ಮುಂದಿನ ವರ್ಷ ಅರಸೀಕೆರೆಗೆ ನೀರು
ಜಿಲ್ಲಾ ಉಸ್ತುವಾರಿ ಸಚಿವ ಕೆ.ಎನ್.ರಾಜಣ್ಣ ಮಾಹಿತಿ
ಪ್ರತಿನಿಧಿ ವರದಿ ಸಕಲೇಶಪುರ
ಹಲವು ಅಡೆತಡೆ ನಿವಾರಣೆ ಮಾಡಿ, ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ಮುತುವರ್ಜಿಯಿಂದ ಎತ್ತಿನ ಹೊಳೆ ಯೋಜನೆ ಮೊದಲ ಹಂತದ ಕಾಮಗಾರಿ ಪೂರ್ಣಗೊಂಡಿದ್ದು, ಸೆ.6 ರಂದು ವಿಧ್ಯುಕ್ತವಾಗಿ ಚಾಲನೆ ನೀಡಲಾಗುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎನ್.ರಾಜಣ್ಣ ತಿಳಿಸಿದರು.
ತಾಲೂಕಿನ ಹೆಬ್ಬನಹಳ್ಳಿ ಬಳಿ ಸಂಸದ ಶ್ರೇಯಸ್ ಪಟೇಲ್, ಶಾಸಕ ಕೆ.ಎಂ.ಶಿವಲಿಂಗೇಗೌಡ ಮೊದಲಾದವರ ನೇತೃತ್ವದಲ್ಲಿ ಉದ್ಘಾಟನಾ ಕಾರ್ಯಕ್ರಮದ ಸ್ಥಳ ಪರಿಶೀಲನೆ ನಡೆಸಿದ ಬಳಿಕ ಸುದ್ದಿಗೋಷ್ಟಿಯಲ್ಲಿ ಮಾತನಾಡಿದರು.
ಸೆ.6 ರಂದು ಗೌರಿ ಹಬ್ಬದ ದಿನ ಎತ್ತಿನಹೊಳೆಗೆ ಶುಭ ಚಾಲನೆ ಸಿಗಲಿದೆ. ನಾಡಿನ ಸಿಎಂ, ಡಿಸಿಎಂ ಹಾಗೂ ಹಲವು ಸಚಿವರು ಭಾಗಿಯಾಗಲಿದ್ದಾರೆ ಎಂದು ಮಾಹಿತಿ ನೀಡಿದರು. ಪಶ್ಚಿಮ ಮುಖವಾಗಿ ಹರಿಯುವ ನದಿ ನೀರನ್ನು ಪೂರ್ವಾಭಿಮುಖವಾಗಿ ತಿರುಗಿಸುವ ವಿನೂತನ ಯೋಜನೆ ಇದು. ಒಟ್ಟು 7 ಪೈಪ್ ಲೈನ್ ಮೂಲಕ ನೀರು ಮೇಲೆತ್ತಲಾಗುತ್ತಿದೆ. ಇದಕ್ಕಾಗಿ ನೀರನ್ನು ಸಂಗ್ರಹ ಮಾಡಲಾಗಿದೆ. ಮುಂದಿನ ವರ್ಷದ ವೇಳೆಗೆ ಅರಸೀಕೆರೆ ಹಾಗೂ ಜಿಲ್ಲೆಯ ಬೇರೆ ಭಾಗಕ್ಕೆ ನೀರು ಹರಿಯಲಿದೆ ಎಂದು ಹೇಳಿದರು.
ಸದ್ಯ ನಾಲ್ಕನೇ ವಿತರಣೆ ತೊಟ್ಟಿಯಿಂದ ವಾಣಿವಿಲಾಸ ಸಾಗರದತ್ತ ಲಿಫ್ಟ್ ಮಾಡಿದ ನೀರು ಹರಿಯುತ್ತಿದೆ. ಎಲ್ಲ ಅಡೆತಡೆ ನಿವಾರಣೆ ಮಾಡಿ ಯೋಜನೆ ಜಾರಿ ಮಾಡಲಾಗುತ್ತಿದೆ. ಡಿಸಿಎಂ ಅವರು ವೈಯಕ್ತಿಕ ಮುತು ವರ್ಜಿಯಿಂದ ಯೋಜನೆ ಕಾರ್ಯಗತಗೊಳಿಸಲು ಶ್ರಮಿಸಿದ್ದಾರೆ ಎಂದು ವಿವರಿಸಿದರು.
