ಪ್ರತಿನಿಧಿ ವರದಿ ಚಿಕ್ಕಮಗಳೂರು
ಮುಖ್ಯಮಂತ್ರಿ ಸಿದ್ದರಾಮಯ್ಯ ಮಾ.3 ರಂದು ಚಿಕ್ಕಮಗಳೂರಿಗೆ ಆಗಮಿಸಲಿದ್ದು, ಅಂದು ಜಿಲ್ಲಾಡಳಿತ ಆಯೋಜಿಸಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕು ಸ್ಥಾಪನೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಇಂಧನ ಹಾಗೂ ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ. ಜಾರ್ಜ್ ತಿಳಿಸಿದರು.
ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ಶನಿವಾರ ಪೂರ್ವಭಾವಿ ಸಭೆ ನಡೆಸಿ ಮಾತನಾಡಿ, ಮಾ.3 ರಂದು ಜಿಲ್ಲಾ ಆಟದ ಮೈದಾನದಲ್ಲಿ ಹಮ್ಮಿಕೊಂಡಿರುವ ಬೃಹತ್ ಕಾರ್ಯಕ್ರಮದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕು ಸ್ಥಾಪನೆ ನೆರವೇರಿಸಲಿರುವ ಮುಖ್ಯಮಂತ್ರಿಗಳು ವಿವಿಧ ಇಲಾಖೆಗಳ ಫಲಾನುಭವಿಗಳಿಗೆ ಸವಲತ್ತು ವಿತರಣೆ ಮಾಡುವರು ಎಂದರು.
ಮುಖ್ಯ ಮಂತ್ರಿಯವರು ಜಿಲ್ಲೆಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ಜವಾಬ್ದಾರಿಯಿಂದ ಕರ್ತವ್ಯ ನಿರ್ವಹಿಸಬೇಕು. ಮುಖ್ಯ ವೇದಿಕೆ, ಆಸನ ವ್ಯವಸ್ಥೆ, ಪೊಲೀಸ್ ಬಂದೋಬಸ್ತ್ ಸೇರಿದಂತೆ ಕಾರ್ಯಕ್ರಮಕ್ಕೆ ಕೈಗೊಂಡಿರುವ ಕ್ರಮಗಳ ಕುರಿತು ಜಿಲ್ಲಾಧಿಕಾರಿಗಳಿಂದ ಮಾಹಿತಿ ಪಡೆದ ಸಚಿವರು, ಕಾರ್ಯಕ್ರಮದಲ್ಲಿ ಯಾವುದೇ ಲೋಪವಾಗದಂತೆ ಜಾಗ್ರತೆ ವಹಿಸಲು ಸೂಚಿಸಿದರು.
ಶಾಸಕರಾದ ಟಿ.ಡಿ.ರಾಜೇಗೌಡ, ಎಚ್.ಡಿ. ತಮ್ಮಯ್ಯ, ಜಿ.ಹೆಚ್. ಶ್ರೀನಿವಾಸ, ಕೆ.ಎಸ್. ಆನಂದ್, ಭದ್ರಾ ಕಾಡಾ ಅಧ್ಯಕ್ಷ ಡಾ. ಅಂಶುಮನ್, ಕರ್ನಾಟಕ ರಾಜ್ಯ ಕೃಷಿ ಉತ್ಪನ್ನ ಸಂಸ್ಕರಣಾ ಮತ್ತು ರಫ್ತು ನಿಗಮದ ಅಧ್ಯಕ್ಷ ಬಿ.ಹೆಚ್. ಹರೀಶ್, ಮಾಜಿ ವಿಧಾನ ಪರಿಷತ್ ಸದಸ್ಯೆ ಗಾಯತ್ರಿ ಶಾಂತೇಗೌಡ, ಜಿಲ್ಲಾಧಿಕಾರಿ ಸಿ.ಎನ್. ಮೀನಾ ನಾಗರಾಜ್ , ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಕ್ರಮ್ ಅಮಟೆ, ಜಿ.ಪಂ. ಸಿಇಒ ಡಾ.ಬಿ. ಗೋಪಾಲಕೃಷ್ಣ ಅಪರ ಜಿಲ್ಲಾಧಿಕಾರಿ ಕನಕರಡ್ಡಿ ನಾರಾಯಣರಡ್ಡಿ ಹಾಜರಿದ್ದರು.