ರಾಜ್ಯ ಸಂಯೋಜಕ ಎಂ.ಕೃಷ್ಣಮೂರ್ತಿ ಒತ್ತಯ
ಕೇಂದ್ರ ಸಚಿವ ಎಚ್ಡಿಕೆ ವಿರುದ್ಧ ಪ್ರಾಸಿಕ್ಯೂಷನ್ಗೆ ರಾಜ್ಯಪಾಲರು ಅನುಮತಿ ನೀಡಲಿ
ಪ್ರತಿನಿಧಿ ವರದಿ ಚಾಮರಾಜನಗರ
ಮುಡಾ ಹಗರಣ ಆರೋಪ ಮುಕ್ತರಾಗುವವರಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ ತನಿಖೆ ಎದುರಿಸಬೇಕು ಎಂದು ಬಹುಜನ ಸಮಾಜ ಪಕ್ಷದ ರಾಜ್ಯ ಸಂಯೋಜಕ ಎಂ.ಕೃಷ್ಣಮೂರ್ತಿ ಆಗ್ರಹಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಮೇಲೆ ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿರುವುದರಿಂದ ಕೂಡಲೇ ಮುಖ್ಯಮಂತ್ರಿ ರಾಜೀನಾಮೆ ನೀಡಿ ತನಿಖೆ ಎದುರಿಸಲಿ. ಅದನ್ನು ಬಿಟ್ಟು ನಾನು ಭ್ರಷ್ಟಾಚಾರ ಮಾಡಿಲ್ಲ. ನಾನೊಬ್ಬ ಸಮಾಜವಾದಿ, ನಿಷ್ಕಳಂಕ ರಾಜಕಾರಣಿ ಎಂದು ಮಾತನಾಡಿ ಸಮರ್ಥನೆ ಮಾಡಿಕೊಳ್ಳವುದು ಸರಿಯಲ್ಲ. ನಿಮ್ಮ ಮೇಲೆ ಆರೋಪ ಬಂದಿದೆ ಸತ್ಯವೋ, ಸುಳ್ಳೋ ತನಿಖೆ ಆಗುವವರೆಗೆ ನೀವು ಆರೋಪಿ ಸ್ಥಾನದಲ್ಲಿರುತ್ತೀರಿ. ಹಾಗಾಗಿ ಆರೋಪ ಮುಕ್ತರಾಗುವವರೆಗೆ ನೀವು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಸುದ್ದಿಗೋಷ್ಟಿಯಲ್ಲಿ ಒತ್ತಾಯಿಸಿದರು.
ಮುಖ್ಯಮಂತ್ರಿ ಅವರು ರಾಜೀನಾಮೆ ನೀಡಿ ಸಾಮಾಜಿಕ ನ್ಯಾಯವನ್ನು ಎತ್ತಿ ಹಿಡಿಯುವ ಕೆಲಸಕ್ಕೆ ಮುಂದೆ ಬರಬೇಕಾಗುತ್ತದೆ. ದೇಶಕ್ಕೆ ಸ್ವಾತಂತ್ರ್ಯ ಬಂದು 78 ವರ್ಷಗಳು ತುಂಬಿದ್ದರು ರಾಜ್ಯದಲ್ಲಿ ಒಬ್ಬ ಎಸ್ಸಿ, ಎಸ್ಟಿ ಮುಖ್ಯಮಂತ್ರಿ ಆಗಿಲ್ಲ. ಸಿದ್ದರಾಮಯ್ಯ ಅವರು ನಾನು ಸಮಾಜವಾದಿ, ಸಮಾಜಿಕ ನ್ಯಾಯಕ್ಕೆ ಬದ್ಧನಾಗಿರುವ ವ್ಯಕ್ತಿ ಎಂದು ಹೇಳುವ ಅವರು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿ ಒಬ್ಬ ಎಸ್ಸಿ, ಎಸ್ಟಿ ಸಮುದಾಯಕ್ಕೆ ಸೇರಿದ ವ್ಯಕ್ತಿಯನ್ನು ಮುಖ್ಯಮಂತ್ರಿ ಮಾಡಬೇಕು ಎಂದು ಆಗ್ರಹಿಸಿದರು.
ಜೆಡಿಎಸ್ನಲ್ಲಿದ್ದ ಸಿದ್ದರಾಮಯ್ಯ ಅವರು ಕಾಂಗ್ರೆಸ್ ಗೆ ಬಂದ ಸಂದರ್ಭದಲ್ಲಿ ವಿರೋಧ ಪಕ್ಷದ ನಾಯಕರಾಗಿದ್ದ ಮಲ್ಲಿಕಾರ್ಜುನ ಖರ್ಗೆ ಅವರು ತಮ್ಮ ಸ್ಥಾನವನ್ನು ತೆರವು ಮಾಡಿ ಸಿದ್ದರಾಮಯ್ಯ ಅವರಿಗೆ ವಿರೋಧ ಪಕ್ಷ ಸ್ಥಾನವನ್ನು ಬಿಟ್ಟು ಕೊಟ್ಟು ಕೇಂದ್ರದ ರಾಜಕಾರಣಕ್ಕೆ ಹೋದರು. ಸಿದ್ಧರಾಮಯ್ಯ ಅವರು ಕಾಂಗ್ರೆಸ್ ಗೆ ಬಂದಾಗ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಬಾರಿ ಅನ್ಯಾಯವಾಯಿತು. 2014ರಲ್ಲಿ ಜಿ.ಪರಮೇಶ್ವರ್ ಅವರು ಸಿಎಂ ಆಗಬೇಕಿತ್ತು. ಆದರೆ ಅವರು ಪರಮೇಶ್ವರ್ ಅವರು ಗೆಲ್ಲದಂತೆ ನೋಡಿಕೊಂಡರು ಎನ್ನುವ ಅಪವಾದ ಸಿದ್ದರಾಮಯ್ಯ ಅವರ ಮೇಲಿದೆ. ಇವರಿಂದ ಜಿ.ಪರಮೇಶ್ವರಗೂ ಅನ್ಯಾಯವಾಗಿದೆ ಎಂದರು.
ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ವಿರುದ್ಧ ತನಿಖೆ ನಡೆಸಿ ಲೋಕಾಯುಕ್ತರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಬೇಕು ಎಂದು ರಾಜ್ಯಪಾಲರನ್ನು ಕೇಳಿದ್ದಾರೆ. ಹಾಗಾಗಿ ರಾಜ್ಯಪಾಲರು ಕುಮಾರಸ್ವಾಮಿ ಅವರ ವಿರುದ್ದ ಕೂಡಲೇ ಪ್ರಾಸಿಕೂಷನ್ ಗೆ ಅನುಮತಿ ನೀಡಬೇಕು. ಎಂದು ಆಗ್ರಹಿಸಿದರು.
ಬಿಎಸ್ಪಿ ಜಿಲ್ಲಾಧ್ಯಕ್ಷ ಎನ್.ನಾಗಯ್ಯ, ಸಂಯೋಜಕ ರಾಜಶೇಖರ, ಉಪಾಧ್ಯಕ್ಷ ಬ್ಯಾಡಮೂಡ್ಲು ಬಸವಣ್ಣ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬ.ಮ.ಕೃಷ್ಣಮೂರ್ತಿ, ತಾಲೂಕು ಅಧ್ಯಕ್ಷ ಚಂದ್ರಕಾಂತ್, ಭೈರಲಿಂಗಸ್ವಾಮಿ ಇದ್ದರು.