ರಾಯಚೂರು: ಭಾರತೀಯ ಜನತಾ ಪಾರ್ಟಿ ಅಧಿಕಾರಕ್ಕೆ ಬಂದರೆ ಸಂವಿಧಾನ ಬದಲಾವಣೆ ಮಾಡುತ್ತಾರೆ ಅಂತ ಕಾಂಗ್ರೆಸ್ ನಾಯಕರು ಆರೋಪ ಮಾಡುತ್ತಿದ್ದಾರೆ. ರಾಮಲಿಂಗೇಶ್ವರ ದೇವರ ಮೇಲೆ ಆಣೆ ಮಾಡಿ ಹೇಳುತ್ತೇನೆ, ನಮ್ಮ ಬಿಜೆಪಿ ಸರ್ಕಾರ ಸಂವಿಧಾನ ಮುಟ್ಟುವುದಿಕಲ್ಲ, ಸಂವಿಧಾನ ಬದಲಾವಣೆ ಮಾಡುವುದಿಲ್ಲ. ಸಂವಿಧಾನ ಬದಲಾವಣೆ ಆದರೆ ನನ್ನ ತಲೆ ಕತ್ತರಿಸಿ ರಾಮಲಿಂಗೇಶ್ವರನಿಗೆ ಅರ್ಪಿಸಿ ಎಂದು ಬಿಜೆಪಿ ಶಾಸಕ ಡಾ. ಶಿವರಾಜ್ ಪಾಟೀಲ್ ಹೇಳಿದರು. ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ರಾಯಚೂರಿನಲ್ಲಿ ಗುರುವಾರ (ಮೇ 02) ನಡೆದ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ನಮ್ಮ ಪಕ್ಷದ ಯಾ ಒಬ್ಬ ನಾಯಕರು ಕೂಡ ಸಂವಿಧಾನ ಬದಲಾವಣೆ ಮಾಡಲ್ಲ ಎಂದರು.
ಕಾಂಗ್ರೆಸ್ನವರು ಬರೀ ಸುಳ್ಳು ಹೇಳುತ್ತಿದ್ದಾರೆ. ಬಿಜೆಪಿ ಅಧಿಕಾರಕ್ಕೆ ಬಂದರೆ ನಿಮ್ಮನ್ನು ದೇಶದಲ್ಲಿ ಇರಲು ಬಡಲ್ಲ ಅಂತ ಕಾಂಗ್ರೆಸ್ ಮುಸ್ಲಿಮರಿಗೆ ಹೆದರಿಸುತ್ತಿದೆ. ಬಿಜೆಪಿ ಅಧಿಕಾರಕ್ಕೆ ಬಂದರೇ ಸಂವಿಧಾನ ಬದಲಾವಣೆ ಮಾಡುತ್ತಾರೆ ಅಂತ ನನ್ನ ದಲಿತ ಬಂಧುಗಳಿಗೆ ಹೇಳುತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಕಳೆದ 10 ವರ್ಷದಿಂದ ಆಡಳಿತ ನಡೆಸುತ್ತಿದ್ದಾರೆ, ಸಂವಿಧಾನ ಬದಲಾವಣೆ ಮಾಡಿದ್ದಾರಾ? ಕಾಂಗ್ರೆಸ್ನವರು ಅಪಪ್ರಚಾರ ಮಾಡುತ್ತಿದ್ದಾರೆ. ಇದಕ್ಕೆ ಯಾರು ಕಿವಿಗೊಡಬಾರದು ಎಂದು ಮನವಿ ಮಾಡಿದರು.