ಅಗತ್ಯ ಸಹಕಾರಕ್ಕೆ ಎಡಿಸಿ ಗೀತಾ ಹುಡೇದ ಮನವಿ ।
8 ವಿಧಾನಸಭಾ ಕ್ಷೇತ್ರಗಳಿಗೆ ಒಟ್ಟು 112 ಮತ ಎಣಿಕೆ ಟೇಬಲ್ಗಳನ್ನು ಸ್ಥಾಪಿಸನೆ
। ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ 14 ಟೇಬಲ್ಗಳು
ಪ್ರತಿನಿಧಿ ವರದಿ ಚಾಮರಾಜನಗರ
ಲೋಕಸಭಾ ಚುನಾವಣೆಯ ಮತ ಎಣಿಕೆಯು ನಗರದಲ್ಲಿ ಜೂ.4ರಂದು ನಡೆಯಲಿದ್ದು, ಮತ ಎಣಿಕೆ ಕಾರ್ಯವನ್ನು ಯಶಸ್ವಿಯಾಗಿ ನಡೆಸಲು ಅಗತ್ಯ ಸಹಕಾರ ನೀಡುವಂತೆ 22-ಚಾಮರಾಜನಗರ ಲೋಕಸಭಾ ಕ್ಷೇತ್ರದ ಸಹಾಯಕ ಚುನಾವಣಾಧಿಕಾರಿ ಹಾಗೂ ಎಡಿಸಿ ಗೀತಾ ಹುಡೇದ ಮನವಿ ಮಾಡಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಲೋಕಸಭಾ ಸಾರ್ವತ್ರಿಕ ಚುನಾವಣೆ-2024ರ ಸಂಬಂಧ ಮತ ಎಣಿಕೆ ಕಾರ್ಯದ ಪ್ರಕ್ರಿಯೆಗಳ ಬಗ್ಗೆ ಚುನಾವಣೆಯಲ್ಲಿ ಸ್ಪರ್ಧಿಸಿರುವ ಅಭ್ಯರ್ಥಿಗಳಿಗೆ ಮಾಹಿತಿ ನೀಡುವ ಸಲುವಾಗಿ ವಿವಿಧ ರಾಜಕೀಯ ಪಕ್ಷಗಳ ಅಭ್ಯರ್ಥಿಗಳು, ಪ್ರತಿನಿಧಿಗಳೊಂದಿಗೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಲೋಕಸಭಾ ಚುನಾವಣೆಯ ಸಂಬಂಧ ಮತ ಎಣಿಕೆ ಕಾರ್ಯವು ಜೂ.4ರಂದು ಬೆಳಗ್ಗೆ 8 ಗಂಟೆಗೆ ನಗರದ ನಂಜನಗೂಡು ರಸ್ತೆಯಲ್ಲಿರುವ ಬೇಡರಪುರದ ಸರ್ಕಾರಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ಆರಂಭವಾಗಲಿದೆ. ಮತ ಎಣಿಕೆ ಕೇಂದ್ರಕ್ಕೆ ಅಭ್ಯರ್ಥಿಗಳು, ಏಜೆಂಟರು ಕಡ್ಡಾಯವಾಗಿ ಚುನಾವಣಾಧಿಕಾರಿಗಳು ನೀಡಿರುವ ಗುರುತಿನ ಚೀಟಿಯನ್ನು ಧರಿಸಿ ಆಗಮಿಸಬೇಕು. ಮತ ಎಣಿಕೆ ಕೇಂದ್ರದಲ್ಲಿ ಯಾವುದೇ ಗೊಂದಲಗಳಿಗೆ ಆಸ್ಪದವಾಗದಂತೆ ಎಣಿಕೆ ಕಾರ್ಯದ ಸಿದ್ದತಾ ಪ್ರಕ್ರಿಯೆಗಳನ್ನು ವ್ಯವಸ್ಥಿತವಾಗಿ ನಿರ್ವಹಣೆ ಮಾಡಲಾಗಿದೆ ಎಂದರು.
