ಮೈಸೂರು: ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿದ ಹಿನ್ನೆಲೆ ಮೈಸೂರಿನ ಬಿಜೆಪಿ ಕಚೇರಿ ಬಳಿ ಸಂಭ್ರಮಾಚರಣೆ ನಡೆಸಲಾಗಿದೆ. ಬಿಜೆಪಿ ಕಚೇರಿ ಬಳಿ ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದ ಕಾರ್ಯಕರ್ತರು ಪ್ರಧಾನಿ ಮೋದಿ ಮತ್ತು ಅಮಿತ್ ಶಾ ಪರ ವಿವಿಧ ಘೋಷಣೆ ಕೂಗಿದರು. ಸಂಭ್ರಮಾಚರಣೆಯಲ್ಲಿ ಬಿಜೆಪಿ ಶಾಸಕ ಶ್ರೀವತ್ಸ, ಜಿಲ್ಲಾ ಘಟಕದ ಅಧ್ಯಕ್ಷ ಮಹದೇವಸ್ವಾಮಿ, ನಗರ ಘಟಕದ ಅಧ್ಯಕ್ಷ ಮಾಜಿ ಶಾಸಕ ಎಲ್ ನಾಗೇಂದ್ರ ಭಾಗಿಯಾಗಿದ್ರು.
ಇದೇ ಸಂದರ್ಭ ಮಾಧ್ಯಮಗಳ ಜೊತೆ ಶಾಸಕ ಶ್ರೀವತ್ಸ ಮಾತನಾಡಿ, ಕರ್ನಾಟಕ ಸರ್ಕಾರದ ಭ್ರ್ಮಷ್ಟಾಚಾರದಿಂದ ಹರಿಯಾಣದಲ್ಲಿ ಬಿಜೆಪಿ ಗೆಲುವು ಸಿಕ್ಕಿದೆ. ರಾಜ್ಯ ಸರ್ಕಾರದ ಭ್ರಷ್ಟಾಚಾರವನ್ನು ಹರಿಯಾಣ ಚುನಾವಣಾ ಪ್ರಚಾರದಲ್ಲಿ ಪ್ರಸ್ತಾಪಿಸಲಾಗಿತ್ತು. ಮುಡಾ ಹಗರಣ, ನಾಗಮಂಗಲ ಗಲಭೆ ಪ್ರಕರಣಗಳನ್ನು ಪ್ರಧಾನಿ ನರೇಂದ್ರಮೋದಿ ಪ್ರಸ್ತಾಪಿಸಿದ್ದರು. ಚುನಾವಣಾ ಪ್ರಚಾರದಲ್ಲಿ ಕರ್ನಾಟಕದ ವಿದ್ಯಮಾನಗಳನ್ನು ಪ್ರಸ್ತಾಪಿಸಲಾಗಿತ್ತು. ಹಾಗಾಗಿ ಚುನಾವಣಾ ಸಮೀಕ್ಷೆಗಳನ್ನು ಮೀರಿ ಬಿಜೆಪಿ ಗೆಲುವು ಸಾಧಿಸಿದೆ. ಹರಿಯಾಣ ಫಲಿತಾಂಶ ಮುಂಬರುವ ಮಹಾರಾಷ್ಟ್ರ, ಜಾರ್ಖಂಡ್ ಚುನಾವಣೆ ಮೇಲೂ ಪರಿಣಾಮ ಬೀರಲಿದೆ.ಚುನಾವಣೆ ಸೋಲು ಕಾಂಗ್ರೆಸ್ ಆಂತರೀಕ ಬೇಗುದಿಯನ್ನು ಮತ್ತಷ್ಟು ಹೆಚ್ಚಿಸಿದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ಬದಲಾವಣೆ ಸಾಧ್ಯತೆಯಿದೆ ಎಂದು ಶಾಸಕ ಶ್ರೀವತ್ಸ ಹೇಳಿಕೆ ನೀಡಿದ್ದಾರೆ.