ಹುಣಸೂರು: ಮುಂಬರುವ ಎಲ್ಲಾ ಚುನಾವಣೆಗಳಲ್ಲೂ ಬಿಜೆಪಿ-ಜೆಡಿಎಸ್ ಮೈತ್ರಿ ಮುಂದುವರಿಯಲಿದೆ ಎಂದು ಮೈಸೂರು-ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹುಣಸೂರಿನಲ್ಲಿ ಹೇಳಿಕೆ ನೀಡಿದ್ದಾರೆ.
ಹುಣಸೂರು ನಗರಸಭೆ ಚುನಾವಣೆ ಹಿನ್ನೆಲೆಯಲ್ಲಿ ಹುಣಸೂರಿಗೆ ಆಗಮಿಸಿದ್ದ ಮೈಸೂರು-ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ಚುನಾವಣೆಯಲ್ಲಿ ಭಾಗವಹಿಸಿ, ಗೆಲುವಿನ ಸಂಭ್ರಮಾಚರಣೆ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸ್ಥಳೀಯ ಸಂಸ್ಥೆಗಳ ಅಧಿಕಾರ ಹಿಡಿಯುವಲ್ಲಿ ಮೈತ್ರಿಕೂಟ ಯಶಸ್ವಿ ಆಗುತ್ತಿದೆ. ಬನ್ನೂರಿನಲ್ಲೂ ಮೈತ್ರಿಕೂಟ ಅಧಿಕಾರ ಹಿಡಿದಿದೆ. ಇದೀಗ ಹುಣಸೂರಿನಲ್ಲೂ ಮೈತ್ರಿಗೆ ಅಧಿಕಾರ ಸಿಕ್ಕಿದೆ ಹಾಗೂ ಮುಂಬರುವ ಎಲ್ಲಾ ಹಂತದ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಮುಂದುವರಿಯಲಿದೆ ಎಂದಿದ್ದಾರೆ.
ಇದೇ ವೇಳೆ ಮಾತನಾಡಿದ ಹುಣಸೂರು ಶಾಸಕ ಜಿ ಡಿ ಹರೀಶ್ ಗೌಡ, ನಗರಸಭೆ ಅಧ್ಯಕ್ಷ ಉಪಾಧ್ಯಕ್ಷ ಆಯ್ಕೆ ಚುನಾವಣೆಯಲ್ಲಿ ಯಾರಿಗೂ ಆಮಿಷ ಒಡ್ಡಿಲ್ಲ. ಕಾಂಗ್ರೆಸ್ ದುರಾಡಳಿತದಿಂದ ಬೇಸತ್ತಿದ್ದ ಪಕ್ಷೇತರ ಸದಸ್ಯರು ಈ ಬಾರಿ ಬಿಜೆಪಿ-ಜೆಡಿಎಸ್ ಮೈತ್ರಿಕೂಟದ ಜೊತೆ ಕೈ ಜೋಡಿಸಿದ್ದಾರೆ. ಕಾಂಗ್ರೆಸ್ ನಾಯಕರು ಹತಾಶೆಯಿಂದ ಇಲ್ಲಸಲ್ಲದ ಆರೋಪಗಳನ್ನು ಮಾಡುತ್ತಿದ್ದಾರೆ. ಆದರೆ ಕಾಂಗ್ರೆಸ್ ಭದ್ರಕೋಟೆಯನ್ನು ಭೇದಿಸಿ ಮೈತ್ರಿಕೂಟ ಅಧಿಕಾರ ಹಿಡಿದಿದೆ ಎಂದಿದ್ದಾರೆ.