ಬೆಂಗಳೂರಿನ ಕುಂದಲಹಳ್ಳಿಯ ರಾಮೇಶ್ವರಂ ಕೆಫೆಯಲ್ಲಿ ನಡೆದ ಬಾಂಬ್ ಸ್ಫೋಟ ಪ್ರಕರಣದ ಗಾಯಾಳುಗಳಿರುವ ಬ್ರೂಕ್ ಫೀಲ್ಡ್ ಆಸ್ಪತ್ರೆ ಹಾಗೂ ವೈದೇಹಿ ಆಸ್ಪತ್ರೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದ್ದಾರೆ. ಗಾಯಾಳುಗಳ ಆರೋಗ್ಯದ ಬಗ್ಗೆ ವೈದ್ಯರಿಂದ ಮಾಹಿತಿ ಪಡೆದಿದ್ದಾರೆ. ಸಿಎಂ ಆಗಮನ ಹಿನ್ನೆಲೆ ಆಸ್ಪತ್ರೆಗಳ ಮುಂದೆ ಪೊಲೀಸ್ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ. ಗಾಯಾಳುಗಳಿಗೆ ಚಿಕಿತ್ಸೆ ನೀಡ್ತಿರೋ ವೈದ್ಯ ರವಿಬಾಬು ರಿಪೋರ್ಟ್ ಕೈಲಿಡಿದು ಸಿಎಂಗೆ ಮಾಹಿತಿ ನೀಡಿದ್ದಾರೆ. ಇನ್ನು ಗಾಯಾಳುಗಳ ಆರೋಗ್ಯ ವಿಚಾರಿಸಿದ ಸಿಎಂ ಬ್ರೂಕ್ ಫೀಲ್ಡ್ ಆಸ್ಪತ್ರೆ ಬಳಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು. ಇನ್ನು ಎರಡು ದಿನದಲ್ಲಿ ಆರೋಪಿ ಪತ್ತೆ ಹಚ್ಚಿ ಬಂಧಿಸುತ್ತೇವೆ. ಆರೋಪಿ ಬಂಧನಕ್ಕೆ ವಿಶೇಷ ಪೊಲೀಸ್ ತಂಡ ರಚಿಸಲಾಗಿದೆ. ತನಿಖೆಯಲ್ಲಿ ಏಕೆ, ಯಾರು ಮಾಡಿದ್ದಾರೆ ಎಂದು ಗೊತ್ತಾಗಲಿದೆ. ಕುಕ್ಕರ್ ಸ್ಫೋಟ ಪ್ರಕರಣ, ಈ ಕೇಸ್ಗೂ ಸಾಮ್ಯತೆ ಇದೆಯಾ ಎಂದು ತನಿಖೆ ನಡೆಯುತ್ತಿದೆ ಎಂದು ತಿಳಿಸಿದರು.