- ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ಎಂ.ಲಕ್ಷ್ಮಣ್ ಟೀಕೆ
ಪ್ರತಿನಿಧಿ ವರದಿ ಮಡಿಕೇರಿ
ಕೇಂದ್ರದಲ್ಲಿ ಅಧಿಕಾರಕ್ಕೆ ಬಂದಿರುವ ಬಿಜೆಪಿ ನೇತೃತ್ವದ ಎನ್ಡಿಎ ಮೈತ್ರಿ ಕೂಟ ಸರ್ಕಾರದ ಸಚಿವ ಸಂಪುಟದಲ್ಲಿ ದಲಿತ, ಹಿಂದುಳಿದ ವರ್ಗ ಮತ್ತು ಅಲ್ಪಸಂಖ್ಯಾತರಿಗೆ ಸೂಕ್ತ ಸ್ಥಾನಮಾನ ನೀಡದೆ ಸಾಮಾಜಿಕ ನ್ಯಾಯವನ್ನು ಕಡೆಗಣಿಸಲಾಗಿದೆ ಎಂದು ಲೋಕಸಭಾ ಚುನಾವಣೆಯ ಪರಾಜಿತ ಅಭ್ಯರ್ಥಿ, ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಟೀಕಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕೇಂದ್ರ ಸಚಿವ ಸಂಪುಟದಲ್ಲಿ 72 ಸಚಿವರ ಪೈಕಿ ಒಂದೇ ಸಮುದಾಯದ 25 ಮಂದಿಗೆ ಸ್ಥಾನ ನೀಡಲಾಗಿದೆ. ಶೇ.2 ರಷ್ಟು ಇರುವ ಬ್ರಾಹ್ಮಣರು ಸಂಪುಟದಲ್ಲಿ ಶೇ.35 ರಷ್ಟು ಸ್ಥಾನ ಪಡೆದುಕೊಂಡಿದ್ದಾರೆ. ಬೇರೆ ಸಮುದಾಯದವರು ಬಿಜೆಪಿಗೆ ಮತದಾನ ಮಾಡಿಲ್ಲವೇ ಎಂದು ಪ್ರಶ್ನಿಸಿದರು.
ಕರ್ನಾಟದಲ್ಲಿ 17 ಬಿಜೆಪಿ ಸಂಸದರಿದ್ದು, ಐವರಿಗೆ ಸಚಿವ ಸ್ಥಾನ ನೀಡಲಾಗಿದೆ. ದಲಿತ, ಹಿಂದುಳಿದ ವರ್ಗ ಮತ್ತು ಅಲ್ಪಸಂಖ್ಯಾತರನ್ನು ಕಡೆಗಣಿಸಲಾಗಿದೆ. ಲಿಂಗಾಯತ ಸಮುದಾಯದ ವಿ.ಸೋಮಣ್ಣ ಅವರಿಗೆ ರಾಜ್ಯ ಖಾತೆ ಸ್ಥಾನ ನೀಡಲಾಗಿದೆ. ನಿಜವಾಗಿಯೂ ಬಿಜೆಪಿ ಬಳಿ ಸಾಮಾಜಿಕ ನ್ಯಾಯ ಇದೆಯೇ ಎಂದು ಪ್ರಶ್ನಿಸಿದರು.
ಕೇಂದ್ರದಲ್ಲಿ ಸಚಿವರಾಗಿರುವ ಜೆಡಿಎಸ್ ನ ಎಚ್.ಡಿ.ಕುಮಾರಸ್ವಾಮಿ ಅವರು ಕೇವಲ ಕಾಂಗ್ರೆಸ್ ಪಕ್ಷ ಮತ್ತು ಡಿ.ಕೆ.ಶಿವಕುಮಾರ್ ಅವರನ್ನು ಟೀಕಿಸುವುದರಲ್ಲೇ ಕಾಲಹರಣ ಮಾಡದೆ ರಾಜ್ಯದ ವಿವಿಧ ಸಮಸ್ಯೆಗಳನ್ನು ಬಗೆ ಹರಿಸಲು ಬದ್ಧರಾಗಿರಬೇಕಾಗುತ್ತದೆ ಎಂದರು.
ಕಳೆದ ಹತ್ತು ವರ್ಷಗಳಲ್ಲಿ ಹಿಂದಿನ ಸಂಸದ ಪ್ರತಾಪ್ ಸಿಂಹ ಕೊಡಗು ಜಿಲ್ಲೆಗೆ ಯಾವುದೇ ಕೊಡುಗೆಯನ್ನು ನೀಡಿಲ್ಲ. ಇದೀಗ ನೂತನವಾಗಿ ಆಯ್ಕೆಯಾಗಿರುವ ಸಂಸದ ಯದುವೀರ್ ಅವರಾದರು ಅಭಿವೃದ್ಧಿ ಕಾರ್ಯಗಳನ್ನು ತರಲಿ ಎಂದರು.