ಬೆಂಗಳೂರು: ರಾಜ್ಯದಲ್ಲಿ ಏಪ್ರಿಲ್ 26ರಂದು ಮೊದಲ ಹಂತದ ಮತದಾನ ನಡೆಯಲಿದೆ. ಇತ್ತ ನಾಯಕರು, ಸಮಾವೇಶ, ರೋಡ್ ಶೋ ಅಂತಾ ಮತಯಾಚನೆ ಮಾಡುತ್ತಿದ್ದಾರೆ. ಮಾತಿನ ಭರದಲ್ಲಿ ಕೆಲ ನಾಯಕರು ಯಡವಟ್ಟು ಮಾಡಿಕೊಳ್ಳುತ್ತಿದ್ದಾರೆ. ಅವರ ವಿರುದ್ಧ ಚುನಾವಣಾ ಆಯೋಗಕ್ಕೆ ಕಾಂಗ್ರೆಸ್, ಬಿಜೆಪಿ ಮುಖಂಡರು ದೂರು ಸಲ್ಲಿಸಿದ್ದಾರೆ. ಬಿಜೆಪಿ ಕಾನೂನು ವಿಭಾಗದ ಮುಖ್ಯಸ್ಥ ವಿವೇಕ್ ರೆಡ್ಡಿ ನೇತೃತ್ವದ ನಿಯೋಗ ಚುನಾವಣಾ ಆಯೋಗಕ್ಕೆ ಸೋಮವಾರ ಮೂರು ದೂರು ಸಲ್ಲಿಸಿದೆ.
ನೀತಿ ಸಂಹಿತೆ ಉಲ್ಲಂಘಿಸಿ ಸ್ವಾಗತ
ಭಾನುವಾರ ಬಳ್ಳಾರಿಯಲ್ಲಿ ರಾಜ್ಯಸಭಾ ಸದಸ್ಯ ನಾಸೀರ್ ಹುಸೇನ್ಗೆ ಅದ್ಧೂರಿಯಾಗಿ ಸ್ವಾಗತ ಕೋರಲಾಗಿತ್ತು. ಈ ವೇಳೆ ಚುನಾವಣಾ ಆಯೋಗದ ಅನುಮತಿ ಪಡೆಯದೆ ನೀತಿಸಂಹಿತೆ ಉಲ್ಲಂಘಿಸಲಾಗಿದೆ ಎಂದು ಬಿಜೆಪಿ ನಿಯೋಗ ದೂರು ನೀಡಿದೆ. ಅದರಲ್ಲಿ ಸಿಎಂ ಸಿದ್ದರಾಮಯ್ಯ, ಸಚಿವ ಡಿ.ಸುಧಾಕರ್ ಉಲ್ಲೇಖಿಸಿ ಕ್ರಮಕೈಗೊಳ್ಳುವಂತೆ ಮನವಿ ಮಾಡಿದೆ
5 ಕೆಜಿ ಅಕ್ಕಿ ಕೊಡ್ತಿದ್ದೆ ಎಂದ ಸಿಎಂ
ಕಳೆದ ಬಾರಿ 5 ಕೆಜಿ ಅಕ್ಕಿ ಕೊಡ್ತಿದ್ದೆ ಎಂದು ಟ್ವೀಟ್ ಮಾಡಿದ್ದ ಸಿಎಂ ಸಿದ್ದರಾಮಯ್ಯ ವಿರುದ್ಧವೂ ಬಿಜೆಪಿ ದೂರು ನೀಡಿದೆ. ಇದು ಸುಳ್ಳು ಎಂದು ಚುನಾವಣಾ ಆಯೋಗಕ್ಕೆ ಬಿಜೆಪಿ ನಿಯೋಗ ದೂರು ಸಲ್ಲಿಸಿದೆ.