ಪ್ರತಿನಿಧಿ ವರದಿ ಚಿಕ್ಕಬಳ್ಳಾಪುರ
ಸುಸ್ಥಿರ ಉತ್ತಮ ಸಮಾಜ ನಿರ್ಮಾಣದಲ್ಲಿ ಮಕ್ಕಳ ಏಳಿಗೆಯೂ ಮುಖ್ಯವಾಗಿದ್ದು, ಮಕ್ಕಳ ಉತ್ತಮ ಬದುಕು ಮತ್ತು ಭವಿಷ್ಯ ನಿರ್ಮಾಣ ಪ್ರತಿಯೊಬ್ಬರ ಜವಾಬ್ದಾರಿಯೂ ಹೌದು, ಸಮಾಜದ ಜವಾಬ್ದಾರಿಯೂ ಹೌದು ಎಂದು ನ್ಯಾ.ಕೆ.ಬಿ.ಶಿವಪ್ರಸಾದ್ ತಿಳಿಸಿದರು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕಾರ್ಮಿಕ ಇಲಾಖೆ, ಶಾಲಾ ಶಿಕ್ಷಣ ಇಲಾಖೆ. ಜಿಲ್ಲಾ ವಕೀಲರ ಸಂಘ ಹಾಗೂ ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸಂಘದ ಸಹಯೋಗದಲ್ಲಿ ಬುಧವಾರ ಅಂಬೇಡ್ಕರ್ ಭವನದಲ್ಲಿ ಹಮ್ಮಿಕೊಂಡಿದ್ದ ವಿಶ್ವ ಬಾಲ ಕಾರ್ಮಿಕ ಪದ್ದತಿ ವಿರೋಧಿ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಬಾಲಕಾರ್ಮಿಕ ಪದ್ದತಿ ಸಮಾಜಕ್ಕೆ ಅಂಟಿದ ಶಾಪ. ಇದೊಂದು ಸಾಮಾಜಿಕ ಪಿಡುಗು,ಮಕ್ಕಳ ಅಮೂಲ್ಯವಾದ ಬಾಲ್ಯವನ್ನು ಕಸಿಯುತ್ತಿದೆ ಎಂದರು.
ಬಾಲ ಕಾರ್ಮಿಕ ಪದ್ದತಿಯನ್ನು ಹೋಗಲಾಡಿಸುವುದು ಸಮಾಜದ ಹೊಣೆಗಾರಿಕೆಯಾಗಿದ್ದು, ಈ ಬಗ್ಗೆ ಪ್ರತಿಯೊಬ್ಬರೂ ಗಂಭೀರವಾಗಿ ಚಿಂತನೆ ನಡೆಸುವ ಅಗತ್ಯವಿದೆ. ಬಾಲ ಕಾರ್ಮಿಕತೆ ನಿರ್ಮೂಲನೆಗೆ ಸರ್ಕಾರದ ವಿವಿಧ ಇಲಾಖೆಗಳೊಂದಿಗೆ ಸ್ವಯಂ ಸೇವಾ ಸಂಸ್ಥೆಗಳು, ಸಾರ್ವಜನಿಕರು ಕೈ ಜೋಡಿಸಬೇಕು ಎಂದು ಮನವಿ ಮಾಡಿದರು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯದೀಶ ಹೆಚ್.ಕೆ.ಉಮೇಶ್ ಮಾತನಾಡಿ, ಬಾಲ ಕಾರ್ಮಿಕ ಪದ್ದತಿ ಶೂನ್ಯಕ್ಕೆ ಇಳಿಯಬೇಕು. 14 ವಯಸ್ಸಿನೊಳಗಿನ ಮಕ್ಕಳು ಶಾಲೆಯಲ್ಲಿರಬೇಕೇ ಹೊರತು ದುಡಿಮೆಯಲ್ಲಿ ಅಲ್ಲ ಎಂದು ತಿಳಿದಿದರು.
