ಪ್ರತಿನಿಧಿ ವರದಿ ಚಿಕ್ಕಮಗಳೂರು
ಡಿ.ದೇವರಾಜ ಅರಸುಚಅವರ 109 ನೇ ಜನ್ಮ ದಿನವನ್ನು ಅರ್ಥಪೂರ್ಣವಾಗಿ ಆಚರಿಸಲು ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಸಿ.ಎನ್.ಮೀನಾ ನಾಗರಾಜ್ ತಿಳಿಸಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಇಂದು ನಡೆದ ಡಿ.ದೇವರಾಜ ಅರಸು 109ನೇ ಜನ್ಮದಿನಾಚರಣೆ ಸಂಬಂಧ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ದೇವರಾಜ್ ಅರಸು ಅವರ ಭಾವಚಿತ್ರವನ್ನು ವಾಹನಕ್ಕೆ ಅಳವಡಿಸಿ ಹೂವಿನ ಅಲಂಕಾರದೊಂದಿಗೆ ತಾಲೂಕು ಕಚೇರಿ ಆವರಣದಿಂದ ನಗರದ ಅರಸು ಭವನದವರೆಗೆ ಸ್ತಬ್ಧಚಿತ್ರ ಮತ್ತು ಸಾಂಸ್ಕೃತಿಕ ಕಲಾತಂಡಗಳೊಂದಿಗೆ ಮೆರವಣಿಗೆ ಮಾಡಲಾಗುವುದು. ಕಾರ್ಯಕ್ರಮದಲ್ಲಿ ತಜ್ಞರಿಂದ ಉಪನ್ಯಾಸದೊಂದಿಗೆ ಡಿ.ದೇವರಾಜ ಅರಸು ಅವರ ಜೀವನ ಚರಿತ್ರೆ, ಕಿರು ಪುಸ್ತಕ ಹೊತ್ತಿಗೆಗಳನ್ನು ನೀಡಲಾಗುವುದು. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವಿದ್ಯಾರ್ಥಿನಿಲಯಗಳಲ್ಲಿ ಎಸ್.ಎಸ್.ಎಲ್.ಸಿ, ಪಿ.ಯು.ಸಿ ಮತ್ತು ಸ್ನಾತಕೋತ್ತರ ಪದವಿಗಳಲ್ಲಿ ವ್ಯಾಸಂಗ ಮಾಡಿದ ಅತಿ ಹೆಚ್ಚು ಅಂಕ ಪಡೆದ ಬಾಲಕ ಮತ್ತು ಬಾಲಕಿಯರಿಗೆ ಸಂದರ್ಭದಲ್ಲಿ ಸನ್ಮಾನಿಸಲಾಗುವುದು. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಮತ್ತು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ ಫಲಾನುಭವಿಗಳಿಗೆ ಸೌಲಭ್ಯ ವಿತರಣೆ ಮಾಡಲಾಗುವುದು ಎಂದು ಹೇಳಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ವಿಕ್ರಂ ಅಮಟೆ, ಉಪ ವಿಭಾಗಾಧಿಕಾರಿ ದಲ್ಜಿತ್ ಕುಮಾರ್ ಹಿಂದುಳಿದ ವರ್ಗಗಳ ಕಲ್ಯಾಣ ನಿಗಮದ ಜಿಲ್ಲಾ ಅಧಿಕಾರಿ ಮಂಜುನಾಥ್, ಅರಸು ಸಂಘದ ಅಧ್ಯಕ್ಷ ಮಧುಕುಮಾರ್, ಅಲೆಮಾರಿ ಸಲಹಾ ಸಮಿತಿ ಸದಸ್ಯ ಮಂಜುನಾಥ್, ಮಡಿವಾಳ ಸಂಘದ ಸದಸ್ಯ ರಾಮಚಂದ್ರ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿ ಸಿಬ್ಬಂದಿ ಹಾಜರಿದ್ದರು.