ಮೈಸೂರು : ಮಹಿಳಾ ಹಾಗೂ ಮಕ್ಕಳ ದಸರಾ ಉಪ ಸಮಿತಿ ವತಿಯಿಂದ ಅ.18 ಮತ್ತು 19 ರಂದು ಜಗನ್ಮೋಹನ ಅರಮನೆಯಲ್ಲಿ ಮಕ್ಕಳ ದಸರಾ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಹಾಗೂ ಮಹಿಳಾ ಹಾಗೂ ಮಕ್ಕಳ ದಸರಾ ಉಪ ಸಮಿತಿಯ ಕಾರ್ಯದರ್ಶಿ ಎಚ್.ಕೆ. ಪಾಂಡು ತಿಳಿಸಿದರು.
ಅ.18ರ ಬೆಳಗ್ಗೆ 10.30ಕ್ಕೆ ಮಕ್ಕಳ ದಸರಾವನ್ನು ಶಿಕ್ಷಣ ಸಚಿವ ಮಧು ಬಂಗಾರಪ್ಪ ಉದ್ಘಾಟಿಸುವರು. ಶಾಸಕ ಕೆ. ಹರೀಶ್ ಗೌಡ ಅಧ್ಯಕ್ಷತೆ ವಹಿಸುವರು. ಸ್ಥಳೀಯ ಶಾಸಕರು, ಜನಪ್ರತಿನಿಧಿಗಳು, ಅಧಿಕಾರಿಗಳು ಭಾಗವಹಿಸುವರು ಎಂದು ಅವರು ಶನಿವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.
ಹಲವಾರು ಕಾರ್ಯಕ್ರಮಗಳ ಮೂಲಕ ಎರಡು ದಿನಗಳ ಕಾಲ ಶಾಲಾ ಮಕ್ಕಳಿಗೆ ವೇದಿಕೆಯನ್ನು ಕಲ್ಪಿಸಲಾಗುವುದು. ಶಾಲಾ ಮಕ್ಕಳಿಗಾಗಿ ಆಶುಭಾಷಣ ಸ್ಪರ್ಧೆ, ಪ್ರಬಂಧ ಸ್ಪರ್ಧೆ, ರಸಪ್ರಶ್ನೆ ಸ್ಪರ್ಧೆ, ವಿವಿಧ ವೇಷಭೂಷಣ ಸ್ಪರ್ಧೆ, ಸಾಂಸ್ಕೃತಿಕ ನೃತ್ಯ ಸ್ಪರ್ಧೆ, ಚಿತ್ರಕಲಾ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ. ಅಲ್ಲದೆ, ಖ್ಯಾತ ಕಲಾವಿದರಿಂದ ಸುಗಮ ಸಂಗೀತ ಕಾರ್ಯಕ್ರಮ, ಮಾತನಾಡುವ ಗೊಂಬೆ, ಶೈಕ್ಷಣಿಕ ನಾಟಕ ಪ್ರದರ್ಶನ, ಯೋಗ ನೃತ್ಯ ಜೊತೆಗೆ ದೇಸಿ ಆಟಗಳನ್ನು ಆಯೋಜಿಸಲಾಗಿದೆ ಎಂದು ಅವರು ವಿವರಿಸಿದರು.
ಶೈಕ್ಷಣಿಕ ವಸ್ತು ಪ್ರದರ್ಶನವನ್ನು ಹಮ್ಮಿಕೊಂಡಿದ್ದು, ಇದರಲ್ಲಿ ಬುಡಕಟ್ಟು ಸಂಸ್ಕೃತಿ ಮತ್ತು ಅರಣ್ಯ ಉತ್ಪನ್ನಗಳು, ಪರಿಸರ ಸಂರಕ್ಷಣೆ, ಮೈಸೂರಿನ ಪ್ರೇಕ್ಷಣೀಯ ಸ್ಥಳಗಳು, ಆರೋಗ್ಯ ಮತ್ತು ಪೌಷ್ಟಿಕಾಂಶ, ವಿಜ್ಞಾನ ಮತ್ತು ತಂತ್ರಜ್ಞಾನ ಮತ್ತು ವಿಶೇಷವಾಗಿ ಚಂದ್ರಯಾನ ಹಾಗೂ ಆದಿತ್ಯಯಾನ ಕುರಿತಾದ ವಿಶೇಷ ಪ್ರದರ್ಶನ, ಶಿಕ್ಷಣದಲ್ಲಿ ರಂಗ ಕಲೆ, ಮೈಸೂರು ದಸರಾ ಪರಂಪರೆಯ ವಿವಿಧ ಪ್ರದರ್ಶನ ಆಯೋಜಿಸಲಾಗಿದೆ ಎಂದರು.
ಮಕ್ಕಳ ಭಾಗವಹಿಸುವಿಕೆಯನ್ನು ಉತ್ತೇಜಿಸಲು ಸಂಗೀತ ಹಾಗೂ ಕ್ರೀಡಾ ವಿಭಾಗದಲ್ಲಿ ಹೆಸರು ಮಾಡಿದ ಬೆಸ್ಟ್ ಎಂಟರ್ಟೈನರ್ ಸರಿಗಮಪ ಸೀಸನ್ 19ರ ಸ್ಪರ್ಧಿ ದಿಯಾ ಹೆಗಡೆ ಮತ್ತು ಪ್ರಗತಿ ಬಡಗೇರ್, ರಾಜ್ಯಮಟ್ಟದ ಸೋಲೊ ಡ್ಯಾನ್ಸ್ ವಿಜೇತ ಜಿ.ಎಂ. ಗಂಗಾಧರ್, ಖೋ- ಖೋ ರಾಷ್ಟ್ರೀಯ ಕ್ರೀಡಾಪಟು ಮಾನಸ ಅವರು ಮಕ್ಕಳ ದಸರಾ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಅವರು ತಿಳಿಸಿದರು.