ಈ ಪದ್ದತಿ ನಿರ್ಮೂಲನೆಗಾಗಿ ಸರ್ಕಾರ ಹಲವು ಕಾನೂನುಗಳನ್ನು ಜಾರಿ ಮಾಡಿದ್ದು, ಹಲವರು ಕಾನೂನುಗಳನ್ನು ಉಲ್ಲಂಘಿಸಿ ಮಕ್ಕಳನ್ನು ದುಡಿಮೆಗೆ ನೇಮಿಸಿಕೊಳ್ಳುತ್ತಾರೆ. ಇದರಿಂದ ಮಕ್ಕಳ ದೈಹಿಕ ಮತ್ತು ಮಾನಸಿಕ ಬೆಳವಣಿಗೆ ಕುಂಠಿತವಾಗುತ್ತದೆ. ಬಾಲಕಾರ್ಮಿಕರನ್ನು ದುಡಿಸಿಕೊಳ್ಳುವುದು ಶಿಕ್ಷಾರ್ಹ ಅಪರಾಧವಾಗಿದ್ದು, ಬಾಲ ಕಾರ್ಮಿಕರನ್ನು ನೇಮಕ ಮಾಡಿಕೊಳ್ಳುವವರ ವಿರುದ್ಧ ಪ್ರಕರಣ ದಾಖಲಿಸಿ 20 ರಿಂದ 50 ಸಾವಿರ ರೂ.ವರೆಗೆ ದಂಡ ವಿಧಿಸಲು ಹಾಗೂ ಎರಡು ವರ್ಷದವರೆಗೆ ಕಾರಾಗೃಹ ಶಿಕ್ಷೆ ವಿಧಿಸಲು ಕಾನೂನಿನಲ್ಲಿ ಅವಕಾಶವಿದೆ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಮಾತನಾಡಿ, ಪೋಷಕರ ಬಡತನ, ಅರಿವಿನ ಕೊರತೆ, ಅನಕ್ಷರತೆ ಮತ್ತಿತರ ಕಾರಣಗಳಿಂದಾಗಿ ಬಾಲಕಾರ್ಮಿಕ ಪದ್ದತಿ ಸಮಾಜದಲ್ಲಿ ಇನ್ನೂ ಜೀವಂತವಾಗಿದೆ ಎಂದು ತಿಳಿಸಿದರು.
ಬಾಲಕಾರ್ಮಿಕ ಪದ್ದತಿಯ ನಿರ್ಮೂಲನೆಗಾಗಿ ಸರ್ಕಾರಗಳು ಹಲವು ಯೋಜನೆ, ಕಾರ್ಯಕ್ರಮಗಳ ಜತೆಗೆ ಕಾನೂನುಗಳನ್ನು ಜಾರಿ ಮಾಡಿವೆ. ಕಾರ್ಮಿಕ ಇಲಾಖೆ, ಪೊಲೀಸ್ ಇಲಾಖೆ ಸೇರಿದಂತೆ ಹಲವು ಇಲಾಖೆಗಳ ಸಹಯೋಗದಲ್ಲಿ ಬಾಲ ಕಾರ್ಮಿಕ ಪದ್ದತಿ ನಿರ್ಮೂಲನೆ ಹಾಗೂ ಬಾಲ್ಯ ವಿವಾಹಗಳನ್ನು ತಡೆಯಲು ಜಿಲ್ಲಾಡಳಿತ ಕಾರ್ಯೋನ್ಮುಖವಾಗಿದೆ. ಜಿಲ್ಲೆಯ ಯಾವುದೇ ಭಾಗದಲ್ಲಿ ಬಾಲ ಕಾರ್ಮಿಕರನ್ನು ನೇಮಿಸಿಕೊಂಡಿರುವುದು ಹಾಗೂ ಬಾಲ್ಯ ವಿವಾಹಗಳು ನಡೆಯುತ್ತಿರುವುದು ಕಂಡು ಬಂದಲ್ಲಿ ಮಕ್ಕಳ ಸಹಾಯವಾಣಿ ಸಂಖ್ಯೆ 1098 ಅಥವಾ 112 ಕ್ಕೆ ಕರೆ ಮಾಡಬೇಕು ಅಥವಾ ಸಮೀಪದ ಪೊಲೀಸ್ ಠಾಣೆಗೆ ಮಾಹಿತಿ ನೀಡಿ ಸಾರ್ವಜನಿಕರು ಸಾಮಾಜಿಕ ಹೊಣೆಗಾರಿಕೆಯನ್ನು ನಿರ್ವಹಿಸಬೇಕು. ಬಾಲ ಕಾರ್ಮಿಕ ಪದ್ದತಿ ಮತ್ತು ಬಾಲ್ಯ ವಿವಾಹಗಳೆರಡನ್ನೂ ತಡೆಯಲು ಜಿಲ್ಲಾಡಳಿತ ಬದ್ಧವಾಗಿದೆ ಎಂದರು.
