ಬೆಂಗಳೂರು, ಜ.11: ಶಾಸಕರು ಹಾಗೂ ಪಕ್ಷದ ಮುಖಂಡರಿಗೆ ಮಾತ್ರ ಮಣೆ ಹಾಕಲಾಗುತ್ತಿದೆ ಎಂಬ ಕಾರ್ಯಕರ್ತರ ವ್ಯಾಪಕ ಆಕ್ರೋಶವನ್ನು ಒಂದೇ ನಡೆಯಿಂದ ಶಮನಗೊಳಿಸಲು ಮುಂದಾಗಿರುವ ಕಾಂಗ್ರೆಸ್ ನಾಯಕತ್ವ, ಮಹತ್ವದ ಗ್ಯಾರಂಟಿ ಯೋಜನೆಗಳ ಜಾರಿಗೆ ಹಾಗೂ ವಿವಿಧ ಉದ್ದೇಶಗಳಿಗೆ ಸರ್ಕಾರದ ವಿವಿಧ ಹಂತಗಳಲ್ಲಿ ಬರೋಬ್ಬರಿ 5 ಸಾವಿರ ಹುದ್ದೆಗಳಿಗೆ ಪಕ್ಷದ ಕಾರ್ಯಕರ್ತರನ್ನು ನೇಮಿಸಿಕೊಳ್ಳುವ ಅಭಯ ನೀಡಿದೆ. ಈ ನೇಮಕ ಪ್ರಕ್ರಿಯೆ ಈ ಮಾಸಾಂತ್ಯದ ವೇಳೆಗೆ ಪೂರ್ಣಗೊಳಿಸುವ ಸ್ವಯಂ ಗಡುವು ಸಹ ವಿಧಿಸಿಕೊಂಡಿದೆ.
ವಿಶೇಷವೆಂದರೇ ಕಾರ್ಯಕರ್ತರಿಗೆ ಸಂಪುಟ ದರ್ಜೆಯ ಸ್ಥಾನ ಮಾನ ದೊರೆಯುವಂತೆಯೂ ಮಾಡಲು ಹೊಸ ಸಮಿತಿ ಸೃಷ್ಟಿಸಲು ಮುಂದಾಗಿದೆ. ಕಾಂಗ್ರೆಸ್ನ ಟ್ರಂಪ್ ಕಾರ್ಡ್ ಎನಿಸಿರುವ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಎಂಬ ಹೊಸ ವ್ಯವಸ್ಥೆಯನ್ನು ರಾಜ್ಯ, ಜಿಲ್ಲಾ ಹಾಗೂ ವಿಧಾನಸಭಾವಾರು ಸಮಿತಿ ರಚನೆ ಮೂಲಕ ಸೃಷ್ಟಿಸಲು ಮುಂದಾಗಿದ್ದು, ಈ ಪೈಕಿ ರಾಜ್ಯ ಮಟ್ಟದ ಸಮಿತಿ ಅಧ್ಯಕ್ಷರಿಗೆ ಸಂಪುಟ ದರ್ಜೆ ಸ್ಥಾನಮಾನ ದಯಪಾಲಿಸುವ ಭರವಸೆ ನೀಡಿದೆ.
ಲೋಕಸಭಾ ಚುನಾವಣೆ ಸಿದ್ಧತೆ ಹಿನ್ನೆಲೆಯಲ್ಲಿ ರಾಜ್ಯ ಉಸ್ತುವಾರಿ ರಣದೀಪಸಿಂಗ್ ಸುರ್ಜೇವಾಲ ನೇತೃತ್ವದಲ್ಲಿ ಕೆಪಿಸಿಸಿ ಕಚೇರಿಯ ಇಂದಿರಾಭವನದಲ್ಲಿ ಬುಧವಾರ ನಡೆದ ಸಚಿವರು, ಶಾಸಕರು ಹಾಗೂ ಪಕ್ಷದ ಪ್ರಮುಖರ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.
ಸಭೆಯ ನಂತರ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ರಾಜ್ಯ, ಜಿಲ್ಲಾ ಹಾಗೂ ವಿಧಾನಸಭೆ ಮಟ್ಟದಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಗಳನ್ನು ರಚಿಸಲಾಗುವುದು. ರಾಜ್ಯಮಟ್ಟದಲ್ಲಿ ಒಬ್ಬರು ಅಧ್ಯಕ್ಷರು ಹಾಗೂ ಐದು ಜನ ಉಪಾಧ್ಯಕ್ಷರು ಇರಲಿದ್ದಾರೆ. ಅಧ್ಯಕ್ಷರಾದವರಿಗೆ ಸಂಪುಟ ದರ್ಜೆ ಸ್ಥಾನಮಾನ ಹಾಗೂ ಉಪಾಧ್ಯಕ್ಷರಿಗೆ ರಾಜ್ಯ ಸಚಿವ ಸ್ಥಾನ ನೀಡಲಾಗುವುದು. ಇವರೆ ಜತೆಗೆ 31 ಮಂದಿ ಕಾಂಗ್ರೆಸ್ ಕಾರ್ಯಕರ್ತರನ್ನು ಸದಸ್ಯರನ್ನಾಗಿ ನೇಮಿಸಲಾಗುವುದು ಎಂದು ಘೋಷಿಸಿದರು.
ಇನ್ನು 31 ಜಿಲ್ಲಾ ಮಟ್ಟದ ಸಮಿತಿಗಳಲ್ಲಿ ಒಬ್ಬ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರು ಹಾಗೂ 21 ಮಂದಿ ಸದಸ್ಯರು ಇರಲಿದ್ದಾರೆ. ಅವರಿಗೆ ಕಚೇರಿ ವ್ಯವಸ್ಥೆ ಹಾಗೂ ಗೌರವ ಧನ ನೀಡುವ ವ್ಯವಸ್ಥೆ ಆಗಲಿದೆ. ಅಧ್ಯಕ್ಷರಿಗೆ ಪ್ರತಿ ತಿಂಗಳು 50 ಸಾವಿರ ರು. ಗೌರವಧನ ನೀಡಲಾಗುವುದು.
224 ಕ್ಷೇತ್ರಗಳಲ್ಲಿ ವಿಧಾನಸಭಾ ಮಟ್ಟದ ಸಮಿತಿ ರಚಿಸಿ ಅಧ್ಯಕ್ಷರು ಹಾಗೂ 11 ಸದಸ್ಯರನ್ನು ನೇಮಿಸಲಾಗುವುದು. ಅಧ್ಯಕ್ಷರಿಗೆ 20-25 ಸಾವಿರ ರು. ಗೌರವ ಧನ ನಿಗದಿ ಮಾಡಲಾಗುವುದು. ಇನ್ನು ಸಮಿತಿಗಳ ಸದಸ್ಯರಿಗೆ ಸಭೆ ಹಾಜರಾತಿ ಭತ್ಯೆ ಮಾತ್ರ ನೀಡಲಾಗುವುದು. ಇದನ್ನು ರಾಜ್ಯ ಸರ್ಕಾರದ ಖಜಾನೆಯಿಂದ ಭರಿಸಲಾಗುವುದು ಎಂದು ಮಾಹಿತಿ ನೀಡಿದರು.