ಚಾ.ನಗರ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ 8 ವಿಧಾನಸಭಾ ಕ್ಷೇತ್ರಗಳಿಗೆ ಸಂಬಂಧಿಸಿದಂತೆ ಸರ್ಕಾರಿ ಎಂಜಿನಿಯರಿಂಗ್ ಕಾಲೇಜಿನ ಸಿವಿಲ್ ಬ್ಲಾಕ್ನ ನೆಲಮಹಡಿಯಲ್ಲಿ ಎಚ್.ಡಿ.ಕೋಟೆ, ನಂಜನಗೂಡು, ವರುಣ ಹಾಗೂ ಟಿ.ನರಸೀಪುರ ಕ್ಷೇತ್ರಗಳ ಮತ ಎಣಿಕೆ ನಡೆಯಲಿದ್ದು, ಹನೂರು, ಕೊಳ್ಳೇಗಾಲ, ಚಾ.ನಗರ ಹಾಗೂ ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರಗಳ ಮತ ಎಣಿಕೆಯು ಎಂಜಿನಿಯರಿಂಗ್ ಕಾಲೇಜಿನ ಮೆಕಾನಿಕಲ್ ಬ್ಲಾಕ್ನ ಮೊದಲನೇ ಮಹಡಿಯಲ್ಲಿ ನಡೆಯಲಿದೆ. ಅಲ್ಲದೆ ಮೆಕಾನಿಕಲ್ ಬ್ಲಾಕ್ನ ನೆಲಮಹಡಿಯಲ್ಲಿ ತೆರೆಯಲಾಗಿರುವ ಚುನಾವಣಾಧಿಕಾರಿಗಳ ಕಚೇರಿಯಲ್ಲಿ ಅಂಚೆ ಮತಪತ್ರಗಳ ಎಣಿಕೆ ನಡೆಸಲಾಗುವುದು ಎಂದು ತಿಳಿಸಿದರು.
ಮತ ಎಣಿಕೆ ಕೇಂದ್ರದ ಕೊಠಡಿಯಲ್ಲಿ ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ 14 ಟೇಬಲ್ಗಳಂತೆ, 8 ವಿಧಾನಸಭಾ ಕ್ಷೇತ್ರಗಳಿಗೆ ಒಟ್ಟು 112 ಮತ ಎಣಿಕೆ ಟೇಬಲ್ಗಳನ್ನು ಸ್ಥಾಪಿಸಲಾಗಿದೆ. ಪ್ರತಿ ಮತಎಣಿಕೆ ಕೇಂದ್ರದಲ್ಲಿ ಆಯಾ ವಿಧಾನಸಭಾ ಕ್ಷೇತ್ರದ ಸಹಾಯಕ ಚುನಾವಣಾಧಿಕಾರಿ (ಎ.ಆರ್.ಒ) ಸಮ್ಮುಖದಲ್ಲಿ ಮತ ಎಣಿಕೆಯು ನಡೆಯಲಿದೆ. ಚುನಾವಣಾಧಿಕಾರಿಗಳ ಸಮಕ್ಷಮದಲ್ಲಿ ನಡೆಯಲಿರುವ ಅಂಚೆ ಮತಪತ್ರಗಳ ಎಣಿಕೆಗಾಗಿ 8 ಮತಎಣಿಕೆ ಟೇಬಲ್ಗಳ ವ್ಯವಸ್ಥೆ ಮಾಡಲಾಗಿದೆ. ಸೇವಾ ಮತದಾರರು ಮತದಾನ ಮಾಡಿ ಕಳುಹಿಸಿರುವ ಮತಪತ್ರಗಳ ಎಣಿಕೆಯನ್ನು ಇ.ಟಿ.ಪಿ.ಬಿ.ಎಸ್ ತಂತ್ರಾಂಶದಲ್ಲಿ ನಡೆಸಲು 2 ಟೇಬಲ್ಗಳನ್ನು ಸ್ಥಾಪಿಸಲಾಗಿದೆ ಎಂದು ತಿಳಿಸಿದರು.
