ಜಿಲ್ಲಾ ನೋಡಲ್ ಅಧಿಕಾರಿ ಡಾ.ಡಿ.ಜಯರಾಜು ಅಭಿಪ್ರಾಯ
ಪ್ರತಿನಿಧಿ ವರದಿ ಚಾಮರಾಜನಗರ
ಒಬ್ಬ ರಕ್ತದಾನ ಮಾಡುವುದರಿಂದ ನಾಲ್ಕು ಜನರ ಜೀವವನ್ನು ಉಳಿಸಬಹುದು ಎಂದು ಜಿಲ್ಲಾ ನೋಡಲ್ ಅಧಿಕಾರಿ ಡಾ.ಡಿ.ಜಯರಾಜು ಹೇಳಿದರು.
ನಗರದ ಶ್ರೀ ಚಾಮರಾಜೇಶ್ವರ ದೇವಸ್ಥಾನದ ಎದುರು ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ಪ್ರತಿಬಂಧಕ ಮತ್ತು ನಿಯಂತ್ರಣ ಘಟಕ, ರೋಟರಿ ಸಿಲ್ಕ್ ಸಿಟಿ, ಭಾರತೀಯ ರೆಡ್ ಕ್ರಾಸ್ ಸಂಸ್ಥೆ, ಸಿಮ್ಸ್, ಜೆಎಸ್ಎಸ್ ನರ್ಸಿಂಗ್ ಕಾಲೇಜು ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದ್ದ ವಿಶ್ವ ರಕ್ತದಾನಿಗಳ ದಿನಾಚರಣೆ ಜಾಗೃತಿ ಜಾಥಾಕ್ಕೆ ಚಾಲನೆ ನೀಡಿ ಮಾತನಾಡಿದರು.
20 ವರ್ಷಕ್ಕಿಂತ ಮೇಲ್ಪಟ್ಟ, 45 ಕೆ.ಜಿ.ತೂಕವಿರುವ ಪುರುಷರು ಮೂರು ತಿಂಗಳಿಗೊಮ್ಮೆ, ಮಹಿಳೆಯರು ನಾಲ್ಕು ತಿಂಗಳೊಗೊಮ್ಮೆ ರಕ್ತದಾನ ಮಾಡಬಹುದು. ರಕ್ತದಾನದಿಂದ ಮನುಷ್ಯ ಆರೋಗ್ಯವಾಗಿರುವುದರ ಜತೆಗೆ, ನೆಮ್ಮದಿಯಿಂದ ಇರಲು ಸಾಧ್ಯ ಎಂದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಸ್.ಚಿದಂಬರ ಮಾತನಾಡಿ, ಇತರ ವಸ್ತುಗಳಂತೆ ರಕ್ತವನ್ನು ತಯಾರಿಸಲು ಸಾಧ್ಯವಿಲ್ಲ. ಅದು ಮನುಷ್ಯನಿಂದ ಮಾತ್ರವೇ ಸಿಗಲಿದೆ. ಇತ್ತೀಚಿನ ದಿನಗಳಲ್ಲಿ ಜಿಲ್ಲೆಯಲ್ಲಿ ರಕ್ತದ ಅವಶ್ಯಕತೆ ಹೆಚ್ಚಿದೆ. 1500 ಬಾಟಲ್ ಅವಶ್ಯಕತೆ ಇದ್ದು, ಪ್ರಸ್ತುತ ಕೇವಲ 30 ರಿಂದ 400 ಬಾಟಲ್ ಮಾತ್ರ ಸಿಗುತ್ತಿದೆ ಎಂದು ಹೇಳಿದರು.
ಜಾಗೃತಿ ಜಾಥಾವು ದೇವಸ್ಥಾನದಿಂದ ಹೊರಟು ಶ್ರೀ ಭುವನೇಶ್ವರಿ ವೃತ್ತ ತಲುಪಿ ಬಳಿಕ ಬಿ.ರಾಚಯ್ಯ ಜೋಡಿ ರಸ್ತೆ ಮೂಲಕ ರೋಟರಿ ಭವನ ತಲುಪಿತು.
ಐಎನ್ಎ ಅಧ್ಯಕ್ಷ ಡಾ.ಬಸವರಾಜೇಂದ್ರ, ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿ ಡಾ.ರವಿಕುಮಾರ್, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ದೊರೆಸ್ವಾಮಿನಾಯಕ್, ಸರ್ಕಾರಿ ನರ್ಸಿಂಗ್ ಕಾಲೇಜಿನ ಉಪ ಪ್ರಾಂಶುಪಾಲೆ ಗಂಗಮ್ಮ, ಮೇಲ್ವಿಚಾರಕ ಮಹದೇವಪ್ರಸಾದ್, ಜೆಎಸ್ಎಸ್ ನರ್ಸಿಂಗ್ ಕಾಲೇಜಿನ ಉಪನ್ಯಾಸಕಿ ಮಧು ಸೇರಿದಂತೆ ವಿದ್ಯಾರ್ಥಿಗಳು ಇದ್ದರು.
ಚಾಮರಾಜನಗರದ ಶ್ರೀ ಚಾಮರಾಜೇಶ್ವರ ದೇವಸ್ಥಾನದ ಎದುರು ವಿಶ್ವ ರಕ್ತದಾನಿಗಳ ದಿನಾಚರಣೆ ಜಾಗೃತಿ ಜಾಥಾಕ್ಕೆ ಜಿಲ್ಲಾ ನೋಡಲ್ ಅಧಿಕಾರಿ ಡಾ.ಡಿ.ಜಯರಾಜು ಚಾಲನೆ ನೀಡಿದರು.