ಪ್ರತಿನಿಧಿ ವರದಿ ಹಾಸನ
ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರನ್ನು ಬಿಡುಗಡೆ ಮಾಡುವಂತೆ ಆಗ್ರಹಿಸಿ ಜೆಡಿಎಸ್ ಪಕ್ಷದ ಕಾರ್ಯಕರ್ತರು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಪ್ರತಿಕೃತಿ ದಹಿಸಿ, ಪ್ರತಿಭಟನೆ ನಡೆಸಿ, ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.
ನಗರದ ಹೇಮಾವತಿ ಪ್ರತಿಮೆ ಬಳಿಯಿಂದ ಹೊರಟ ಪ್ರತಿಭಟನಾಕಾರರು ಎನ್.ಆರ್.ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಆಕ್ರೋಶ ವ್ಯಕ್ತಪಡಿಸಿದರು.
ಪೆನ್ಡ್ರೈವ್ ಹಂಚಿಕೆ ಪ್ರಕರಣ ಸಂಬಂಧ ಈಗಾಗಲೇ ಪ್ರಕರಣವನ್ನು ರಾಜ್ಯ ಸರ್ಕಾರ ಎಸ್ಐಟಿ ತನಿಖೆಗೆ ಆದೇಶ ಮಾಡಿರುವುದನ್ನು ಸ್ವಾಗತಿಸುತ್ತೇವೆ. ಈ ನಡುವೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಅಧಿಕಾರ ದುರ್ಬಳಕೆ ಮಾಡಿಕೊಂಡು ಮತ್ತು ಹಣ ಬಲದಿಂದ ತನಿಖೆಯಲ್ಲಿ ಹಸ್ತಕ್ಷೇಪ ಮಾಡುವುದರ ಜತೆಗೆ, ಪೆನ್ ಡ್ರೈವ್ ಹಂಚಿಕೆ ಪ್ರಕರಣವನ್ನೇ ಮುಂದಿಟ್ಟುಕೊಂಡು ದ್ವೇಷ ರಾಜಕೀಯದ ಮೂಲಕ ಜೆಡಿಎಸ್ ಪಕ್ಷ ಹಾಗೂ ನಾಯಕರನ್ನು ಹಣಿಯುವ ಷಡ್ಯಂತ್ರ ಮಾಡಿರುವುದು ಜಗಜ್ಜಾಹೀರವಾಗಿದೆ ಎಂದು ದೂರಿದರು.
ಪೆನ್ ಟ್ರೈವ್ ಹಂಚಿಕೆಯಲ್ಲಿ ಭಾಗಿಯಾಗುವ ಮೂಲಕ ಮಹಿಳೆಯರು, ಹೆಣ್ಣು ಮಕ್ಕಳ ಮಾನ ಹರಾಜಾಗುವಲ್ಲಿ ಪ್ರಮುಖ ಪಾತ್ರ ವಹಿಸಿರುವ ಡಿಸಿಎಂ ಸೇರಿದಂತೆ, ರಾಜಕೀಯ ಲಾಭಕ್ಕಾಗಿ ಪಕ್ಷದಿಂದ ಪಕ್ಷಕ್ಕೆ ಹಾರುವ ಜಾಯಮಾನ ಹೊಂದಿರುವ ಎಲ್.ಆರ್.ಶಿವರಾಮೇಗೌಡ, ಹಾಸನ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ಶ್ರೇಯಸ್ ಪಟೇಲ್, ಕಾರ್ತಿಕ್, ಹೊಳೆನರಸೀಪುರ ಪುರಸಭೆ ಮಾಜಿ ಅಧ್ಯಕ್ಷ ಪುಟ್ಟರಾಜು ಅವರ ವಿರುದ್ಧವು ಮಾನಹಾನಿ ಪ್ರಕರಣ ದಾಖಲಿಸಿ, ಸೂಕ್ತ ತನಿಖೆ ನಡೆಸಿ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.
ಎಸ್ಐಟಿ ತನಿಖೆ ಹಾದಿ ತಪ್ಪುತ್ತಿರುವುದರಿಂದ ಪ್ರಕರಣದ ಸತ್ಯಾಸತ್ಯತೆ ಹೊರ ಬರುವುದು ಅನುಮಾನವಾಗಿದ್ದು, ಕೂಡಲೇ ಇದನ್ನು ಹೈಕೋರ್ಟ್ ಅಥವಾ ಸುಪ್ರೀಂಕೋರ್ಟ್ನ ಹಾಲಿ ನ್ಯಾಯಮೂರ್ತಿಗಳಿಂದ ತನಿಖೆ ನಡೆಸಲು ಆದೇಶ ಮಾಡಬೇಕು. ಇಲ್ಲವೇ ಸಿಬಿಐ ತನಿಖೆಗೆ ವಹಿಸಬೇಕೆಂದು ಒತ್ತಾಯಿಸಿದರು.
ಜಿಲ್ಲಾಧ್ಯಕ್ಷ ಕೆ.ಎಸ್.ಲಿಂಗೇಶ್, ಶಾಸಕರಾದ ಸಿ.ಎನ್.ಬಾಲಕೃಷ್ಣ, ಎ.ಮಂಜು, ಮಾಜಿ ಶಾಸಕ ಎಚ್.ಕೆ. ಕುಮಾರಸ್ವಾಮಿ, ಮುಖಂಡರಾದ ಎನ್.ಆರ್.ಸಂತೋಷ್, ಎಸ್.ದ್ಯಾವೇಗೌಡ, ಕೆ.ಎಸ್.ಮಂಜೇಗೌಡ, ತೋಚ.ಅನಂತ ಸುಬ್ಬರಾಯ, ಮಾಧ್ಯಮ ವಕ್ತಾರ ಹೊಂಗೆರೆ ರಘು, ಗಿರೀಶ್, ಸಿ.ಆರ್.ಶಂಕರ್, ಸುಮಾ, ಪ್ರೇಮಮ್ಮ ಇತರರಿದ್ದರು.