ಬಿಬಿಎ ಸ್ವಯಂಸೇವಾ ಸಂಸ್ಥೆಯ ರಾಜ್ಯ ಸಂಯೋಜಕ ಬಿನು ವರ್ಗಿಸ್ ಮಾತನಾಡಿ, ದೇಶಾದ್ಯಂತ ಬಾಲ ಕಾರ್ಮಿಕ ಪದ್ಧತಿಯನ್ನು ಸಂಪೂರ್ಣವಾಗಿ ನಿರ್ಮೂಲನೆಗೊಳಿಸಿ ಎಲ್ಲ ಮಕ್ಕಳು ಉತ್ತಮ ಶಿಕ್ಷಣ ಪಡೆಯುವಂತೆ ಮಾಡಬೇಕಾದ ವ್ಯವಸ್ಥೆಯನ್ನು ರೂಪಿಸುವ ಅರಿವಿಗಾಗಿ ಬಾಲ ಕಾರ್ಮಿಕ ದಿನಾಚರಣೆಯನ್ನು ಆಚರಿಸಲಾಗುತ್ತಿದೆ. ಬಾಲ ಕಾರ್ಮಿಕರ ಕಾಯ್ದೆಯ ಅನ್ವಯ ಎಲ್ಲ ಮಕ್ಕಳು ಬದುಕುವ ಹಕ್ಕು, ಸಂರಕ್ಷಣೆಯ ಹಕ್ಕು, ಅಭಿವೃದ್ಧಿ ಹಕ್ಕು, ಭಾಗವಹಿಸುವ ಹಕ್ಕುಗಳನ್ನು ಹೊಂದಿರುತ್ತಾರೆ ಈ ಹಕ್ಕುಗಳಿಗೆ ಯಾವುದೇ ವ್ಯಕ್ತಿಗಳು ಭಂಗ ತರುವಂತಿಲ್ಲ ಎಂದರು.
ಕನ್ನಡ ಉಪನ್ಯಾಸಕ ಹಾಗೂ ಪತ್ರಕರ್ತ ಎನ್. ಚಂದ್ರಶೇಖರ್ ಮಾತನಾಡಿ ಭಾರತ ದೇಶವು ಹಿಂದುಳಿಯಲು ಹಲವು ಅಂಶಗಳು ಕಾರಣವಾದರೂ ಅದರಲ್ಲಿ ಬಾಲ ಕಾರ್ಮಿಕ ಪದ್ದತಿಯು ಸಹ ಪ್ರಮುಖ ತೊಡಕಾಗಿದೆ. ಲಿಂಗ ತಾರತಮ್ಯ, ಜಾತಿ ಪದ್ಧತಿ, ಅನಕ್ಷರತೆ , ಬಾಲ ಕಾರ್ಮಿಕ ಪದ್ಧತಿ, ಮಹಿಳೆಯರ ಶೋಷಣೆ, ಬಾಲ್ಯ ವಿವಾಹ ಸಮಸ್ಯೆಗಳನ್ನುಸಂಪೂರ್ಣವಾಗಿ ತಡೆಯುವುದರಿಂದ ಭಾರತ ಅಭಿವೃದ್ಧಿ ಹೊಂದಿದ ರಾಷ್ಟ್ರವಾಗಬಹುದು. ಬಾಲ ಕಾರ್ಮಿಕ ಪದ್ದತಿ ಅನ್ನೋದು ಸಮಾಜಕ್ಕೆ ಒಂದು ದೊಡ್ಡ ಶಾಪವಾಗಿದೆ, ಇದರ ವಿರುದ್ಧ ಹೋರಾಟ ಮಾಡಿ ಮುಕ್ತಗೊಳಿಸಲು ಎಲ್ಲರು ಸಹಕರಿಸಬೇಕು ಎಂದು ಮನವಿ ಮಾಡಿದರು.
ಸಂದರ್ಭದಲ್ಲಿ ಬಾಲ ಕಾರ್ಮಿಕ ಪದ್ದತಿ ವಿರೋಧಿ ದಿನದ ಪ್ರತಿಜ್ಞಾ ವಿಧಿಯನ್ನು ಜಿಲ್ಲಾ ಕಾರ್ಮಿಕ ಅಧಿಕಾರಿ ವರಲಕ್ಷ್ಮಿ ಅವರು ಬೋಧಿಸಿದರು. ಕಾರ್ಮಿಕ ನಿರೀಕ್ಷಕರಾದ ಸತೀಶ್, ಮಂಜುಳಾ, ಕಲಾವಾಣಿ, ವಿಜಯಲಕ್ಷ್ಮಿ, ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಮಂಜುಳಾ, ಸಿಡಿಪಿಒ ಗಂಗಾಧರ್, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಶ್ರೀನಿವಾಸ್, ವಕೀಲರಾದ ಮುರುಳಿಮೋಹನ್, ಮಂಜುನಾಥರೆಡ್ಡಿ, ಸೌಜನ್ಯ ಗಾಂಧಿ, ಕಾರ್ಮಿಕ ಇಲಾಖೆಯ ಜಿಲ್ಲಾ ಯೋಜನಾಧಿಕಾರಿ ರಮೇಶ್ ಮತ್ತಿತರರು ಉಪಸ್ಥಿತರಿದ್ದರು.