಲಕ ಕಾರ್ಮಿಕರನ್ನು ಬೀದಿಪಾಲಾಗುವಂತೆ ಮಾಡಿದ್ದಾರೆ ಎಂದು ಕಾಂಗ್ರೆಸ್ ಕಾರ್ಮಿಕ ಘಟಕದ ಜಿಲ್ಲಾ ಉಸ್ತುವಾರಿ ಯೋಗಾನಂದ ಆರೋಪಿಸಿದರು.
ನಗರದ ಪತ್ರಕರ್ತರ ಭವನದಲ್ಲಿ ಹಮ್ಮಿಕೊಂಡಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಹಿಂದಿನ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕಾರ್ಮಿಕ ಏಳಿಗಾಗಿ ಹಲವಾರು ಯೋಜನೆಗಳನ್ನು ರೂಪಿಸಿ ಅವರ ಕಲ್ಯಾಣಕ್ಕಾಗಿ ಶ್ರಮಿಸಿತ್ತು. ಆದರೆ ಕಾರ್ಮಿಕ ಪರ ಯೋಜನೆಗಳನ್ನು ರೂಪಿಸದ ಬಿಜೆಪಿ ಸರ್ಕಾರವು ಯೋಜನೆಗಳನ್ನು ಸಮರ್ಪಕವಾಗಿ ತಲುಪಿಸುವಲ್ಲಿ ವಿಫಲವಾಗಿದೆ ಎಂದು ಆರೋಪಿಸಿದರು.
ದೇಶದ ಅಭಿವೃದ್ಧಿಯನ್ನು ಕಡೆಗಣಿಸಿರುವ ಜಾತಿ ಧರ್ಮಗಳ ನಡುವೆ ವಿಷ ಬೀಜ ಬಿತ್ತಿ ಮತ್ತೊಮ್ಮೆ ಅಧಿಕಾರ ಪಡೆಯಲು ಹೊರಟಿದ್ದು, ಆದರೆ ದೇಶದ ಜನತೆ ಬದಲಾವಣೆಯನ್ನು ಬಯಸಿದ್ದಾರೆ. ಈ ನಿಟ್ಟಿನಲ್ಲಿ ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಅಧಿಕಾರದಲ್ಲಿದ್ದ ವೇಳೆ ಲೂಟಿ ಹೊಡೆದು ಈಗ ಕಣ್ಣೀರುವ ಹಾಕುವ ನಾಟಕ ಪ್ರದರ್ಶನ ಮಾಡುವ ಮೂಲಕ ಬಿಜೆಪಿ ಅಭ್ಯರ್ಥಿ ಡಾ.ಕೆ.ಸುಧಾಕರ್ ಅನುಕಂಪ ಗಿಟ್ಟಿಸಿಕೊಳ್ಳಲು ಮುಂದಾಗಿದ್ದು, ಆದರೆ ಕ್ಷೇತ್ರದಲ್ಲಿನ ಜನತೆ ಅವರ ನಾಟಕಕ್ಕೆ ಮರುಳಾಗುವುದಿಲ್ಲ. ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಕ್ಷಾ ರಾಮಯ್ಯ ೨ ಲಕ್ಷ ಮತಗಳ ಅಂತರದಲ್ಲಿ ಗೆಲುವು ಪಡೆಯಲಿದ್ದು, ರಾಜ್ಯ ಹಾಗೂ ಕೇಂದ್ರದಿಂದ ಜನತೆಗೆ ಡಬಲ್ ಗ್ಯಾರೆಂಟಿಗಳು ಸಿಗಲಿದೆ ಎಂದು ಹೇಳಿದರು.
ಕಾಂಗ್ರೆಸ್ ಕಾರ್ಮಿಕ ಘಟಕದ ಪ್ರಧಾನ ಕಾರ್ಯದರ್ಶಿ ಅರವಿಂದ್ ಮಾತನಾಡಿ, ಎಲ್ಲ ರಂಗಗಳಲ್ಲಿಯೂ ಅಭಿವೃದ್ಧಿಯನ್ನು ಕಡೆಗಣಿಸಿರುವ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಅಧಿಕಾರದಿಂದ ಕೆಳಗಿಳಿಯಲಿದ್ದು, ಜನಮಾನಸದಲ್ಲಿ ಕಾಂಗ್ರೆಸ್ ಪಕ್ಷವಿದ್ದು, ಉಭಯ ಜಿಲ್ಲೆಗಳಲ್ಲಿಯೂ ಕಾಂಗ್ರೆಸ್ ಅಭ್ಯರ್ಥಿಗಳೇ ಜಯ ಗಳಿಸಲಿದ್ದಾರೆ ಎಂದು ಹೇಳಿದರು.
ಕಾರ್ಮಿಕ ಘಟಕದ ಜಿಲ್ಲಾಧ್ಯಕ್ಷ ಮಂಜುನಾಥ್, ಅರವಿಂದ್, ರಾಜಣ್ಣ, ಕೋನಪಲ್ಲಿ ಕೆ.ಎನ್.ಕೋದಂಡ, ಎಂ.ವಿ.ಕೃಷ್ಣಪ್ಪ, ಲಾಯರ್ ನಾರಾಯಣಸ್ವಾಮಿ, ಶಾಂತಮ್ಮ, ವಸಂತಮ್ಮ, ಸುಮಿತ್ರಮ್ಮ ಇದ್ದರು.
Leave a comment