ಪ್ರತಿನಿಧಿ ವರದಿ ಚಾಮರಾಜನಗರ
ಜಿಲ್ಲೆಯ ಪೌರ ಕಾರ್ಮಿಕರಿಗೆ ಅಗತ್ಯ ಮೂಲ ಸೌಕರ್ಯಗಳನ್ನು ಕಲ್ಪಿಸಬೇಕು ಎಂದು ಕರ್ನಾಟಕ ರಾಜ್ಯ ಪೌರ ಕಾರ್ಮಿ ಕರ ಸಂಘದ ಅಧ್ಯಕ್ಷ ಡಿ.ಆರ್.ರಾಜು ಜಿಲ್ಲಾಡಳಿತ ವನ್ನು ಆಗ್ರಹಿಸಿದರು.
ಜಿಲ್ಲಾ ವ್ಯಾಪ್ತಿಯ ಐದು ತಾಲೂಕುಗಳ ಗ್ರಾಮೀಣ, ನಗರ ಸ್ಥಳೀಯ ಸಂಸ್ಥೆಗಳಲ್ಲಿ ಸ್ವಚ್ಛತಾಗಾರರು ತಮ್ಮ ಸೇವೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಆದರೆ ಈ ವರ್ಗವು ಸಾಮಾಜಿಕ, ಶೈಕ್ಷಣಿಕ, ಆರ್ಥಿಕವಾಗಿ ತೀರಾ ಹಿಂದುಳಿದಿದೆ. ಆದರೆ ಇವರಿಗೆ ಸರ್ಕಾರದ ಯಾವುದೇ ಸೌಲಭ್ಯಗಳು ಸರಿಯಾದ ರೀತಿಯಲ್ಲಿ ದೊರೆಯುತ್ತಿಲ್ಲ ಎಂದು ಸುದ್ದಿಗೋಷ್ಟಿಯಲ್ಲಿ ತಿಳಿಸಿದರು.
ಸರ್ಕಾರದ ಆದೇಶದಂತೆ ಜನಸಂಖ್ಯಾ ಆಧಾರದ ಮೇಲೆ ಸ್ವಚ್ಛತಾಗಾರರನ್ನು ನೇಮಿಸಿಕೊಳ್ಳುವುದು ಅನಿವಾರ್ಯವಾಗಿದೆ. ನಗರ ಮತ್ತು ಪಟ್ಟಣ ಪ್ರದೇಶಗಳಲ್ಲಿ ಅದೇಷ್ಟೋ ಸಫಾಯಿ ಕರ್ಮಚಾರಿ ಕುಟುಂಬಗಳು ಒಂದೇ ಮನೆಯಲ್ಲಿ 2-3 ಕುಟುಂಬಗಳು ವಾಸಮಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡುವವರಿಗೆ ಕನಿಷ್ಠ ವೇತನ ಮತ್ತು ಸೇವಾ ಭದ್ರತೆಯನ್ನು ನೀಡಬೇಕಾಗಿದೆ ಎಂದರು.
ಪೌರಕಾರ್ಮಿಕರಾದ ಈ ವರ್ಗಕ್ಕೆ ಮೂಲ ಸೌಕರ್ಯಗಳಾದ ನಿವೇಶನ ಮತ್ತು ಮನೆಗಳನ್ನು ಅರ್ಹರಿಗೆ ನೀಡಬೇಕು. ಅಲ್ಲದೆ ಆಗಿಂದಾಗ್ಗೆ ಪೌರಕಾರ್ಮಿಕರನ್ನು ನಿಂದಿಸಿ, ಹಲ್ಲೆ ನಡೆಸುವವರ ವಿರುದ್ದ ಕಾನೂನು ಕ್ರಮ ಕೈಗೊಂಡು, ಸೂಕ್ತ ಭದ್ರತೆಯನ್ನು ಕಲ್ಪಿಸಿಕೊಡಬೇಕೆಂದು ಒತ್ತಾಯಿಸಿದರು.
ಸಂಘದ ಜಿಲ್ಲಾಧ್ಯಕ್ಷ ಆರ್ಮುಗಂ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ವೈ.ಕೆ. ಆರ್.ಪಳನಿ, ಜಿಲ್ಲಾ ಉಪಾಧ್ಯಕ್ಷ ಕುಮಾರ್, ನಾಗರಾಜು, ತಂಗಮ್ಮ, ಸಂಗೀತ, ರಾಧಾ ಇದ್ದರು.