ಅಂಚೆ ಮತಪತ್ರಗಳಿಗೆ ಸಂಬಂಧಿಸಿದಂತೆ 1372 ಮತದಾರರು ಮನೆಯಲ್ಲಿಯೆ ಮತದಾನ ಮಾಡಿದ್ದಾರೆ. 2382 ಚುನಾವಣಾ ಕರ್ತವ್ಯ ಅಧಿಕಾರಿ ಹಾಗೂ ಸಿಬ್ಬಂದಿ, 458 ಅತ್ಯಗತ್ಯ ಕರ್ತವ್ಯ ನಿರತ ಸಿಬ್ಬಂದಿ ಹಾಗೂ 192 ಸೇವಾ ಮತದಾರರು ಸೇರಿದಂತೆ ಒಟ್ಟು 4404 ಅಂಚೆ ಮತಪತ್ರಗಳ ಎಣಿಕೆ ಕಾರ್ಯವು ಸಹ ನಡೆಯಲಿದೆ. ಅಲ್ಲದೆ ಸೇವಾ ಮತದಾರರು ಮತದಾನ ಮಾಡಿ ಕಳುಹಿಸುವ ಅಂಚೆ ಮತಪತ್ರಗಳನ್ನು ಮತ ಎಣಿಕೆ ಕಾರ್ಯ ನಡೆಯುವ ಜೂ.4ರ ಬೆಳಗ್ಗೆ 7.50 ಗಂಟೆಯವರೆಗೂ ಸ್ವೀಕರಿಸಲಾಗುವುದು. ನಂತರ ಬರುವ ಸೇವಾ ಮತದಾರರ ಅಂಚೆ ಮತಪತ್ರವನ್ನು ತಿರಸ್ಕರಿಸಲಾಗುವುದು ಎಂದು ಹೇಳಿದರು.
ಚಾ.ನಗರ (ಪ.ಜಾ) ಲೋಕಸಭಾ ಕ್ಷೇತ್ರಕ್ಕೆ ಏ.26ರಂದು ನಡೆದ ಮತದಾನ ಹಾಗೂ ಏ.29ರಂದು ಇಂಡಿಗನತ್ತ ಗ್ರಾಮದಲ್ಲಿ ನಡೆದ ಮರು ಮತದಾನವು ಸೇರಿದಂತೆ ಕ್ಷೇತ್ರವ್ಯಾಪ್ತಿಯಲ್ಲಿ ಒಟ್ಟು ಶೇ.76.82ರಷ್ಟು ಮತದಾನವಾಗಿದೆ. ಕ್ಷೇತ್ರದಲ್ಲಿ 878702 ಪುರುಷರು, 899501 ಮಹಿಳೆಯರು ಹಾಗೂ 107 ಇತರೆ ಸೇರಿದಂತೆ ಒಟ್ಟು 1778310 ಮತದಾರರಿದ್ದು, ಈ ಪೈಕಿ 682993 ಪುರುಷರು, 682991 ಮಹಿಳೆಯರು ಹಾಗೂ 31 ಇತರೆ ಮತದಾರರು ಸೇರಿದಂತೆ ಒಟ್ಟು 1366015 ಮಂದಿ ಮತ ಚಲಾಯಿಸಿದ್ದಾರೆ. ಅತಿ ಹೆಚ್ಚು ಮತದಾನವು (ಶೇ.82.35) ಜಿಲ್ಲೆಯ ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ನಡೆದಿದೆ ಎಂದು ತಿಳಿಸಿದರು.
ಜಿಲ್ಲಾಧಿಕಾರಿ ಕಚೇರಿಯ ಚುನಾವಣಾ ತಹಸೀಲ್ದಾರ್ ಕೀರ್ತನ, ಚುನಾವಣಾ ಶಿರಸ್ತೇದಾರ್ ಬಸವರಾಜು, ಬಿ.ಎಸ್.ಪಿ ಪಕ್ಷದ ಅಭ್ಯರ್ಥಿ ಎಂ.ಕೃಷ್ಣಮೂರ್ತಿ, ಕರ್ನಾಟಕ ಜನತಾ ಪಕ್ಷದ ಅಭ್ಯರ್ಥಿ ಎಸ್.ನಿಂಗರಾಜು, ಕರ್ನಾಟಕ ರಾಷ್ಟ ಸಮಿತಿ ಪಕ್ಷದ ಅಭ್ಯರ್ಥಿ ಕಂದಳ್ಳಿ ಮಹೇಶ್, ಪಕ್ಷೇತರ ಅಭ್ಯರ್ಥಿಗಳಾದ ಎನ್. ಅಂಬರೀಷ್, ಬಿ.ಎಂ. ಮಹದೇವಸ್ವಾಮಿ, ಜಿ.ಡಿ. ರಾಜಗೋಪಾಲ, ಎಚ್.ಕೆ. ಸ್ವಾಮಿ, ರಾಜಕೀಯ ಪಕ್ಷಗಳ ಪ್ರತಿನಿಧಿಗಳಾದ ಎ.ಎಚ್. ನಸ್ರುಲ್ಲಾ ಖಾನ್, ಮಹೇಶ್ ಇತರರು ಇದ್ದರು.
30ಸಿಎಚ್ಎನ್.1:
ಚಿತ್ರವಿದೆ