ಈ ಕಾರ್ಯಕ್ರಮಕ್ಕೆ ಪಕ್ಷಾತೀತವಾಗಿ ಫಲಾನುಭವಿ ಜಿಲ್ಲೆಯ ಎಲ್ಲ ಪ್ರತಿನಿಧಿಗಳಿಗೆ ಆಹ್ವಾನ ನೀಡಲಾಗಿದೆ. ಇದೊಂದು ಕುಡಿಯುವ ನೀರಿನ ಯೋಜನೆ, ಗುತ್ತಿಗೆದಾರರು ಸಾಕಷ್ಟು ಕಷ್ಟದ ಸನ್ನಿವೇಶ ಎದುರಿಸಿ ಯೋಜನೆ ಕಾರ್ಯಗತ ಮಾಡಿದ್ದಾರೆ. ಯೋಜನೆಗೆ ಸಹಕಾರ ನೀಡಿದ ಕೆಲ ಅಧಿಕಾರಿಗಳನ್ನೂ, ಜನರನ್ನು ಅಂದು ಸನ್ಮಾನ ಮಾಡಲಾಗುವುದು ಎಂದರು.
ಕೆಲವೆಡೆ ಅರಣ್ಯ ಇಲಾಖೆಯ ಅಡ್ಡಿ ಆಕ್ಷೇಪಗಳಿರುವುದರಿಂದ ಅಡಚಣೆ ಆಗಿದೆ. ಆದ್ದರಿಂದ ವಾಣಿ ವಿಲಾಸ ಸಾಗರಕ್ಕೆ ನೀರು ಹರಿಯುತ್ತಿದೆ. ಮುಂದಿನ ವರ್ಷ ಅರಸೀಕೆರೆ ಸೇರಿದಂತೆ ಏಳು ಜಿಲ್ಲೆಗಳಿಗೂ ನೀರು ಪೂರೈಕೆ ಮಾಡಲಾಗುವುದು ಎಂದು ಸಚಿವರು ಭರವಸೆ ನೀಡಿದರು.
ಈ ಯೋಜನೆಯಿಂದ ನೀರಿನ ಅಗತ್ಯತೆ ಇರುವ ಬಯಲು ಸೀಮೆಯ ಜಿಲ್ಲೆಯ ಜನರಿಗೆ ಅನುಕೂಲವಾಗಲಿದೆ. ಉಳಿದ ಕಾಮಗಾರಿಗಳನ್ನು ಅತಿ ತುರ್ತಾಗಿ ಮಾಡಿ ಮುಂದಿನ ವರ್ಷ ಏಳು ಜಿಲ್ಲೆಯ ಕೆರೆಗಳಿಗೆ ನೀರು ಹರಿಸುತ್ತೇವೆ ಎಂದರು.
ಸಂಸದ ಶ್ರೇಯಸ್ ಪಟೇಲ್, ಅರಸೀಕೆರೆ ಶಾಸಕ ಕೆ.ಎಂ.ಶಿವಲಿಂಗೇಗೌಡ, ಜಿಲ್ಲಾಧಿಕಾರಿ ಸಿ.ಸತ್ಯಭಾಮ, ಜಿ.ಪಂ. ಸಿಇಒ ಬಿ.ಆರ್.ಪೂರ್ಣಿಮಾ, ವಿಶ್ವೇಶ್ವರಯ್ಯ ಜಲ ನಿಗಮದ ಎಂಡಿ ಚಿಕ್ಕ ಸಿದ್ದಯ್ಯ, ಹಾಸನ, ಸಕಲೇಶಪುರ ಎಸಿಗಳಾದ ಮಾರುತಿ, ಡಾ.ಎಂ.ಎನ್.ಶ್ರುತಿ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಲಕ್ಷ್ಮಣ್ ಮೊದಲಾದವರಿದ್ದರು.