ಬಂಡೀಪುರ ಅರಣ್ಯ ಮುಂಚೂಣಿ ಸಿಬ್ಬಂದಿ ದಿನಾಚರಣೆ ಹಿನ್ನೆಲೆ ಇಂದು ಬಂಡೀಪುರದಲ್ಲಿ ಪ್ರವಾಸಿಗರಿಗೆ ಸಫಾರಿ ನಿರ್ಬಂಧ ಹೇರಲಾಗಿದೆ. ಹುಲಿ ಸಂರಕ್ಷಿತ ಪ್ರದೇಶ ಹಾಗೂ ಸಫಾರಿ ಕೇಂದ್ರವಾದ ಗುಂಡ್ಲುಪೇಟೆ ತಾಲೂಕಿನ ಬಂಡೀಪುರದಲ್ಲಿ ಸೆ.20 ರಂದು ಅಂದರೆ ಬುಧವಾರದಂದು ಸಫಾರಿ ಬಂದ್ ಮಾಡಲಾಗುತ್ತದೆ ಎಂದು ಬಂಡೀಪುರ ಅರಣ್ಯ ಸಂರಕ್ಷಣಾಧಿಕಾರಿ ಡಾ.ರಮೇಶ್ ಕುಮಾರ್ ಮಾಹಿತಿ ನೀಡಿದ್ದಾರೆ.
ಬಂಡೀಪುರ ಅರಣ್ಯದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಮುಂಚೂಣಿ ಸಿಬ್ಬಂದಿ ಸೇವೆ ಹಾಗೂ ಸಾಧನೆ ಸ್ಮರಿಸಿ ಗೌರವ ಸಲ್ಲಿಸುವ ಸಲುವಾಗಿ ಬಂಡೀಪುರ ಅರಣ್ಯ ಮುಂಚೂಣಿ ಸಿಬ್ಬಂದಿ ದಿನಾಚರಣೆಯನ್ನು ಮಾಡಲಾಗುತ್ತಿದೆ. ಬೆಳಿಗ್ಗೆ 11:30ಕ್ಕೆ ಮೇಲುಕಾಮನಹಳ್ಳಿಯ ಸಫಾರಿ ಕೇಂದ್ರದಲ್ಲಿ ಬಂಡೀಪುರ ಅರಣ್ಯ ಮುಂಚೂಣಿ ಸಿಬ್ಬಂದಿ ದಿನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮಕ್ಕೆ ಶಾಸಕ ಎಚ್.ಎಂ.ಗಣೇಶಪ್ರಸಾದ್ ಅಧ್ಯಕ್ಷತೆ ವಹಿಸಲಿದ್ದಾರೆ.
ಬಂಡೀಪುರ ವಿಭಾಗದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಎಲ್ಲ ಕಾಯಂ ಅಧಿಕಾರಿ ಹಾಗೂ ಸಿಬ್ಬಂದಿ ಕುಟುಂಬ ಸದಸ್ಯರೊಂದಿಗೆ ಕಾರ್ಯಕ್ರಮಕ್ಕೆ ಆಗಮಿಸುವಂತೆ ಆಹ್ವಾನ ನೀಡಲಾಗಿದ್ದು, ವಿಶೇಷ ಸಾಧನೆ ಮಾಡಿರುವ ಅಧಿಕಾರಿ ಹಾಗೂ ಸಿಬ್ಬಂದಿಗೆ ಬಹುಮಾನ ವಿತರಣೆ ಮಾಡಲಾಗುತ್ತೆ. ಅವರನ್ನು ಸನ್ಮಾನಿಸಲಾಗುತ್ತದೆ. ಇನ್ನು ಸನ್ಮಾನ ಹಾಗೂ ಬಹುಮಾನ ವಿತರಣೆ ಜೊತೆಗೆ ಇತರೆ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಹೀಗಾಗಿ ಬುಧವಾರ ಸಫಾರಿ ರದ್ದುಗೊಳಿಸಲಾಗಿದೆ ಎಂದು ಬಂಡೀಪುರ ಹುಲಿಯೋಜನೆ ನಿರ್ದೇಶಕ ಪಿ.ರಮೇಶಕುಮಾರ್ ಮಾಹಿತಿ ನೀಡಿದ್ದಾರೆ.